ದೂರು ಬಂದಾಗ ಗಂಭೀರವಾಗಿ ತೆಗೆದುಕೊಳ್ಳಬೇಕಲ್ಲವೇ? ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಎಂಬುವರು ತಲೆಮರೆಸಿಕೊಂಡಿದ್ದು ತನಿಖೆ ಮುಂದುವರಿದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಈ ಪ್ರಕರಣದಲ್ಲಿ ಪ್ರಲ್ಹಾದ್ ಜೋಶಿ ಅವರ ಪಾತ್ರ ಇರುವುದು ನನಗೆ ಗೊತ್ತಿಲ್ಲ. ಬಂಧಿತರನ್ನು ವಿಚಾರಣೆ ನಡೆಸಿ, ಹೇಳಿಕೆ ಪಡೆದಾಗ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ. ತನಿಖೆಗೆ ಮೊದಲು ಹೇಳುವುದು ಸರಿಯಲ್ಲ. ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ವರದಿ ಬಾರದೆ ಏನು ಹೇಳಲು ಆಗುವುದಿಲ್ಲ” ಎಂದರು.
ಏನಿದು ಪ್ರಕರಣ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಹಣ ಪಡೆದು ವಂಚಿಸಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕುಟುಂಬದ ವಿರುದ್ಧ ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚೌಹಾಣ್ ಅವರ ಪತ್ನಿ ಸುನೀತಾ ಚೌಹಾಣ್ ಅವರು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ.
“ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿ ತಮಗೆ ವಂಚಿಸಿದ್ದಾರೆ. ಜಾತಿ ನಿಂದನೆ ಮಾಡಿದ್ದಾರೆ” ಎಂದು ದೂರುದಾರರು ಆರೋಪಿಸಿದ್ದಾರೆ.