ರಾಜ್ಯಪಾಲರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ರಾಜ್ಯಪಾಲರ ನಿರ್ಧಾರವನ್ನು ಈ ಮೂಲಕ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ಹೈಕೋರ್ಟ್ನಲ್ಲಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಎಕ್ಸ್ ತಾಣದಲ್ಲಿ ಪ್ರತಿಕ್ರಿಯಿಸಿರು ಅವರು, “ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನು, ರಾಜಭವನವನ್ನು ನಿಂದಿಸುತ್ತಾ ಬಂದಿದ್ದು, ಮಾನ್ಯ ಹೈಕೋರ್ಟ್ ತೀರ್ಪು ಇಡೀ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ” ಎಂದು ಕುಟುಕಿದ್ದಾರೆ.
“ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನು ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರು ರಾಮಕೃಷ್ಣ ಹೆಗಡೆ ಅವರ ಶಿಷ್ಯ ಎಂದು ಹೇಳಿಕೊಳ್ಳುತ್ತಾರೆ. ಈಗ ಹೈಕೋರ್ಟ್ ತೀರ್ಪು ನೀಡಿದೆ. ರಾಜೀನಾಮೆ ನೀಡಿದ ಬಳಿಕವೇ ಅವರು ಮುಂದಿನ ಹಂತದಲ್ಲಿ ಪ್ರಶ್ನೆ ಮಾಡಲಿ” ಎಂದು ಹೇಳಿದ್ದಾರೆ.
ರಾಜೀನಾಮಗೆ ಬಿ ವೈ ವಿಜಯೇಂದ್ರ ಆಗ್ರಹ
ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ಹೈಕೋರ್ಟ್ನಲ್ಲಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇರುವುದು ಹೈಕೋರ್ಟ್ ತೀರ್ಪಿನಿಂದ ಗೊತ್ತಾಗುತ್ತದೆ. ರಾಜ್ಯಪಾಲರ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಸಿಎಂ ಸಿದ್ದರಾಮಯ್ಯ ಹಸ್ತಕ್ಷೇಪ ಇರುವುದು ಈ ಮೂಲಕ ಗೊತ್ತಾಗಿದೆ. ನೈತಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು” ಎಂದು ಒತ್ತಾಯಿಸಿದರು.