ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗುತ್ತಿಗೆದಾರ ಪಿ ಎಸ್ ಗೌಡರ್ ಕೆಆರ್ಐಡಿಎಲ್ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಪ್ರಕರಣವನ್ನು ಇಲಾಖಾ ತನಿಖೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶಿಸಿದ್ದಾರೆ.
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (KRIDL)ನಿಂದ 2023-24ನೇ ಸಾಲಿನ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಗುತ್ತಿಗೆದಾರ ಪಿ ಎಸ್ ಗೌಡರ್ (48) ಡೆತ್ನೋಟ್ ಬರೆದಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಎಸಿಎಸ್ಗೆ ಸಚಿವರು ಸೂಚನೆ ನೀಡಿದ್ದಾರೆ.
ಕೌಟುಂಬಿಕ ಕಲಹವೂ ಇತ್ತು
ಗೌಡರ್ ಆತ್ಮಹತ್ಯೆಗೆ ಕೌಟುಂಬಿಕ ಕಾರಣವೂ ಒಂದು ಎಂಬ ಅಂಶ ಡೆತ್ ನೋಟ್ನಲ್ಲಿದೆ. ಗುತ್ತಿಗೆದಾರ ಪಿ.ಎಸ್. ಗೌಡರ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿದ್ದಲಿಂಗಪ್ಪ ಅವರ ಪುತ್ರ. ಆಸ್ತಿ ಹಂಚಿಕೆ ವಿಚಾರದಲ್ಲಿ ಸಹೋದರರ ನಡುವೆ ಮನಸ್ತಾಪವಿತ್ತು. ಒಮ್ಮೆ ದೈಹಿಕ ಹಲ್ಲೆಯೂ ನಡೆದಿತ್ತು, ನಂತರ ರಾಜಿ ಮಾಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಡೆತ್ ನೋಟ್ ಆಧರಿಸಿ ಎಸ್ ಗೌಡರ್ ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೆಆರ್ಐಡಿಎಲ್ ಸಂಸ್ಥೆ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.