ಮುಡಾದಲ್ಲಿ ಸಾವಿರಾರು ಕೋಟಿಗೂ ಮೀರಿದ ದೊಡ್ಡ ಹಗರಣ ಬಯಲಾಗಿದೆ. ಇದರಿಂದ ಮುಖ್ಯಮಂತ್ರಿಗಳು ಆತಂಕಗೊಂಡಿದ್ದಾರೆ. ಸಿಎಂ ಆದೇಶದ ಮೇರೆಗೆ ಪೊಲೀಸರು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದರು.
ಮೈಸೂರಿನಲ್ಲಿ ಮುಡಾ ಎದುರು ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, “ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದ್ದೆವು. ಆದರೆ, ನಮ್ಮ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ಬಂಧಿಸುವ ಪ್ರಯತ್ನ ಖಂಡನೀಯ” ಎಂದರು.
“ಮಾಜಿ ಸಚಿವ ನಾಗೇಂದ್ರ ಅವರು ಇ.ಡಿ. ಬಂಧನಕ್ಕೆ ಒಳಗಾಗಿದ್ದಾರೆ. ಕಾಂಗ್ರೆಸ್ಸಿನ ಪಾಪದ ಕೊಡ ತುಂಬಿದೆ. ದಲಿತರ ಹಣ ಲೂಟಿ ಮಾಡಿದ್ದೀರಿ; ಅಲ್ಲದೆ ದಲಿತರು, ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಲಪಟಾಯಿಸಿದ್ದೀರಿ. ಇದನ್ನು ಸಿಬಿಐ ತನಿಖೆಗೆ ಕೊಡಬೇಕಲ್ಲದೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದರು.
“ಯಾವುದೇ ಕ್ಷಣದಲ್ಲೂ ಸರಕಾರ ಬೀಳಬಹುದು. ಸಿದ್ದರಾಮಯ್ಯರ ಸರಕಾರ ದಬ್ಬಾಳಿಕೆ ಮಾಡುತ್ತಿದೆ. ತುಘಲಕ್ ದರ್ಬಾರ್ ಮಾಡಲು ಮುಂದಾಗಿದೆ. ಬಿಜೆಪಿ, ಬಿಜೆಪಿಯ ಕಾರ್ಯಕರ್ತರು ಇದೆಲ್ಲದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ” ಎಂದರು.
“ಹೋರಾಟ ಹತ್ತಿಕ್ಕುವುದು ಅಕ್ಷಮ್ಯ ಅಪರಾಧ. ಬೆಳಗ್ಗೆ 7 ಗಂಟೆಗೇ ನಮ್ಮ ಮುಖಂಡರನ್ನು ಬಂಧಿಸಿದ್ದಾರೆ. ನೈಸ್ ರಸ್ತೆ ಬಳಿ ನಮ್ಮ ಬ್ಯಾನರ್, ಬಾವುಟಗಳನ್ನು ಕಿತ್ತು ಬಿಸಾಕಿ, ಕಾರ್ಯಕರ್ತರಿಗೆ ಕೊಡಲು ತಂದ ತಿಂಡಿಯನ್ನೂ ಒದ್ದು ಬಿಸಾಕಿದ್ದಾರೆ” ಎಂದು ಆಕ್ಷೇಪಿಸಿದರು.
“ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ವಾಲ್ಮೀಕಿ ನಿಗಮದ ಹಣವನ್ನು ದೋಚಿ ಕಾಂಗ್ರೆಸ್ ಸರಕಾರವು ಚುನಾವಣೆಗೆ ಬಳಸಿದೆ. ರಾಜ್ಯವನ್ನು ಕಾಂಗ್ರೆಸ್ ಎಟಿಎಂ ಆಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿಯವರಿಗೆ ದುಡ್ಡನ್ನು ಕರ್ನಾಟಕದಿಂದ ಕಳುಹಿಸುತ್ತಿದ್ದಾರೆ” ಎಂದು ಆರೋಪಿಸಿದರು.
“ಮುಖ್ಯಮಂತ್ರಿಗಳು ಮುಡಾ ಹಗರಣ ಮೂಲಕ ತಮ್ಮ ಕುಟುಂಬಕ್ಕೆ ನಿವೇಶನ ಹಂಚಿಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪುಡಾರಿಗಳಿಗೆ ನಿವೇಶನ ನೀಡಿದ 5 ಸಾವಿರ ಕೋಟಿಯ ಹಗರಣ ಇದಾಗಿದೆ. ಈ ಮೂಲಕ ಕಾಂಗ್ರೆಸ್ ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಉತ್ತರ ನೀಡಬೇಕು” ಎಂದು ಆಗ್ರಹಿಸಿದರು.