ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, “ಮಿಲ್ಲಿಂಗ್ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. (ಪ್ರತಿ ಕ್ವಿಂಟಾಲ್ಗೆ) ಏರಿಕೆ ಮಾಡಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ” ಎಂದು ಹೇಳಿದ್ದಾರೆ.
“ಡಿಸೆಂಬರ್ 21ರಂದು ನವದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೊಬರಿ ರೈತರ ಸಂಕಷ್ಟ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಪ್ರಧಾನಿಗಳು ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದರು” ಎಂದು ಹೇಳಿಕೊಂಡಿದ್ದಾರೆ.
“ತೆಂಗು ಬೆಳೆಗಾರರು ಬಹಳಷ್ಟು ಸಂಕಷ್ಟದಲ್ಲಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ನೆರವು ಬೇಕಿದೆ. ಮಧ್ಯವರ್ತಿಗಳು ಅವರನ್ನು ಕಿತ್ತು ತಿನ್ನುತ್ತಿದ್ದಾರೆ. ಇದು ಎಲ್ಲೆಡೆ ಕಂಡು ಬರುತ್ತಿರುವ ನೈಜ ಚಿತ್ರಣ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ನಾಫೆಡ್ ಮೂಲಕವೇ ಕೊನೆಪಕ್ಷ ರಾಜ್ಯದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಕೊಬರಿ ಖರೀದಿಸಬೇಕು ಎಂದು ಕೇಂದ್ರವನ್ನು ಮತ್ತು ಪ್ರಧಾನಿಗಳಲ್ಲಿ ವಿನಂತಿಸುತ್ತೇನೆ” ಎಂದು ತಿಳಿಸಿದ್ದಾರೆ.