ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಕೊಡುಗೆ ಶೂನ್ಯ. ಮುಖ್ಯಮಂತ್ರಿ ಆಗಿದ್ದವರು ಪ್ರತಿನಿಧಿಸಿದ ಈ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎಂದು ಎಂದು ಸಚಿವ ಜಮೀರ್ ಅಹಮದ್ ಖಾನ್ ಆರೋಪಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರ ಶಿಗ್ಗಾಂವಿ, ಜಕ್ಕನಗಟ್ಟಿ, ಕಾರಡಗಿ, ಸವನಣೂರು, ಬಂಕಾಪುರ ಭಾಗದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, “ರಾಜ್ಯದ ಪಟ್ಟಣದ ರಸ್ತೆ, ಗ್ರಾಮಗಳ ಪರಿಸ್ಥಿತಿ ನೋಡಿದರೆ ಬಸವರಾಜ ಬೊಮ್ಮಾಯಿ ಎಷ್ಟರ ಮಟ್ಟಿಗೆ ಅಭಿವೃದ್ಧಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ. ತಂದೆಯ ಕೈಲಿ ಆಗದ ಅಭಿವೃದ್ಧಿ ಮಗನ ಕೈಲಿ ಸಾಧ್ಯವಾ” ಎಂದು ಪ್ರಶ್ನೆ ಮಾಡಿದರು.
“ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಬಡವರಿಗೆ ಮನೆ ಕೊಡುವ ಕೆಲಸ ಮಾಡಿಲ್ಲ. ಅವರ ಅವಧಿಯಲ್ಲಿ ಬಡವರಿಗೆ ಮನೆ ಕೊಟ್ಟಿದ್ದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ” ಎಂದು ಸವಾಲು ಹಾಕಿದರು.
“ಬಿಜೆಪಿಯವರಿಗೆ ಅಭಿವೃದ್ಧಿ ಬೇಕಿಲ್ಲ. ಹಿಂದೂ ಮುಸ್ಲಿಂ ಹೆಸರಿನಲ್ಲಿ ಮತ ಪಡೆಯುವುದು. ಜನರನ್ನು ಪ್ರಚೋದಿಸಿ, ತಪ್ಪು ದಾರಿಗೆ ಎಳೆದು ರಾಜಕೀಯ ಲಾಭ ಪಡೆದುಕೊಳ್ಳುವುದು ಅವರ ಹವ್ಯಾಸ” ಎಂದು ಟೀಕಿಸಿದರು.
“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದ ನಂತರ ಕಾಂಗ್ರೆಸ್ ಪಕ್ಷ ಕೊಟ್ಟಿದ್ದ ಐದು ಗ್ಯಾರಂಟಿ ಭರವಸೆ ಈಡೇರಿದೆ. ಆರನೇ ಗ್ಯಾರಂಟಿ ಯಾಗಿ 2.30 ಲಕ್ಷ ಮನೆ ಬಡವರಿಗೆ ಹಂಚುವ ಕ್ರಾಂತಿಕಾರಕ ತೀರ್ಮಾನ ಕೈಗೊಂಡಿದೆ” ಎಂದು ಹೇಳಿದರು.
ಶಿಗ್ಗಾಂವಿನಲ್ಲಿ ಈ ಬಾರಿ ಕಾಂಗ್ರೆಸ್ ಗೆಲ್ಲಲಿದೆ. ಯಾಸೀರ್ ಪಠಾಣ್ ಪರವಾಗಿ ಅಜ್ಜಂ ಪೀರ್ ಖಾದ್ರಿ ಜತೆಗೂಡಿ ಕೆಲಸ ಮಾಡಲಿದ್ದಾರೆ. ಇಬ್ಬರೂ ಪಕ್ಷ ಕ್ಕಾಗಿ ಒಂದಾಗಿ ಸಂದೇಶ ರವಾನಿಸಿದ್ದಾರೆ” ಎಂದು ಹೇಳಿದರು.
ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಶ್ರೀನಿವಾಸ್ ಮಾನೆ, ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ, ಇಸ್ಮಾಯಿಲ್ ತಮಟಗಾರ, ಅಲ್ತಾಫ್ ಕಿತ್ತೂರು, ಸಯೀದ್ ಅಹಮದ್ ಉಪಸ್ಥಿತರಿದ್ದರು.