Homeಕರ್ನಾಟಕರಾಜ್ಯಕ್ಕಾದ ಅನ್ಯಾಯ ಸರಿಪಡಿಸದಿದ್ದರೆ ಮೋದಿ ಸರ್ಕಾರ ಯಾಕಿರಬೇಕು: ಡಿ ಕೆ ಶಿವಕುಮಾರ್

ರಾಜ್ಯಕ್ಕಾದ ಅನ್ಯಾಯ ಸರಿಪಡಿಸದಿದ್ದರೆ ಮೋದಿ ಸರ್ಕಾರ ಯಾಕಿರಬೇಕು: ಡಿ ಕೆ ಶಿವಕುಮಾರ್

ದೆಹಲಿ: ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದರು.

ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ರಾಜ್ಯಕ್ಕೆ ಅನುದಾನ ನೀಡುವ ಅಧಿಕಾರ ಹಣ ಕಾಸು ಆಯೋಗದ ಮುಂದೆ ಇದೆ. ಕೇಂದ್ರ ಸರ್ಕಾರದ ಕೈಯಲ್ಲಿಲ್ಲ ಎಂದು ನಿರ್ಮಲಾ ಸೀತರಾಮನ್ ಅವರು ಹೇಳಿದ್ದಾರೆ. ನಾವು ನಮ್ಮ ಜನರ ಬೆವರನ ಹಣ ಕೊಡಿ ಎಂದು ಕೇಳುತ್ತಿದ್ದೇವೆ. ದೇಶದಲ್ಲಿ ಕೇಂದ್ರ ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ಹೀಗಾಗಿ ನಾವು ನಮ್ಮ ಪಾಲನ್ನು ಕೇಳುತ್ತಿದ್ದೇವೆ” ಎಂದರು.

“ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಮನುಷ್ಯ ಹುಟ್ಟಿದ ನಂತರ ಏನಾದರೂ ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು. ಅದರಂತೆ ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಗುಡ್ಡೆಯಾಗಲಿದೆ. ಇಲ್ಲಿ ನಾನು ಹಾಗೂ ಮುಖ್ಯಮಂತ್ರಿ ಮಾತ್ರ ಬಂದು ಕೂತಿಲ್ಲ. ನಮ್ಮ ರಾಜ್ಯದ ಜನತೆ ಆರಿಸಿರುವ 138 ಶಾಸಕರು, ಪರಿಷತ್ ಸದಸ್ಯರು ಇಲ್ಲಿಗೆ ಬಂದು ರಾಜ್ಯದ ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ” ಎಂದು ಹೇಳಿದರು.

“ಟೀಕೆ ಮಾಡುತ್ತಿರುವ ನಮ್ಮ ಬಿಜೆಪಿ ಸ್ನೇಹಿತರಿಗೆ ನಾನು ಕೇಳುವುದಿಷ್ಟೇ. ಜನ ನಿಮ್ಮ 26 ಸಂಸದರನ್ನು ಆರಿಸಿದ್ದಾರೆ. ನೀವು ಒಂದು ದಿನ ರಾಜ್ಯದ ಪರವಾಗಿ ಹೋರಾಟ ಮಾಡಲಿಲ್ಲ. ರಾಜ್ಯದ ಹಿತದ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕಲಿಲ್ಲ. ಡಬಲ್ ಇಂಜಿನ್ ಸರ್ಕಾರ ಇದ್ದರೂ ಇಂಜಿನ್ ಗಳು ಫೇಲ್ ಆದವು. ಮುಖ್ಯಮಂತ್ರಿಗಳು ನಿಮ್ಮನ್ನು ಕರೆದುಕೊಂಡು ಹೋದರೂ ನೀವು ಸರ್ಕಾರದ ಮುಂದೆ ತುಟಿ ಬಿಚ್ಚಲಿಲ್ಲ. ಹೀಗಾಗಿ ಗಾಂಧಿ ಪ್ರತಿಮೆ ಮುಂದೆ ನಿಂತು ನೀವು ಪ್ರತಿಭಟನೆ ಮಾಡುವ ನೈತಿಕತೆ ನಿಮಗಿಲ್ಲ” ಎಂದು ಕುಟುಕಿದರು.

ಬಜೆಟ್ ಅನುದಾನವೂ ಕೊಡಲಿಲ್ಲ ಯಾಕೆ?

“ಕಳೆದ ವರ್ಷ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದಾಗ ಕೇಂದ್ರ ಬಜೆಟ್ ನಲ್ಲಿ ನಿರ್ಮಲಾ ಸೀತರಾಮನ್ ಅವರು ಅನೇಕ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಿದ್ದರು. ಈ ಘೋಷಣೆಯಾಗಿ ಒಂದು ವರ್ಷವಾದರೂ ಇದುವರೆಗೂ ಒಂದು ರೂಪಾಯಿ ಕೂಡ ಬಿಡುಗಡೆ ಮಾಡಿಲ್ಲ. ಕರ್ನಾಟಕದ ಮಧ್ಯ ಭಾಗದ ಪ್ರದೇಶದಲ್ಲಿ ನೀರು ಹರಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5300 ಕೋಟಿಯನ್ನು ನೀಡಲಿದೆ. ಆ ಮೂಲಕ ಸಣ್ಣ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದ್ದರು. ಈ ಘೋಷಣೆಯನ್ನು ಯಾಕೆ ಜಾರಿಗೊಳಿಸಲಿಲ್ಲ? ಇದು ಸರಳವಾದ ಪ್ರಶ್ನೆ. ರಾಜ್ಯದಿಂದ ಆಯ್ಕೆಯಾಗಿರುವ ನೀವು ಕರ್ನಾಟಕಕ್ಕೆ ನ್ಯಾಯ ಒದಗಿಸಿಲ್ಲ. ದಯಮಾಡಿ ನಮಗೆ ನ್ಯಾಯ ಒದಗಿಸಿ” ಎಂದು ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments