ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕನಸಿನ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದ ನಡುವೆ ರಾಜ್ಯ ಸರ್ಕಾರ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರ ಮಾಡಿಕೊಂಡಿತ್ತು. ಬಳಿಕ ಮಸೂದೆಯ ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಆದರೆ, ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಬಗ್ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಇದರಿಂದ ಡಿ ಕೆ ಶಿವಕುಮಾರ್ ಅವರಿಗೆ ಸದ್ಯಕ್ಕೆ ಹಿನ್ನಡೆಯಾಗಿದ್ದು, ರಾಜಭವನ ಮತ್ತು ಸರಕಾರದ ನಡುವಿನ ಸಂಘರ್ಷದ ಮತ್ತೊಂದು ಅಧ್ಯಾಯ ಆರಂಭವಾಗುತ್ತದೆಯೇ ಕಾದು ನೋಡಬೇಕು.
ಬೆಂಗಳೂರು ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯಾಗುತ್ತಿದ್ದು, ಈ ಅಭಿವೃದ್ಧಿಗೆ ಅನುಗುಣವಾಗಿ ಬೆಂಗಳೂರಿನ ಆಡಳಿತವನ್ನು ವಿಕೇಂದ್ರೀಕರಣ ಮಾಡಬೇಕು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಂಗಡಣೆ ಮಾಡಬೇಕು ಎನ್ನುವು ವಿಚಾರವು ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಲೇ ಇದೆ. ಇದೀಗ ಬೆಂಗಳೂರನ್ನು ಏಳು ಭಾಗವಾಗಿ ಅಥವಾ ಇರುವ ಒಂದು ಪಾಲಿಕೆಯನ್ನು 7 ಪಾಲಿಕೆಗಳನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ. ಇದಕ್ಕೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಅನ್ನು ಸರ್ಕಾರ ಪರಿಚಯಿಸಿದೆ.