- ಬೆಂಗಳೂರು ಜನರ ಜೀವನ ಗುಣಮಟ್ಟ ಸುಧಾರಣೆ ನಮ್ಮ ಮೊದಲ ಆದ್ಯತೆ: ಕೃಷ್ಣ ಬೈರೇಗೌಡ
- ಜನರ ದಿನನಿತ್ಯದ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಆದ್ಯತೆ ನೀಡಲು ಕರೆ
- ಸಂಚಾರ ದಟ್ಟಣೆ, ಸ್ವಚ್ಛತೆ ಸೇರಿ ಎಲ್ಲಾ ಸಮಸ್ಯೆಗಳಿಗೆ ತ್ವರಿತ ಪರಿಹಾರ
ಬೆಂಗಳೂರು ನಗರದಲ್ಲಿ ವಾಸಿಸುವ 1.5 ಕೋಟಿ ಜನರ ಜೀವನ ಗುಣಮಟ್ಟವನ್ನು ಸುಧಾರಿಸುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಆ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳು, ಬಿ-ಸ್ಮೈಲ್, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ಸೇರಿದಂತೆ ವಿವಿಧ ವಿಷಯಗಳ ಕುರಿತು ಮೊದಲ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಬಹಳಷ್ಟು ಸವಾಲುಗಳನ್ನು ಹೊಂದಿರುವ ನಗರವಾಗಿದೆ. ಸುಮಾರು 1.5 ಕೋಟಿ ಜನರಿಗೆ ಆಶ್ರಯ ತಾಣವಾಗಿರುವ ಈ ನಗರವು ಉದ್ಯೋಗ, ಶಿಕ್ಷಣ ಹಾಗೂ ಉತ್ತಮ ಜೀವನಕ್ಕೆ ಅವಕಾಶ ಕಲ್ಪಿಸುತ್ತಿದೆ. ಬೆಂಗಳೂರು ನಮ್ಮ ರಾಜ್ಯ ಹಾಗೂ ದೇಶದ ಅಮೂಲ್ಯ ಆಸ್ತಿಯಾಗಿದ್ದು, ವಿಶ್ವದ ವಿವಿಧ ಭಾಗಗಳ ಜನರು ಹಾಗೂ ಅನೇಕ ಸಂಸ್ಥೆಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಬಿಎ ಆಡಳಿತವನ್ನು ಸುಧಾರಣೆ ಮಾಡುವ ದ್ಯೇಯೆಯೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.
ನಗರದಲ್ಲಿ ರಸ್ತೆ, ಬೀದಿ ದೀಪಗಳ ನಿರ್ವಹಣೆ, ಸಂಚಾರ ದಟ್ಟಣೆ, ಸ್ವಚ್ಛತೆ, ಸೌಂದರ್ಯೀಕರಣ, ಜಲಾವೃತ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಪುನರ್ರಚಿಸಲಾಗಿದೆ. ಜಿಬಿಎ ಅಡಿಯಲ್ಲಿ 5 ನಗರ ಪಾಲಿಕೆಗಳನ್ನು ರಚಿಸಿ, ಆಯುಕ್ತರಿಗೆ ಸಂಪೂರ್ಣ ಜವಾಬ್ದಾರಿ ನೀಡುವ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಹಾಗೂ ಸಂಚಾರಯುಕ್ತ ರಸ್ತೆ ನಿರ್ಮಾಣದಂತಹ ಯೋಜನೆಗಳನ್ನು ರೂಪಿಸಿ ಅನುಷ್ಠಾನದ ಹಂತಕ್ಕೆ ತರಲಾಗಿದೆ. ನಗರದಲ್ಲಿದ್ದ ಅಸ್ಪಷ್ಟ ಖಾತೆ ಸಮಸ್ಯೆಗೆ ಪರಿಹಾರವಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಅತ್ಯುತ್ತಮ ಮಾದರಿಯ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ನಗರದ ದೀರ್ಘಾವಧಿಯ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಸಮಗ್ರವಾಗಿ ರೂಪಿಸಲಾಗಿದೆ. ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನಾವು ಕೆಲಸ ಮಾಡುತ್ತೇವೆ. ಇದರ ಜೊತೆಗೆ ಜನರ ದಿನನಿತ್ಯದ ಸಮಸ್ಯೆಗಳ ಪರಿಹಾರಕ್ಕೂ ಹೆಚ್ಚಿನ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಇರುವ ಆಡಳಿತ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯನಿರ್ವಹಿಸಿದರೆ ಹಲವು ಸಮಸ್ಯೆಗಳನ್ನು ಬಗೆಹರಿಸಬಹುದು. ಆಡಳಿತದಲ್ಲಿ ಚುರುಕು ಮೂಡಿಸಿ, ಸೇವಾ ವಿತರಣೆಯಲ್ಲಿ ಸುಧಾರಣೆ ತರುವ ಮೂಲಕ ಜನರ ಜೀವನ ಗುಣಮಟ್ಟವನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
ಸಾಮಾಜಿಕ, ಸಾಂಸ್ಕೃತಿಕ, ಕಲಾತ್ಮಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಒಳಗೊಂಡ ಸಮಗ್ರ ಅಭಿವೃದ್ಧಿಯಿಂದ ಮಾತ್ರ ಜೀವನದ ಗುಣಮಟ್ಟ ಸುಧಾರಿಸಲು ಸಾಧ್ಯ. ಈ ನಿಟ್ಟಿನಲ್ಲಿ 360 ಡಿಗ್ರಿ ದೃಷ್ಟಿಕೋನದೊಂದಿಗೆ ಬೆಂಗಳೂರಿನ ಜನರ ಜೀವನ ಗುಣಮಟ್ಟ ಸುಧಾರಣೆಗೆ ಹೆಚ್ಚಿನ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ಎಲ್ಲರಿಗೂ ಸೇರಿರುವ ನಗರವಾಗಿದೆ. ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಅಭಿವೃದ್ಧಿಗೆ ಸ್ಪಷ್ಟವಾದ ದೂರದೃಷ್ಟಿಯ ಯೋಜನೆಗಳನ್ನು ಹೊಂದಿದ್ದಾರೆ. ಅದರಂತೆ ಎಲ್ಲಾ ಅಧಿಕಾರಿಗಳು, ಆಡಳಿತ ವ್ಯವಸ್ಥೆ ಹಾಗೂ ಆಡಳಿತ ಮತ್ತು ವಿರೋಧ ಪಕ್ಷಗಳ ಜನಪ್ರತಿನಿಧಿಗಳ ಸಹಕಾರದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬದ್ಧತೆಯಿಂದ ಕೆಲಸ ಮಾಡಲಾಗುವುದು ಎಂದು ಹೇಳಿದರು.
ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಅಗತ್ಯ ಅನುದಾನ ಲಭ್ಯವಿದೆ. ವ್ಯವಸ್ಥಿತವಾಗಿ ಹಾಗೂ ಗುಣಮಟ್ಟದೊಂದಿಗೆ ಗುಂಡಿ ಮುಚ್ಚುವ ಕಾಮಗಾರಿಗಳನ್ನು ಕೈಗೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳನ್ನು ತಡೆಯಲು ಸಾಧ್ಯವಾಗುತ್ತದೆ. ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಮನೆ-ಮನೆಗೆ ಕಸ ಸಂಗ್ರಹಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೆಲವರು ಮನೆ ಬಾಗಿಲಿಗೆ ಕಸ ಸಂಗ್ರಹ ವಾಹನ ಬಂದರೂ ರಸ್ತೆ ಬದಿಯಲ್ಲಿ ಕಸವನ್ನು ತಂದು ಹಾಕುತ್ತಿರುವುದು ಕಂಡುಬರುತ್ತಿದೆ. ಕಸ ಸಂಗ್ರಹಣಾ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ನಾಗರಿಕರ ಸಹಕಾರವೂ ಅಗತ್ಯವಾಗಿದೆ. ಅಧಿಕಾರಿಗಳು ಮತ್ತು ಸಾರ್ವಜನಿಕರು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಾಧ್ಯ ಎಂದು ಹೇಳಿದರು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುಷಮಾ ಗೋಡಬೋಲೆ, ಡಾ. ಕೆ. ಹರೀಶ್ ಕುಮಾರ್, ವೆಂಕಟ ಚಲಪತಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ಜಿ. ಜಗದೀಶ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಅಪರ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಗುಂಡಿ ಇಲ್ಲದ ರಸ್ತೆ ನಿರ್ಮಾಣ ರಾಕೆಟ್ ಸೈನ್ಸ್ ಅಲ್ಲ
ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವುದು, ಗುಂಡಿ ಮುಚ್ಚುತ್ತಿದ್ದಂತೆ ಮತ್ತೊಂದು ಕಡೆ ಗುಂಡಿ ಬಾಯ್ತೆರೆಯುವುದು ವಾಡಿಕೆಯಾಗಿಬಿಟ್ಟಿದೆ. ಇದರ ಬದಲು ನಮ್ಮ ಅಧಿಕಾರಿಗಳಿಗೆ ಗುಂಡಿ ಬೀಳದಂತೆ ಗುಣಮಟ್ಟದ ರಸ್ತೆ ನಿರ್ಮಿಸಲು ಇರುವ ಸಮಸ್ಯೆಯಾದರೂ ಏನು? ಗುಣಮಟ್ಟದ ರಸ್ತೆ ನಿರ್ಮಾಣವೇನು ರಾಕೆಟ್ ಸೈನ್ಸ್ ಗಿಂತ ಕ್ಲಿಷ್ಟವೇ? ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದಕ್ಷಿಣ ಭಾರತದ ಮಟ್ಟಿಗೆ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರಿನ ರಸ್ತೆಗಳು ತೀರಾ ಕಳಪೆಯಾಗಿವೆ ಎಂದು ಅಭಿಪ್ರಾಯಪಟ್ಟ ಅವರು, *“ಇನ್ನುಂದೆ ಹಳೆ ಕಲ್ಲು ಹೊಸ ಬಿಲ್ಲು”* ಎಂಬಂತೆ ರಸ್ತೆ ಗುಂಡಿ ಮುಚ್ಚುವ ತಾತ್ಕಾಲಿಕ ಪರಿಹಾರದ ಬದಲಾಗಿ ಅಧಿಕಾರಿಗಳು ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು. ಕೆಟ್ಟ ರಸ್ತೆಗಳ ಕಾರಣಕ್ಕೆ ಉಂಟಾಗುತ್ತಿರುವ ಜನರ ಬವಣೆ ನೀಗಬೇಕು. ಒಳ್ಳೆಯ ಕೆಲಸ ಮಾಡುವ ಅಧಿಕಾರಿಗಳ ಹಿಂದೆ ನಾನು ಎಂದಿಗೂ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.


