ವಿಪಕ್ಷ ನಾಯಕ ಆರ್.ಅಶೋಕ್ ಗೆ ಬುದ್ದಿ ಭ್ರಮಣೆಯಾಗಿದೆ. ಧರ್ಮಸ್ಥಳ ಆಸ್ತಿ ಹೊಡೆಯುವುದು ಅವರ ಪಕ್ಷದ ಆಂತರಿಕ ರಾಜಕಾರಣ. ಇದು ಅವರ ಪಕ್ಷದ ಆಂತರಿಕ ವಿಚಾರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಮಾಗಡಿಯಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಆಸ್ತಿ ಒಡೆಯಲು ಸರ್ಕಾರ ಮುಂದಾಗಿದೆ ಎನ್ನುವ ಆರ್.ಅಶೋಕ್ ಆರೋಪದ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು.
ಮಾಗಡಿಗೆ ಶ್ರೀರಂಗ ಕುಡಿಯುವ ನೀರಿನ ಯೋಜನೆ ನೀಡಿದ್ದು ಕಾಂಗ್ರೆಸ್ ಸರ್ಕಾರ. ಈಗ ಸತ್ತೇಗಾಲದಿಂದ ಕ್ಷೇತ್ರದ 44 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ ಯೋಜನೆ, 159 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ, ಮಂಚನಬೆಲೆ ಅಣೆಕಟ್ಟು ಕೆಳಭಾಗದ ಅಭಿವೃದ್ದಿಗೆ ರೂ.13 ಕೋಟಿ, ರೂ.35 ಕೋಟಿ ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಸೇರಿದಂತೆ ನೀರಾವರಿ ಇಲಾಖೆಯಿಂದ ಕ್ಷೇತ್ರದ ಅಭಿವೃದ್ದಿಗೆ ರೂ.100 ಕೋಟಿಗೂ ಅಧಿಕ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
“ಮಾಗಡಿ ಯೋಜನಾ ಪ್ರಾಧಿಕಾರದಿಂದ ಗೌರಮ್ಮ ಕೆರೆ ಅಭಿವೃದ್ಧಿಗೆ ರೂ.20 ಕೋಟಿ ನೀಡಲಾಗಿದೆ. ಇ ಸ್ವತ್ತನ್ನು 1200 ಜನರಿಗೆ ವಿತರಣೆ ಮಾಡಲಾಗಿದ್ದು ಮಿಕ್ಕವರಿಗೂ ಶೀಘ್ರದಲ್ಲೇ ವಿತರಣೆ ಮಾಡಲಾಗುವುದು. ಇಂತಹ ನೂರಾರು ಕೆಲಸಗಳನ್ನು ನಿಮಗಾಗಿ ನೀಡಿದ್ದೇವೆ. ಸುಮ್ಮನಹಳ್ಳಿಯಿಂದ ತಾವರೆಕೆರೆವರೆಗೆ ಮೆಟ್ರೋ ಮಾರ್ಗ ವಿಸ್ತರಣೆಯಾಗಲಿದೆ. ಇದರಿಂದ ನಿಮ್ಮ ಕ್ಷೇತ್ರಕ್ಕೆ ಹೆಚ್ಚು ಲಾಭವಾಗಲಿದೆ” ಎಂದು ತಿಳಿಸಿದರು.
“ಆರೋಗ್ಯ ಕ್ಷೇತ್ರದಿಂದ ರೂ.40 ಕೋಟಿ ವೆಚ್ಚದ ಕಾಮಗಾರಿಗೆ ಆರೋಗ್ಯ ಸಚಿವರು ಮತ್ತು ನೂತನ ಬಸ್ ನಿಲ್ದಾಣ ಹಾಗೂ ಡಿಪೋ ಬಗ್ಗೆ ಸಾರಿಗೆ ಸಚಿವರು ವಾಗ್ದಾನ ನೀಡಿದ್ದಾರೆ. ನಾವು ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಎನ್ನುವುದಕ್ಕೆ ಕ್ಷೇತ್ರದಲ್ಲಿ ಕೈಗೆತ್ತಿಕೊಂಡಿರುವ ಕೆಲಸಗಳೇ ಸಾಕ್ಷಿ” ಎಂದರು.
ಕನಕಪುರದಂತೆ ಮಾಗಡಿಯೂ ನಮ್ಮ ಕ್ಷೇತ್ರ, ನಿಜವಾದ ಬಂಡೆ ಬಾಲಕೃಷ್ಣ
“ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಆದರೆ ಕೆಂಪು ಬಂಡೆ ನಿಮ್ಮ ಬಾಲಕೃಷ್ಣ. ಇವರು ಗಟ್ಟಿಯಾಗಿ ಬಂಡೆಯಂತೆ ಕುಳಿತುಕೊಂಡು ಕ್ಷೇತ್ರದ ಕೆಲಸಗಳನ್ನು ಮಾಡಿಸಿಕೊಳ್ಳುತ್ತಾರೆ. ಎಲ್ಲೇ ಹೋದರು ಕ್ಷೇತ್ರದ ಬಗ್ಗೆ ಅರ್ಜಿ ಹಿಡಿದುಕೊಂಡು ಬರುತ್ತಾರೆ. ಕ್ಷೇತ್ರದ ಜನರ ಬಗ್ಗೆ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಮಾಗಡಿ ಕ್ಷೇತ್ರ ಬಾಲಕೃಷ್ಣ ಅವರದ್ದಲ್ಲ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರ ಸ್ವಂತ ಕ್ಷೇತ್ರವಿದ್ದಂತೆ. ಕನಕಪುರದಲ್ಲಿ ಯಾವ ರೀತಿ ಕೆಲಸ ಮಾಡುತ್ತಾ ಇದ್ದೇವೋ ಅದೇ ರೀತಿ ಇಲ್ಲಿಯೂ ಕೆಲಸ ಮಾಡುತ್ತೇವೆ”ಎಂದು ಹೇಳಿದರು.
“ಕೆಲವರು ರಾಮನಗರ ಜಿಲ್ಲೆ ಎಂದು ಹೇಳುತ್ತಿದ್ದರು. ಇದು ಬೆಂಗಳೂರು ದಕ್ಷಿಣ ಜಿಲ್ಲೆ. ಶಾಸಕರಾದ ಹುಲಿಕಟ್ಟೆ ಬಾಲಕೃಷ್ಣ, ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್, ಎಚ್.ಡಿ ಕುಮಾರಸ್ವಾಮಿ ಹೀಗೆ ನಮ್ಮ ಗುರುತನ್ನು ಅಳಿಸಲು ಸಾಧ್ಯವಿಲ್ಲ. ಅದೇ ರೀತಿ ನಾವು ಬೆಂಗಳೂರು ಜಿಲ್ಲೆಯವರಾದ ನಮ್ಮ ಅಸ್ಮಿತೆಯನ್ನು ಬಿಟ್ಟು ಕೊಡಲು ಸಾಧ್ಯವೇ?” ಎಂದರು ಪ್ರಶ್ನಿಸಿದರು.
“ನಾನು ಹಿಂದೆ ಬೆಂಗಳೂರಿನ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದೆ. ಹೀಗಿರುವಾಗ ನಮ್ಮ ಇತಿಹಾಸ ಕಳೆದುಕೊಳ್ಳಲು ಸಾಧ್ಯವೇ? ಜಿಲ್ಲೆಯ ಹೆಸರು ಬದಲಾವಣೆಯಿಂದ ಜನರ ಆಸ್ತಿ ಮೌಲ್ಯ ಹೆಚ್ಚಾಗಲಿದೆ. ಬೆಂಗಳೂರನ್ನು ಅಂತರರಾಷ್ಟ್ರೀಯ ನಗರವನ್ನಾಗಿ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾಡಿದ್ದೇವೆ, ಮೆಟ್ರೋ ಸುರಂಗಮಾರ್ಗ, ಡಬಲ್ ಡೆಕ್ಕರ್ ಹೀಗೆ ಹಲವಾರು ಯೋಜನೆ ರೂಪಿಸಿದ್ದೇವೆ” ಎಂದರು.
“ಹೈ ವೋಲ್ಟೇಜ್ ಡಿಸ್ಟ್ರಿಬ್ಯೂಷನ್ ಸಿಸ್ಟಮ್ ಯೋಜನೆಯ ಅಡಿ ಒಬ್ಬ ಅಥವಾ ಇಬ್ಬರು ರೈತರಿಗೆ ಟ್ರಾನ್ಸ್ ಫಾರ್ಮರ್ಸ್ ಗಳನ್ನು ಹಂಚಿದ ಇತಿಹಾಸ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸಲ್ಲುತ್ತದೆ. ಇಡೀ ದೇಶದಲ್ಲಿಯೇ ಈ ಯೋಜನೆ ಗಮನ ಸೆಳೆದಿತ್ತು. ಯಾವ ಕ್ಷೇತ್ರದಲ್ಲಿಯೂ ಆಗದ ಕೆಲಸ ಇಲ್ಲಿ ಆಗಿದೆ. ಟ್ರಾನ್ಸ್ ಫಾರ್ಮರ್ ಗಳನ್ನು ದುರಸ್ಥಿಗೊಳಿಸಲು ಈ ಹಿಂದೆ 30-40 ಸಾವಿರ ಲಂಚ ಕೇಳುತ್ತಿದ್ದರು. ಆದರೆ ಈಗ ರೈತರೇ ಇದನ್ನು ನಿರ್ವಹಣೆ ಮಾಡುವ ವ್ಯವಸ್ಥೆಯನ್ನು ನಾವು ಪರಿಚಯಿಸಿದೆವು” ಎಂದರು.