ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೀಡಿದ್ದ ಇ.ಡಿ ಸಮನ್ಸ್ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಇ.ಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಹೈಕೋರ್ಟ್ನ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಎರಡು ಅರ್ಜಿ ವಿಚಾರಣೆ ನಡೆಸಿ, ಮುಂದಿನ ವಿಚಾರಣೆವರೆಗೆ ಅಂದರೆ ಫೆಬ್ರವರಿ 10ರ ವರೆಗೆ ಇ.ಡಿ ಸಮನ್ಸ್ಗೆ ತಡೆಯಾಜ್ಞೆ ನೀಡಿದರು.
ಸಚಿವ ಬೈರತಿ ಸುರೇಶ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, “ಬೈರತಿ ಸುರೇಶ್ ಯಾವುದೇ ಅನುಸೂಚಿತ ಕೇಸ್ನ ಆರೋಪಿಯಲ್ಲ. ಆರೋಪಿಯಲ್ಲದಿದ್ದರೂ ಇ.ಡಿಯಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೇ ಮಾದರಿಯ ಮತ್ತೊಂದು ಕೇಸ್ನಲ್ಲಿ ಸಮನ್ಸ್ ರದ್ದುಪಡಿಸಲಾಗಿದೆ. ಡಾ.ನಟೇಶ್ಗೆ ಇ.ಡಿ ನೀಡಿದ್ದ ಸಮನ್ಸ್ನ್ನು ಹೈಕೋರ್ಟ್ ರದ್ದುಪಡಿಸಿದೆ. ಹೀಗಾಗಿ ಮುಂದಿನ ವಿಚಾರಣೆವರೆಗೂ ಇ.ಡಿಯಿಂದ ರಕ್ಷಣೆ ಒದಗಿಸಬೇಕು” ಎಂದು ಮನವಿ ಮಾಡಿದರು.
ಸಿಎಂ ಪತ್ನಿ ಪಾರ್ವತಿ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, “14 ಸೈಟ್ ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪವಿದೆ. ಅಪರಾಧದಿಂದ ಗಳಿಸಿದ ಹಣವಿಲ್ಲದಿದ್ದರೂ ತನಿಖೆ ನಡೆಸುತ್ತಿದೆ. ಹೀಗಾಗಿ ತನಿಖೆಗೆ ತಡೆ ನೀಡುವಂತೆ” ಕೋರ್ಟ್ಗೆ ಕೋರಿದರು.
ಮುಡಾ ಪ್ರಕರಣ ಸಿಬಿಐ ತನಿಖೆಗೆ ಮನವಿ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಧಾರವಾಡ ಹೈಕೋರ್ಟ್ ಪೀಠ ತೀರ್ಪು ಕಾಯ್ದಿರಿಸಿದೆ. ನ್ಯಾ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ಬೆಳಗ್ಗೆಯಿಂದಲೇ, ಸತತ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿ, ತೀರ್ಪು ಕಾಯ್ದಿರಿಸಿತು.
ಸಿಎಂ ವಿರುದ್ಧ ದಾವೆ ಹೂಡಿರುವ ಸ್ನೇಹಮಯಿ ಕೃಷ್ಣ ಪರವಾಗಿ ಮಣೀಂದರ ಸಿಂಗ್, ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ ಮನು ಸಿಂಗ್ವಿ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಪರ ಪ್ರೊ.ರವಿವರ್ಮಕುಮಾರ್, ದೇವರಾಜ ಪರ ದುಷ್ಯಂತ ದವೆ, ರಾಜ್ಯ ಸರಕಾರದ ಪರ ಕಪಿಲ್ ಸಿಬಲ್ ವಾದ ಮಂಡಿಸಿದರು.