Homeಕರ್ನಾಟಕವಿಜಯೇಂದ್ರನ ಅಹಂಕಾರಕ್ಕೆ, ಧೋರಣೆಗೆ ನನ್ನ ಧಿಕ್ಕಾರ: ಸಂಸದ ಡಾ. ಕೆ ಸುಧಾಕರ್‌ ಕಿಡಿ

ವಿಜಯೇಂದ್ರನ ಅಹಂಕಾರಕ್ಕೆ, ಧೋರಣೆಗೆ ನನ್ನ ಧಿಕ್ಕಾರ: ಸಂಸದ ಡಾ. ಕೆ ಸುಧಾಕರ್‌ ಕಿಡಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಯಾವುದೇ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಅವರು ಪಕ್ಷವನ್ನು ಅವನತಿಗೆ ಕೊಂಡೊಯ್ಯುವ ಜೊತೆಗೆ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್‌ ಗಂಭೀರವಾಗಿ ಆರೋಪಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ” ಬಿಜೆಪಿ ಪಾಲಿಗೆ ಮರಳುಭೂಮಿಯಾಗಿರುವ ಈ ಪ್ರದೇಶದಲ್ಲಿ ಪಕ್ಷವನ್ನು ಬೆಳೆಸಲು ಶ್ರಮಿಸಿದ್ದೇನೆ. ಆದರೆಮ ನನ್ನನ್ನೇ ಸಮಾಧಿ ಮಾಡಲು ವಿಜಯೇಂದ್ರ ಪ್ರಯತ್ನ ಮಾಡಿದ್ದಾರೆ. ವಿಜಯೇಂದ್ರನನ್ನು ಬದಲಿಸಲು ವರಿಷ್ಠರಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದರು.

“ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ ಎಂಬ ಕಾರಣಕ್ಕೆ ನಾನು 2019ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದೆ. ಎಷ್ಟೇ ಅಪಮಾನವಾದರೂ, ರಾಜಕೀಯವಾಗಿ ತುಳಿಯಲು ಯತ್ನಿಸಿದರೂ ಪಕ್ಷವನ್ನು ಬಿಡಲಿಲ್ಲ. ನಂತರ ನಾನು ಸೋತರೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಸಹಕಾರದಿಂದ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ಪಕ್ಷದ ಪದಾಧಿಕಾರಿಗಳ ಆಯ್ಕೆ ನಡೆಯುವಾಗ ಎಲ್ಲರ ಅಭಿಪ್ರಾಯ ಕೇಳಬೇಕು. ಆದರೆ ಏಕಚಕ್ರಾಧಿಪತ್ಯ ಎನ್ನುವಂತೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನನ್ನ ಮಾತೇ ನಡೆಯಬೇಕೆಂಬಂತೆ ವರ್ತಿಸಿದ್ದಾರೆ. ‘ಜೀ ಹುಜೂರ್‌, ಯೆಸ್‌ ಬಾಸ್‌’ ಎನ್ನುವವರನ್ನು ಪದಾಧಿಕಾರಿಗಳಿಗೆ ನೇಮಕ ಮಾಡಲಾಗಿದೆ” ಎಂದು ದೂರಿದರು.

“ವಿಜಯೇಂದ್ರ ಅವರ ಧೋರಣೆ ಅನೇಕ ಮುಖಂಡರಿಗೆ ನೋವು ತಂದಿದೆ. ವಿಜಯೇಂದ್ರ ಮುಖ್ಯಮಂತ್ರಿಯಾಗಿದ್ದಾರೋ ಅಥವಾ ಅದಕ್ಕೂ ಮೇಲಿನ ಹುದ್ದೆಯಲ್ಲಿದ್ದಾರೆಯೇ ಗೊತ್ತಿಲ್ಲ. ನಾನು ಎಂಟು ಕ್ಷೇತ್ರಗಳನ್ನು ಪ್ರತಿನಿಧಿಸುವ ಸಂಸತ್‌ ಸದಸ್ಯನಾಗಿದ್ದೇನೆ. ಪದಾಧಿಕಾರಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾತನಾಡಲು ಬಿ.ವೈ.ವಿಜಯೇಂದ್ರ ಅವರಿಗೆ ಫೋನ್‌ ಕರೆ ಮಾಡಿದರೆ ಸ್ವೀಕರಿಸಲಿಲ್ಲ. ಭೇಟಿ ಮಾಡಲು ಸಮಯ ಕೂಡ ನಿಗದಿ ಮಾಡಲಿಲ್ಲ. ಇದೇನು ವಿಜಯೇಂದ್ರ ಅವರ ಸ್ವಂತ ಆಸ್ತಿಯೇ? ಬಯಲುಸೀಮೆಯ ಭಾಗಕ್ಕೆ ಬಂದು ಒಂದು ಸೀಟು ಗೆಲ್ಲಲಿ” ಎಂದು ಸವಾಲು ಹಾಕಿದರು.

“ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಕೆಲಸ ಮಾಡಿದವರನ್ನು ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಮಾಡುತ್ತಾರೆ. ಗೋವಿಂದ ಕಾರಜೋಳ ಅವರಿಗೆ ಹೊಡೆಯಲು ಬಂದವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡುತ್ತಾರೆ. ಯಾವುದೇ ಮುಖಂಡರಿಗೆ ಇವರು ಗೌರವ ನೀಡುತ್ತಿಲ್ಲ. ಪಕ್ಷಕ್ಕಾಗಿ ಅಹರ್ನಿಶಿಯಾಗಿ ದುಡಿದವರನ್ನು ಕೈ ಬಿಟ್ಟು, ವಿರುದ್ಧವಾಗಿ ಕೆಲಸ ಮಾಡಿದವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲಾಗಿದೆ” ಎಂದರು.

“ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಅವರ ಬಳಿಗೆ ಹೋಗಿ ಎಲ್ಲವನ್ನೂ ಹೇಳುತ್ತೇನೆ. ವಿಜಯೇಂದ್ರ ಯಾವ ರೀತಿ ಪಕ್ಷ ಸಂಘಟಿಸುತ್ತಿದ್ದಾರೆ ಎಂದು ವಾಸ್ತವಾಂಶ ತಿಳಿಸುತ್ತೇನೆ. ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರಿಗೆ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ಯಡಿಯೂರಪ್ಪ ಅವರ ನಾಯಕತ್ವವೇ ಬೇರೆ. ಅವರೊಂದಿಗೆ ನಾನು ಕೆಲಸ ಮಾಡಿದ್ದೇನೆ. ತಂದೆಯವರ ಯಾವುದೇ ಗುಣ ವಿಜಯೇಂದ್ರ ಅವರಿಗೆ ಬಂದಿಲ್ಲ. ನಾನು ಬಸವರಾಜ ಬೊಮ್ಮಾಯಿ ಅವರೊಂದಿಗೆ ಕೆಲಸ ಮಾಡಿದ್ದೇನೆ ಎಂಬ ಕಾರಣಕ್ಕೆ ನನ್ನ ಮೇಲೆ ದ್ವೇಷ ಕಾರುತ್ತಿದ್ದಾರೆ” ಎಂದು ಆರೋಪಿಸಿದರು.

“ನಾನು ಬಿಜೆಪಿಗೆ ಬಂದಿದ್ದಕ್ಕೆ ನನಗೆ ಈ ರೀತಿಯ ಪರಿಸ್ಥಿತಿಯನ್ನು ತಂದಿದ್ದಾರೆ. ಅನೇಕ ಜಿಲ್ಲೆಗಳಲ್ಲಿ ಇದೇ ರೀತಿ ನಡೆದಿದೆ. ಅನೇಕರು ಆ ಬಗ್ಗೆ ಮಾತಾಡುತ್ತಿಲ್ಲ. ವಿಜಯೇಂದ್ರ ಪಕ್ಷವನ್ನು ಅವನತಿಗೆ ಕೊಂಡೊಯ್ಯುವ ಕೆಲಸ ಮಾಡುತ್ತಿದ್ದಾರೆ. ಇವರ ಅಹಂಕಾರಕ್ಕೆ, ಧೋರಣೆಗೆ ನನ್ನ ಧಿಕ್ಕಾರ” ಎಂದು ಕಟುವಾಗಿ ಮಾತನಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments