ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
“ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವೆ. ತಂದೆ- ತಾಯಿ, ತಾತನ ಕ್ಷಮೆಯಾಚಿಸುತ್ತೇನೆ. ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರುವೆ. ವಿದೇಶಕ್ಕೆ ತೆರಳಿದ ಮೇಲೆ ನನಗೆ ಈ ಪ್ರಕರಣ ಗೊತ್ತಾಗಿದೆ. ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು” ಎಂದು ಸ್ಪಷ್ಟನೆ ನೀಡಿದ್ದಾರೆ.
“ಏಪ್ರಿಲ್ 26ರಂದು ಚುನಾವಣೆ ನಡೆಯಿತು. ಆಗ ಕೇಸ್ ದಾಖಲಾಗಿರಲಿಲ್ಲ. ಎಸ್ಐಟಿ ಕೂಡ ರಚನೆ ಆಗಿರಲಿಲ್ಲ. ಆ ನಂತರ ಎಸ್ಐಟಿ ನೋಟಿಸ್ ನೀಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಆದರೆ ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು” ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
“ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ” ಎಂದಿದ್ದಾರೆ.