ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗ ಆತ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬಹುದೇ ಹೇಗೆ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಿ ಎಂದು ಎಸ್ಐಟಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಮಹಿಳೆಯೊಬ್ಬರ ಅಪಹರಣ ಪ್ರಕರಣದ ಆರೋಪಿಯಾಗಿ ಸದ್ಯ ಎಸ್ಐಟಿ ಬಂಧನದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿರುವ ನಿಯಮಿತ ಜಾಮೀನು ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್–82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ವಿಚಾರಣೆ ನಡೆಸಿ, ಮೇಲಿನ ಆದೇಶ ನೀಡಿದರು.
ವಿಚಾರಣೆ ವೇಳೆ ಅರ್ಜಿದಾರ ರೇವಣ್ಣ ಪರ ಹಾಜರಾಗಿದ್ದ ಹೈಕೋರ್ಟ್ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ಆರೋಪಿಗೆ ಜಾಮೀನು ನೀಡಲು ಸಾಧ್ಯವಿರುವ ಕಾನೂನಿನ ಅಂಶಗಳು ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಪೂರ್ವ ನಿದರ್ಶನಗಳನ್ನು ನ್ಯಾಯಾಧೀಶರಿಗೆ ವಿವರಿಸಿದರು.
ವಾದ ಆಲಿಸಿದ ನ್ಯಾಯಾಧೀಶರು, ‘ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗ ಆತ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬಹುದೇ ಹೇಗೆ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಿ‘ ಎಂದು ಎಸ್ಐಟಿಗೆ ಆದೇಶಿಸಿ ನೋಟಿಸ್ ಜಾರಿಗೊಳಿಸಿದರು.
ಮುಂದಿನ ಅರ್ಜಿ ವಿಚಾರಣೆಯನ್ನು ಬುಧವಾರ (ಮೇ 8) ಬೆಳಗ್ಗೆ 11 ಗಂಟೆಗೆ ಮುಂದೂಡಿದರು. ಅರ್ಜಿದಾರ ರೇವಣ್ಣ ಪರ ಹೈಕೋರ್ಟ್ ವಕೀಲ ಪವನ್ ಸಾಗರ್ ವಕಾಲತ್ತು ವಹಿಸಿದ್ದಾರೆ.