Homeಕರ್ನಾಟಕಹಣಕಾಸು ಮಾಹಿತಿ ತಿಳಿದುಕೊಂಡು ರಾಯರೆಡ್ಡಿ ಮಾತನಾಡಲಿ: ಶಾಸಕ ದಿನೇಶ್ ಗೂಳಿಗೌಡ

ಹಣಕಾಸು ಮಾಹಿತಿ ತಿಳಿದುಕೊಂಡು ರಾಯರೆಡ್ಡಿ ಮಾತನಾಡಲಿ: ಶಾಸಕ ದಿನೇಶ್ ಗೂಳಿಗೌಡ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ ಎಂದು ಶಾಸಕ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಆಯವ್ಯಯವು 3 ಲಕ್ಷ 73 ಸಾವಿರ ಕೋಟಿ ರೂಪಾಯಿ ಇದೆ. ಇದರಲ್ಲಿ ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷ 20 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಟ್ಟಿದೆ. ಇನ್ನು ಗ್ಯಾರಂಟಿ ಯೋಜನೆಗಳಿಗೆ 58,000 ಕೋಟಿ ರೂಪಾಯಿ ಮೀಸಲಿಡಲಾಗಿದೆ” ಎಂದರು.

“ಇನ್ನು ಸಾಮಾಜಿಕ ಪಿಂಚಣಿ, ಸರ್ಕಾರಿ ನೌಕರರ ವೇತನ, ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆಯು ಸಹ ಸಮರ್ಪಕವಾಗಿದೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಮೀಸಲಿಟ್ಟೇ ಎಲ್ಲ ಚಟುವಟಿಕೆಯನ್ನು ನಡೆಸಲಾಗುತ್ತಿದೆ” ಎಂದು ಹೇಳಿದರು.

“ಅಭಿವೃದ್ಧಿ ಕಾರ್ಯಗಳ ಸಹಿತ ಗ್ಯಾರಂಟಿ ಯೋಜನೆಗಳನ್ನು ಸಹ ನಿಲ್ಲಿಸದೇ ರಾಜ್ಯದಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿಕೊಂಡು ಬರಲಾಗುತ್ತಿದೆ. ಹೀಗಿರುವಾಗ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಸರಿಯಾದ ಮಾಹಿತಿಯನ್ನು ಪಡೆದು ಮಾತನಾಡಬೇಕು” ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಸಲಹೆ ನೀಡಿದ್ದಾರೆ.

ಕಡಿವಾಣ ಹಾಕಲು ಮನವಿ:

“ರಾಜ್ಯದ 223 ತಾಲೂಕುಗಳಲ್ಲಿ ತೀವ್ರತರದ ಬರ ಪರಿಸ್ಥಿತಿ ಇತ್ತು. ಆದರೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಬರೆದ ಬಿಸಿ ಅಷ್ಟಾಗಿ ತಟ್ಟಲಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯದ ಜನತೆಯೇ ಕೊಂಡಾಡುತ್ತಿರುವಾಗ ಇಂತಹ ಗೊಂದಲಮಯ ಹೇಳಿಕೆಯನ್ನು ಯಾರೂ ಸಹ ನೀಡಬಾರದು. ಇಂತಹ ಹೇಳಿಕೆಗಳನ್ನು ಮುಂದೆ ಯಾರೂ ನೀಡದಂತೆ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಡಿವಾಣ ಹಾಕಬೇಕು” ಎಂದು ಈ ಮೂಲಕ ಮನವಿ ಮಾಡುತ್ತೇನೆ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments