ಕೇಂದ್ರ ಸಚವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎನ್ನುತ್ತಾರೆ. ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಸೋಮವಾರ ಮಾತನಾಡಿ, “ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ನಲ್ಲಿ ಆ ಬಗ್ಗೆ ಪ್ರಸ್ತಾಪವೇ ಇಲ್ಲ” ಎಂದರು.
“15ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5,495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ಗೆ 3,000ಕೋಟಿ ಕೊಡುವುದಾಗಿ ಹೇಳಿದ್ದರು. ಅದೂ ಇಲ್ಲ. 3,000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ? ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ?” ಎಂದು ಕೇಳಿದರು.
“ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸ ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ” ಎಂದರು
“ಮೈಸೂರು ಅಥವಾ ಹಾಸನಕ್ಕೆ ಐಐಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು. ಅದೂ ಕೂಡ ಆಗಿಲ್ಲ. ವಾಸ್ತವ ಹೀಗಿದ್ದರೂ ಅನ್ಯಾಯವಾಗಿಲ್ಲ ಎನ್ನುತ್ತಾರೆ. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು, ಈಗಲೂ ಸುಳ್ಳು ಹೇಳಿದ್ದಾರೆ ಅಷ್ಟೇ” ಎಂದು ಕುಟುಕಿದರು.
ಕರ್ನಾಟಕ ಭ್ರಷ್ಟ ರಾಜ್ಯವಲ್ಲ
“ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ ಭ್ರಷ್ಟ ರಾಜ್ಯ ಎಂದು ಅವರು ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ ಎಂದಿದ್ದೇವೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತಿದೆ” ಎಂದು ಹೇಳಿದರು.
ಬಿಜೆಪಿ ಪಾದಯಾತ್ರೆ: ರಾಜಕೀಯ ಅಷ್ಟೇ
ವಾಲ್ಮೀಕಿ ಮತ್ತು ಮುಡಾ ಹಗರಣದ ಬಗ್ಗೆ ಪ್ರತಿಭಟಿಸಿ, “ಬಿಜೆಪಿಯವರು ಪಾದಯಾತ್ರೆ ಮಾಡಲಿ. ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು, ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇ.ಡಿ ಕಡೆಯಿಂದ ತನಿಖೆ ಮಾಡಿಸುತ್ತಿದ್ದಾರೆ” ಎಂದರು.
ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?
ಬಿಜೆಪಿ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ. ಕೆಲವು ಪ್ರಕರಣಗಳ ತನಿಖೆ ನಡೆಯುತ್ತಿದೆ. ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ.ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ” ಎಂದು ಕಿಡಿಕಾರಿದರು.
ದೆಹಲಿ ಪ್ರವಾಸ
“ಸರ್ಕಾರ ಹಾಗೂ ಪಕ್ಷದ ಬಗ್ಗೆ ಚರ್ಚೆ ಮಾಡಲು ವರಿಷ್ಠರು ಕರೆದಿದ್ದಾರೆ. ಹಾಗಾಗಿ ನಾನೂ ಮತ್ತು ಉಪಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡುತ್ತಿದ್ದೇವೆ” ಎಂದು ಇದೇ ವೇಳೆ ತಿಳಿಸಿದರು.