ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ಧಾರವಾಡದ ಹೈಕೋರ್ಟ್ ಪೀಠ ನಿರಾಕರಿಸುತ್ತಿದ್ದಂತೆ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತುವುದಾಗಿ ಹೇಳಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಈಗ ಯೂಟರ್ನ್ ತೆಗೆದುಕೊಂಡಿದ್ದಾರೆ.
“ಸುಪ್ರಿಂಕೋರ್ಟ್ಗೆ ಮೇಲ್ಮಮನವಿ ಸಲ್ಲಿಸದಿರಲು ನಿರ್ಧರಿಸಿದ್ದೇನೆ. ಮುಂದಿನ ದಿನಗಳಲ್ಲಿ ಮುಡಾ ಪ್ರಕರಣದ ವಾದವನ್ನು ತಾವೇ ಮಾಡಲು ತೀರ್ಮಾನಿಸಿದ್ದೇನೆ” ಎಂದು ದೂರುದಾರ ಸ್ನೇಹಮಯಿ ಕೃಷ್ಣ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ.
“ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನನಗೆ ತಾವೆಲ್ಲರೂ ಪ್ರಶ್ನೆ ಮಾಡುತ್ತಿದ್ದದ್ದು ಸರಿಯಷ್ಟೆ. ಹೈಕೋರ್ಟ್ ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತದಿರಲು ನಿರ್ಧರಿಸಿದ್ದೇನೆ” ಎಂದಿದ್ದಾರೆ.
“ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ, ನನ್ನ ಕೆಲವು ಆತ್ಮೀಯ ವಕೀಲರೊಂದಿಗೆ-ಹಿತೈಷಿಗಳೊಂದಿಗೆ ಚರ್ಚೆ ನಡೆಸಿ, ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಒಂದು ನಿರ್ಧಾರಕ್ಕೆ ಬಂದಿದ್ದು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿ ಮತ್ತಷ್ಟು ಕಾಲ ವಿಳಂಬ ಮಾಡಲಾರೆ” ಎಂದು ಹೇಳಿದ್ದಾರೆ.
“ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸಹ, ನನ್ನ ಬಳಿ ಇರುವ ಮತ್ತು ಲಭ್ಯವಾಗುವ ಸಾಕ್ಷ್ಯಾಧಾರಗಳನ್ನು ಆಧರಿಸಿ, ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದೆ. ವಕೀಲರ ಪರೋಕ್ಷ ಸಹಕಾರ ಪಡೆದುಕೊಂಡು, ಅವಶ್ಯಕತೆ ಬಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು, ಖುದ್ದಾಗಿ ನಾನೇ ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿ, ವಾದ ಮಂಡನೆ ಮಾಡುವೆ” ಎಂದು ತಿಳಿಸಿದ್ದಾರೆ.