ಡೆಂಘೀ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನ ಯಲಹಂಕದಲ್ಲಿ ಶುಕ್ರವಾರ ಡೆಂಘೀ ಹಾಟ್ ಸ್ಪಾಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.
ಯಲಹಂಕದ ಶಿಂಗೇನಹಳ್ಳಿಯಲ್ಲಿ ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಘೀ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಘೀ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನೀರಿಕ್ಷೆ ಇದೆ” ಎಂದು ಹೇಳಿದರು.
“ಕೆಲವು ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಘೀ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ ಶೇ.50 ರಷ್ಟು ಡೆಂಘೀ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಘೀ ಹತೋಟಿಗೆ ತರುವಂತೆ ಸೂಚಿಸಿದ್ದೇನೆ” ಎಂದರು.
“10 ಜಿಲ್ಲೆಗಳ ಡೆಂಘೀ ಹಾಟ್ ಸ್ಪಾಟ್ಗಳಿಗೆ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನ ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್ ಸ್ಪಾಟ್ಗಳಿಗೆ ಭೇಟಿ ನೀಡಿ ಡೆಂಘೀ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ. ಎರಡಕ್ಕಿಂತ ಹೆಚ್ಚು ಡೆಂಘೀ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಘೀ ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತಿದೆ” ಎಂದು ಹೇಳಿದರು.
ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ
“ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ. ರಾಜ್ಯದಲ್ಲಿ ನಿಪಾ ವೈರಸ್ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ” ಎಂದು ತಿಳಿಸಿದರು.
“ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಕ್ಕೆ ತೆರಳುವುದು ಬೇಡ. ರಾಜ್ಯದಲ್ಲಿ ಇತ್ತಿಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಪಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನ ಅನುಸರಿಸಲಿದೆ” ಎಂದರು.