ಉದ್ಯಾನಗಳ ರಕ್ಷಣೆಗಾಗಿ ಅಭಿಯಾನ ಹಾಗೂ ಪ್ರತಿಭಟನೆ; ಚರ್ಚೆ ಬೇಡ, ಬಿಲ್ ಹಿಂದಕ್ಕೆ ಪಡೆಯಿರಿ
ಕೆಆರ್ಐಡಿಎಲ್ನಲ್ಲಿ 7% ಲಂಚ ಪಡೆಯುತ್ತಿರುವ ಇಬ್ಬರು ಸಚಿವರನ್ನು ಕೂಡಲೇ ವಜಾ ಮಾಡಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ವಿರುದ್ಧ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರಾದರೂ ಲಂಚ ಪಡೆದರೆ ನನಗೆ ಕರೆ ಮಾಡಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಈಗ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅಧಿಕೃತವಾಗಿ ಪತ್ರ ಬರೆದು ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೆಆರ್ಐಡಿಎಲ್ ನಲ್ಲಿ ಹೆಚ್ಚುವರಿಯಾಗಿ 7% ಪಡೆಯಲಾಗುತ್ತಿದೆ, ಈ ಬಗ್ಗೆ ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ. ಇದು ಅವರ ಪಕ್ಷದ ಶಾಸಕರೇ ಮಾಡಿರುವ ಆರೋಪ ಇದು ಅತ್ಯಂತ ಪ್ರಮುಖ ಸಾಕ್ಷ್ಯ ಎಂದು ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳು ಕೂಡ ರೌಡಿಗಳಾಗಿದ್ದಾರೆ. ಅಂದರೆ ಈ ಸರ್ಕಾರ ಕಮಿಶನ್ ಆಡಳಿತ ಮಾಡುತ್ತಿದೆ ಎಂಬುದು ಸಾಬೀತಾಗಿದೆ ಎಂದರು. 100 ರೂ. ಬಿಡುಗಡೆ ಆದರೆ 30 ರೂ. ಗಳಷ್ಟು ಮಾತ್ರ ಕೆಲಸ ಆಗುತ್ತದೆ. ಉಳಿದ ಶೇಕಡಾ 70ರಷ್ಟು ಕಮಿಶನ್ಗೆ ಹೋಗುತ್ತದೆ. ನಾವು ಆರೋಪ ಮಾಡಿದಾಗ ದಾಖಲೆ ಕೊಡಲು ಕೇಳಿದ್ದರು. ಈಗ ಕಾಂಗ್ರೆಸ್ ಪಕ್ಷದ ಶಾಸಕರೇ ಕಮಿಶನ್ ಬಗ್ಗೆ ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಹಾಗೂ ಇಲಾಖಾ ಸಚಿವರು ಪ್ರತಿ ತಿಂಗಳು ಕಮಿಶನ್ ಪಡೆಯುತ್ತಿದ್ದಾರೆ ಎಂದು ಅವರೇ ಸ್ವತಃ ಹೇಳಿದ್ದಾರೆ ಎಂದರು.
ಈಗಾಗಲೇ ಒಬ್ಬ ಸಚಿವ ಭ್ರಷ್ಟಾಚಾರದಿಂದಾಗಿ ರಾಜೀನಾಮೆ ನೀಡಿದ್ದಾರೆ. ಆದರೂ ಇಬ್ಬರು ಸಚಿವರಿಗೆ ಭಯವಿಲ್ಲ. ಈ 7% ರಾಹುಲ್ ಗಾಂಧಿಗೂ ತಲುಪುತ್ತದೆ ಎಂದರು. ಕರ್ನಾಟಕ ಎಂದರೆ ಇತರೆ ರಾಜ್ಯಗಳಿಗೆ ಮಾದರಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಂದರೆ ಈ 7 ಪರ್ಸೆಂಟ್ ಕಮಿಶನ್ ಇಡೀ ದೇಶಕ್ಕೆ ಮಾದರಿಯಾಗಿದೆ. ಇನ್ನು ಇಲಾಖಾ ತನಿಖೆ ಎಂದು ಆದೇಶ ಮಾಡಿ ಕೈ ತೊಳೆದುಕೊಳ್ಳುತ್ತಾರೆ. ಈ ಕಮಿಶನ್ನಿಂದಾಗಿ ಅಂದಾಜಿನ ಪ್ರಕಾರ ಒಟ್ಟು ಸುಮಾರು 800 ಕೋಟಿಗಳಷ್ಟು ಸಂಗ್ರಹವಾಗಿರಬಹುದು. ಕರ್ನಾಟಕ ಎಟಿಎಂ ಎಂದು ನಾನು ಹಿಂದೆಯೇ ಹೇಳಿದ್ದೆ ಎಂದು ಹೇಳಿದರು.
ಬಿ.ಆರ್.ಪಾಟೀಲ್ ವಸತಿ ಇಲಾಖೆಯ ಕಮಿಶನ್ ಬಗ್ಗೆ ಮಾತಾಡಿದ್ದರು. ಬಸವರಾಜ ರಾಯರೆಡ್ಡಿ ಕೆಕೆಆರ್ ಡಿಬಿ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದರು. ಆರ್.ಬಿ.ತಿಮ್ಮಾಪುರ ಮಾಡಿದ್ದ ಅಕ್ರಮದ ಕುರಿತು ನಾನೇ ಆಡಿಯೋ ಮತ್ತು ದಾಖಲೆಗಳನ್ನು ನೀಡಿದ್ದೆ. ಸರ್ಕಾರಕ್ಕೆ ಮಾನವಿದ್ದರೆ ಆ ಇಬ್ಬರೂ ಸಚಿವರನ್ನು ವಜಾ ಮಾಡಬೇಕಿತ್ತು. ಕಾಂಗ್ರೆಸ್ ಶಾಸಕ ರೈ ಆರೋಪ ಮಾಡಿರುವ ಈ ಪ್ರಕರಣವನ್ನು ಲೋಕಾಯುಕ್ತ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.
ಮಲ್ಲಿಕಾರ್ಜುನ ಖರ್ಗೆ ಮಾತ್ರವಲ್ಲ, ಯಾವುದೇ ದಲಿತರು ಎಲ್ಲಿಗೇ ಭೇಟಿ ನೀಡಿದರೂ ಅಲ್ಲಿ ಶುದ್ಧೀಕರಣ ಮಾಡುವುದು ತಪ್ಪು. ಇದು ಮಾನವೀಯತೆಯ ದೃಷ್ಟಿಯಿಂದ ಹಾಗೂ ಸಂವಿಧಾನದ ಪ್ರಕಾರ ದೊಡ್ಡ ಅಪರಾಧ. ಮೊದಲು ಕಾಂಗ್ರೆಸ್ನವರು ತಾವು ಯಾವ ಕಡೆ ಇದ್ದೀವಿ ಎಂದು ಹೇಳಲಿ. ಒಂದು ಕಡೆ ಪಾಕಿಸ್ತಾನಕ್ಕೆ ಜೈ ಎನ್ನುತ್ತಾರೆ. ಮತ್ತೊಂದು ಕಡೆ ಇಸ್ಲಾಂ ಮಾತ್ರ ಶ್ರೇಷ್ಠ ಎನ್ನುತ್ತಾರೆ. ನಾನು ನನ್ನ ಕುಟುಂಬದವರು ತುರ್ತು ಪರಿಸ್ಥಿತಿಯಲ್ಲಿ ಹೋರಾಟ ಮಾಡಿ ಜೈಲು ಸೇರಿದ್ದೆವು. ನಾವು ಮೊದಲಿಂದಲೂ ಆರ್ಎಸ್ಎಸ್ನಿಂದಲೇ ಬೆಳೆದಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಕಾರ್ಯಕರ್ತರಿಗೆ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಗ್ರಾಮ ಮಟ್ಟದಲ್ಲಿ ಮಾಡುವುದಾಗಿ ಹೇಳಿದ್ದಾರೆ. ಪಕ್ಷದ ಗಿರಾಕಿಗಳಿಗೆ ಇದು ಗಂಜಿಕೇಂದ್ರವಾಗಿದೆ. ಭಾರತ್ ಜೋಡೋ ಮೂಲಕ ಹೊಸ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಕೂಡ ಪಾದ ಯಾತ್ರೆ ಮಾಡಿತ್ತು. ಅದರಿಂದ ಏನೂ ಲಾಭವಾಗಲಿಲ್ಲ. ಈಗ ನಾವು ಜನರಿಗಾಗಿ ಪಾದಯಾತ್ರೆ ಮಾಡಿದರೆ ಅದನ್ನು ಟೀಕೆ ಮಾಡುತ್ತಾರೆ. ಇದರಲ್ಲಿ ರಾಜಕೀಯ ಇಲ್ಲ. ಬರ ಪರಿಹಾರ ಮೊದಲಾದ ಸಮಸ್ಯೆಗಳಿಗಾಗಿ ಪಾದಯಾತ್ರೆ ಮಾಡಲಾಗುತ್ತಿದೆ ಎಂದರು.
ಉದ್ಯಾನ ಕಬಳಿಕೆ: ಶನಿವಾರ, ಭಾನುವಾರ ಪ್ರತಿಭಟನೆ
ರಿಯಲ್ ಎಸ್ಟೇಟ್ ಮಾಫಿಯಾದ ತಾಳಕ್ಕೆ ತಕ್ಕಂತೆ ಕುಣಿಯುವ ಸಿಎಂ ಡಿ.ಕೆ.ಶಿವಕುಮಾರ್ ಉದ್ಯಾನಗಳ ಕಬಳಿಕೆಗೆ ಬಿಲ್ ಮೂಲಕ ಅವಕಾಶ ನೀಡಿದ್ದಾರೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಉದ್ಯಾನಗಳನ್ನು ರಕ್ಷಿಸಬೇಕು. ಈಗ 5% ಎಂದು ಹೇಳಿ ಮುಂದೆ ಅದನ್ನು 50% ಗೆ ಹೆಚ್ಚಿಸಬಹುದು.
ನಾಡಪ್ರಭು ಕೆಂಪೇಗೌಡರು ಕೆರೆಗಳನ್ನು ಕಟ್ಟಿ ಗಾರ್ಡನ್ ಸಿಟಿ ಮಾಡಿದ್ದರು. ಈಗ ಇವರು ಉದ್ಯಾನಗಳನ್ನು ನಾಶ ಮಾಡಿದರೆ ದೆಹಲಿಯಂತೆ ವಾಯು ಮಾಲಿನ್ಯ ನಗರವಾಗುತ್ತದೆ. 40 ವರ್ಷದ ಹಿಂದೆ ಕಾಂಗ್ರೆಸ್ ಸರ್ಕಾರ ಪಾರ್ಕ್, ಕ್ರೀಡಾಂಗಣದಲ್ಲಿ ಅನ್ಯ ಉದ್ದೇಶಕ್ಕಾಗಿ ಬಳಸಬಹುದು ಎಂದು ಕಾನೂನು ತಂದಿತ್ತು. ನಂತರ ಹೋರಾಟ ನಡೆದು ಅದನ್ನು ವಾಪಸ್ ಪಡೆಯಲಾಯಿತು. ಈಗ ಮತ್ತೆ ಅದೇ ಕಾನೂನು ಬರುತ್ತಿದೆ. ಸಿಎಂ ಅವರು ಮಸೂದೆಯನ್ನು ವಾಪಸ್ ಪಡೆಯುವುದಿಲ್ಲ, ಚರ್ಚೆಗೆ ಅವಕಾಶ ನೀಡುತ್ತೇವೆ ಎಂದು ಸರ್ಕಾರ ಹೇಳಿದೆ. ಚರ್ಚೆ ಬೇಕಿಲ್ಲ, ಬಿಲ್ ಅನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ಸುರಂಗ ರಸ್ತೆ ಯೋಜನೆಯಲ್ಲಿ ಪಾರ್ಕಿಂಗ್ನ ಅಗತ್ಯವಿಲ್ಲ. ಮಾಲ್ ನಿರ್ಮಿಸಲು ಲಾಲ್ ಬಾಗ್ ಜಾಗವನ್ನು ಬಳಸಲು ನಿರ್ಧರಿಸಿದ್ದಾರೆ. ಯೋಜನೆ ಗುತ್ತಿಗೆ ಪಡೆದಿರುವ ಗೌತಮ್ ಅದಾನಿ ಅವರನ್ನು ಮನೆಗೆ ಕರೆಸಿ ತಿಂಡಿ ತಿನ್ನಿಸಿ ಕಳುಹಿಸಿದ್ದಾರೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅದೇ ಅದಾನಿಯನ್ನು ಟೀಕೆ ಮಾಡುತ್ತಾರೆ. ನಾವು ಇದೇ ಶನಿವಾರ ಹಾಗೂ ಭಾನುವಾರ ಎಲ್ಲ ಉದ್ಯಾನಗಳಲ್ಲಿ ಪ್ರತಿಭಟನೆ ಮಾಡುತ್ತೇವೆ. ನಾಗರಿಕರಿಂದ ಸಹಿ ಪಡೆದು ಅದನ್ನು ರಾಜ್ಯಪಾಲರಿಗೆ ಸಲ್ಲಿಸುತ್ತೇವೆ. ಪಾರ್ಕ್ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಅಭಿಯಾನ ಮಾಡುತ್ತೇವೆ ಎಂದು ಹೇಳಿದರು.


