ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ ಬಳಿಕ ಈಗ ವಸತಿ ಯೋಜನೆಯಲ್ಲೂ ಮುಸ್ಲಿಂ ಸಮುದಾಯಕ್ಕೆ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ.
ತಮ್ಮ ಸಮುದಾಯಕ್ಕೆ ವಸತಿ ಯೋಜನೆಯಲ್ಲೂ ಮೀಸಲಾತಿಯನ್ನು ಹೆಚ್ಚಿಸುವಂತೆ ವಸತಿ ಇಲಾಖೆ ಸಚಿವ ಜಮೀರ್ ಅಹಮದ್ ಸರ್ಕಾರದ ಮುಂದೆ ಪ್ರಸ್ತಾಪ ಇಟ್ಟಿದ್ದರು. ಇದೀಗ ಈ ಪ್ರಸ್ತಾವನೆಯನ್ನು ಇಂದಿನ ಸಚಿವ ಸಂಪುಟ ಅಂಗೀಕರಿಸಿದೆ.
ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಏರಿಸಲು ಸಚಿವ ಸಂಪುಟ ಅಸ್ತು ಎಂದಿದೆ. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜಾರಿಗೊಳಿಸುವ ಎಲ್ಲ ವಸತಿ ಯೋಜನೆಗಳಿಗೆ ಈ ಮೀಸಲಾತಿ ಅನ್ವಯಿಸುತ್ತದೆ.
ಸಚಿವ ಸಂಪುಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕಾನೂನು ಸಚಿವ ಹೆಚ್ ಕೆ ಪಾಟೀಲ್, “ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ಯೋಜನೆ ಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ಮಾಡಲಾಗಿದ್ದು, ಶೇಕಡಾ 10ರಿಂದ ಶೇ.15ಕ್ಕೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ” ಎಂದು ತಿಳಿಸಿದರು.
ಮುಸ್ಲಿಮರಿಗೆ ಮಾತ್ರವಲ್ಲ ಅಲ್ಪಸಂಖ್ಯಾತರಿಗೂ ಅನ್ವಯ
“ಸಾಚಾರ್ ಕಮಿಟಿ ವರದಿಯನ್ನೂ ಕೂಡ ಈಗ ಕೇಂದ್ರ ಪರಿಗಣಿಸುತ್ತಿದೆ. ಕೇಂದ್ರದ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ. ನಿಯಮಗಳಿಗೆ ಕ್ಯಾಬಿನೆಟ್ ಅನುಮೋದನೆ ಸಾಕು. ಇದು ಎಲ್ಲ ಅಲ್ಪಸಂಖ್ಯಾತರಿಗೂ ಅನ್ವಯವಾಗುತ್ತದೆ. ಮುಸ್ಲಿಂ, ಜೈನರು, ಕ್ರಿಶ್ಚಿಯನ್ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳೂ ಕೂಡ ಇವೆ” ಎಂದರು.
“ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವು ಉತ್ತರ ಕೊಡಲ್ಲ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯಗಳನ್ನು ಕೊಡಬೇಕು ಎಂಬುದು ಸರ್ಕಾರದ ಉದ್ದೇಶ” ಎಂದು ಹೇಳಿದರು.