ಕುದುರೆಮುಖ | 25ಕ್ಕೂ ಹೆಚ್ಚು ಕಡೆ ಕಾಡ್ಗಿಚ್ಚು, ತನಿಖೆಗೆ ಆದೇಶ
ಕುದುರೆಮುಖ ರಾಷ್ಟ್ರೀಯ ಉದ್ಯಾನದ 25ಕ್ಕೂ ಹೆಚ್ಚು ಕಡೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಮಂಗಳೂರು ವಿಭಾಗದ ಅರಣ್ಯಾಧಿಕಾರಿ ಮರಿಯಪ್ಪ ಕರಿಕಳನ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ.
ಬೆಂಗಳೂರಿನ ತಮ್ಮ ಅಧಿಕೃತ ನಿವಾಸದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಕೆಲವರು ಮೂಢನಂಬಿಕೆಯಿಂದ ಮತ್ತು ಕೆಲವು ಕಿಡಿಗೇಡಿಗಳು ಕಾಡಿಗೆ ಬೆಂಕಿ ಕೊಟ್ಟಿದ್ದಾರೆ ಮತ್ತು ಕಾಡ್ಗಿಚ್ಚು ವೀಕ್ಷಕರ (Fire watchers) ಕೊರತೆಯೂ ಈ ಅನಾಹುತಕ್ಕೆ ಕಾರಣ ಎಂದು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮದ ಶಿಫಾರಸಿನೊಂದಿಗೆ 7 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಕುದುರೆಮುಖ ಅರಣ್ಯದೊಳಗಿರುವ ಕೆಲವು ನಿವಾಸಿಗಳು ಸ್ವಯಂ ಪ್ರೇರಿತವಾಗಿ ಹೊರಬರಲು ಇಚ್ಛಿಸಿದ್ದು, ಈ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸಿ, ಕಾಂಪಾ ನಿಧಿಯಿಂದ ಅರಣ್ಯ ವಾಸಿಗಳ ಸ್ಥಳಾಂತರ ಕುರಿತಂತೆ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಸೇರಿಸಿ ತಕ್ಷಣವೇ ಕಡತದಲ್ಲಿ ಸಲ್ಲಿಸುವಂತೆಯೂ ಸೂಚಿಸಿದರು.
ಯಾರಾದರೂ ಉದ್ದೇಶಪೂರ್ವಕವಾಗಿ ಕಾಡಿಗೆ ಬೆಂಕಿ ಹಚ್ಚಿದ್ದರೆ ಪತ್ತೆ ಮಾಡಿ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ ಈಶ್ವರ ಖಂಡ್ರೆ, ಅಧಿಕಾರಿ ಮತ್ತು ಸಿಬ್ಬಂದಿಯ ಲೋಪವಿದ್ದರೆ ಅವರ ವಿರುದ್ಧವೂ ಕ್ರಮಕ್ಕೆ ಶಿಫಾರಸು ಮಾಡುವಂತೆ ತಿಳಿಸಿದರು.


