ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ 2011 ಮಾರ್ಚ್ 3ರಂದು ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಮಾಡಿರುವುದನ್ನು ಪ್ರಸ್ತಾಪಿಸಿದ್ದಾರೆ. ಅವರ ಅಷ್ಟು ಆರೋಪಗಳು ವಿಧಾನ ಪರಿಷತ್ತಿನ ನಡವಳಿಕೆಗಳಲ್ಲಿ ದಾಖಲಾಗಿದ್ದು, ಈ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುವುದೇ ಎಂದು ಮಾಜಿ ಎಂಎಲ್ಸಿ ರಮೇಶ್ ಬಾಬು ಸವಾಲು ಹಾಕಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಯಡಿಯೂರಪ್ಪ ಆರೋಪದಲ್ಲಿ ಎಚ್. ಡಿ ಕುಮಾರಸ್ವಾಮಿ ರವರಿಗೆ 300 x 200 ಅಡಿ ಅಳತೆಯ (ಸುಮಾರು 60,000 ಅಡಿ) ನಿವೇಶನ ಸಂಖ್ಯೆ.17(ಬಿ) ಹಂಚಿಕೆಯಾಗಿರುವುದಾಗಿ ಹೇಳಿದ್ದಾರೆ. ಅದೇ ರೀತಿ ಅವರ ಕುಟುಂಬದ ಸವಿತಾ ಕೋಂ ಬೀರೇಗೌಡ ಎಂಬುವರಿಗೆ 130x 110 ಅಡಿ (ಸುಮಾರು 14,300 ಅಡಿ) ಅಕ್ರಮ ಹಂಚಿಕೆಯ ಕುರಿತು ಆರೋಪ ಮಾಡಿದ್ದಾರೆ. ಇದರ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸಲಿ” ಎಂದು ಆಗ್ರಹಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಮಾತನಾಡುವಾಗ ಬಿ ಎಸ್ ಕೆ ಮೈನಿಂಗ್ ಕಂಪನಿಯಿಂದ ದೇವೇಗೌಡರ ಕುಟುಂಬದವರಿಗೆ 167 ಕೋಟಿ ಜಮಾ ಆಗಿದೆ ಎಂದು ಆರೋಪಿಸಿದ್ದಾರೆ. ಮುಂದುವರೆದು ಜಂಥ್ಯಾಂಕ್ಸ್ ಜಂತ್ ಕಲ್ ಎಂಟರ್ಪ್ರೈಸಸ್ ಗೆ 40 ವರ್ಷ ನವೀಕರಣ ಮಾಡಿ ಅದರಲ್ಲಿ ಇವರ ಕುಟುಂಬದವರು ಪಾರ್ಟ್ ನರ್ ಇದ್ದಾರೆ ಎಂದು ಆರೋಪಿಸಿದ್ದಾರೆ. ತಾವು ಮಾಡಿದ ಆರೋಪಗಳಿಗೆ ಪೂರಕವಾಗಿ ದಾಖಲೆಗಳನ್ನು ಸಭಾಪತಿಗಳಿಗೆ ಸದನದಲ್ಲಿ ಮಂಡಿಸಿದ್ದಾರೆ” ಎಂದು ವಿವರಿಸಿದ್ದಾರೆ.
ಯಡಿಯೂರಪ್ಪನವರು ಸದನದಲ್ಲಿ ಮುಡಾ ಅಕ್ರಮ ನಿವೇಶನ ಹಂಚಿಕೆ ಕುರಿತು ದೇವೇಗೌಡರ ಕುಟುಂಬದ ಮೇಲೆ ಮಾಡಿರುವ ಗಂಭೀರ ಆರೋಪದ ಮೇಲೆ ತನಿಖೆಗೆ ಒತ್ತಾಯಿಸಲು ತಾಕತ್ತು ಇದೆಯೇ? ಯಡಿಯೂರಪ್ಪನವರು ದಾಖಲೆಗಳನ್ನು ಸಭಾಪತಿಗಳಿಗೆ ಮಂಡಿಸಿದರೂ ಇಲ್ಲಿಯವರೆಗೆ ಬಿಜೆಪಿ ಯಾವ ಕಾರಣಕ್ಕೆ ಮೌನವಾಯಿತು” ಎಂದು ಪ್ರಶ್ನಿಸಿದ್ದಾರೆ.
“ಅವಕಾಶವಾದದ ರಾಜಕಾರಣ ಮತ್ತು ಅನುಕೂಲ ಸಿಂಧು ರಾಜಕಾರಣಕ್ಕೆ ಶರಣಾಗಿರುವ ಬಿಜೆಪಿ ಮುಡಾ ಹಗರಣದಲ್ಲಿ ಯಾವ ಯಾವ ಬಿಜೆಪಿ ನಾಯಕರು ಎಷ್ಟು ಎಷ್ಟು ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದನ್ನು ಬಹಿರಂಗಗೊಳಿಸಲಿ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಮೈಸೂರಿನ ಮುಡಾ ದಲ್ಲಿ ಹೆಚ್ಚು ಹಗರಣಗಳು ನಡೆದಿರುತ್ತವೆ” ಎಂದಿದ್ದಾರೆ.
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ರೂಪದಲ್ಲಿ ಭೂ ಮಾಲೀಕರಿಗೆ ನಿವೇಶನ ನೀಡಿರುವುದನ್ನು ಬಿಜೆಪಿ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುತ್ತಿದೆ. ಆದರೆ ಯಾವುದೇ ಭೂಮಿಯನ್ನು ಕಳೆದುಕೊಳ್ಳದೆ ತಮ್ಮ ರಾಜಕೀಯ ಪ್ರಭಾವದ ಮೂಲಕ ಒಂದೇ ಕುಟುಂಬ 48 ನಿವೇಶನಗಳನ್ನು ಪಡೆದುಕೊಂಡ ಅಕ್ರಮ ಕುರಿತು ಬಿಜೆಪಿ ಚಕಾರ ಎತ್ತುವುದಿಲ್ಲ. ಅದೇ ರೀತಿ ಒಬ್ಬನೇ ವ್ಯಕ್ತಿಗೆ ಯಾವ ಆಧಾರದ ಮೇಲೆ 60 ಸಾವಿರ ಅಡಿ ಅಳತೆಯ ನಿವೇಶನ ಮಂಜೂರಾಗಿತ್ತು? ಸದನದ ಒಳಗೆ ದಾಖಲೆಯಿಟ್ಟು ಮಾತನಾಡಿದ ಯಡಿಯೂರಪ್ಪನವರಿಗೆ ಸಾರ್ವಜನಿಕವಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ ಏಕೆ” ಎಂದು ರಮೇಶ್ ಬಾಬು ಕೇಳಿದ್ದಾರೆ.