Homeಕರ್ನಾಟಕಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ 'ನನ್ನ ಹೆಸರೇ' ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ

ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ

ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ “ಪ್ರಿಯಾಂಕ್ ಖರ್ಗೆ”ಯ ಹೆಸರೇ ಆಸರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕುಟುಕಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಅಪ್ರಸ್ತುತಗೊಳ್ಳುತ್ತಿದ್ದೇವೆ ಎನಿಸಿದಾಗ ನನ್ನ ಹೆಸರು ಹಿಡಿದುಕೊಂಡು ಚಾಲ್ತಿಗೆ ಬರುವ ಪ್ರಯತ್ನ ನಡೆಸಿದ್ದಾರೆ ಬಿಜೆಪಿಯ ಮಾಜಿ ಶಾಸಕರೊಬ್ಬರು” ಎಂದು ವಾಗ್ದಾಳಿ ನಡೆಸಿದ್ದಾರೆ.

“ಪ್ರಜ್ಞೆ ಇಲ್ಲದವರ ತರ್ಕವಿಲ್ಲದ ಮಾತುಗಳಿಗೆ ಉತ್ತರ ನೀಡುವುದು ಸಮಯ ವ್ಯರ್ಥವೇ ಸರಿ, ಆದರೆ ಸಚಿವನಾಗಿ ಕುತರ್ಕಗಳಿಗೂ ಉತ್ತರಿಸುವುದು ನನ್ನ ಜವಾಬ್ದಾರಿಯಾಗಿದೆ. ಬಿಜೆಪಿ ಕಚೇರಿಯ ಮೂಲೆಯಲ್ಲಿ ಗುಜರಿಯ ತೂಕಕ್ಕೆ ಹಾಕಲು ಇಟ್ಟಿದ್ದ ಯಾವುದೋ ಪೇಪರ್ ಬಂಡಲ್ ನ್ನು ಮುಂದೆ ಇಟ್ಟುಕೊಂಡು ತರ್ಕವಿಲ್ಲದ, ಹುರುಳಿಲ್ಲದ, ಮತ್ತು ಸತ್ಯಾಂಶವಿಲ್ಲದ ಆರೋಪಗಳನ್ನು ಮಾಡಿದ್ದಾರೆ, ಗುಡ್ಡ ಅಗೆಯುವವರಿಗೆ ಇಲಿಯನ್ನಾದರೂ ಹಿಡಿಯುವ ಗುರಿ ಇರಬೇಕು, ಇವರಿಗೆ ಜಿರಳೆ ಹಿಡಿಯಲೂ ಸಾಧ್ಯವಾಗಲಿಲ್ಲ” ಎಂದಿದ್ದಾರೆ.

“15ನೇ ಹಣಕಾಸು ಆಯೋಗದ ಅನುದಾನದಲ್ಲಿ 90%ರಷ್ಟು ಜನಸಂಖ್ಯೆಯ ಆಧಾರದಲ್ಲಿ ಮತ್ತು 10%ರಷ್ಟು ಭೌಗೋಳಿಕ ಆಧಾರದಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸುತ್ತೋಲೆ ಹಾಗೂ ಮಾರ್ಗಸೂಚಿಗಳ ಅನ್ವಯ ಬಿಡುಗಡೆ ಮಾಡಲಾಗುತ್ತದೆ, ಒಟ್ಟು ಅನುದಾನದಲ್ಲಿ 60% ನಿರ್ಬಂಧಿತ, 40% ಅನಿರ್ಬಂಧಿತ ಅನುದಾನವಾಗಿ ಬಿಡುಗಡೆ ಮಾಡಲಾಗುತ್ತದೆ” ಎಂದು ತಿಳಿಸಿದ್ದಾರೆ.

“ಈ ಅನುದಾನವನ್ನು ಗ್ರಾಮ ಪಂಚಾಯತಿಗಳು ಮಾರ್ಗಸೂಚಿ ಅನ್ವಯ ಗ್ರಾಮ ಸಭೆ ನಡೆಸಿ, ಕ್ರಿಯಾ ಯೋಜನೆ ತಯಾರಿಸಿಕೊಂಡು, ಗ್ರಾಮ ಪಂಚಾಯತಿಗಳ ಹಂತದಲ್ಲೇ ಕಾಮಗಾರಿ ಮಾಡಲಾಗುತ್ತದೆ, ಕ್ರಿಯಾಯೋಜನೆ ಮತ್ತು ಅನುಷ್ಠಾನದ ಮಾಹಿತಿಯನ್ನು ಇ- ಗ್ರಾಮ್ ಸ್ವರಾಜ್ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಲಾಗುತ್ತದೆಯೇ ಹೊರತು ಸರ್ಕಾರದಿಂದ ಅನುಮೋದನೆ ಪಡೆಯುವ ಅವಶ್ಯಕತೆ ಇರುವುದಿಲ್ಲ, ಸಂವಿಧಾನದ 73, 74 ತಿದ್ದುಪಡಿಯ ಮೂಲ ಆಶಯದಂತೆ ಸ್ಥಳೀಯವಾಗಿಯೇ ಕ್ರಿಯಾಯೋಜನೆ ರೂಪಿಸಿ ಕಾಮಗಾರಿ ಅನುಷ್ಠಾನ ಮಾಡಲಾಗುತ್ತದೆ” ಎಂದು ವಿವರಿಸಿದ್ದಾರೆ.

“ಈ ಮೂಲಭೂತ ಪ್ರಜ್ಞೆ ಆರೋಪ ಮಾಡುವವರಿಗೆ ಇರಬೇಕಾಗಿದ್ದು ಅತ್ಯವಶ್ಯಕ. ಹೈಮಾಸ್ಕ್ ದೀಪಗಳನ್ನಾದರೂ ಹಾಕಬಹುದು, ಅಥವಾ ಇನ್ಯಾವುದೇ ಕಾಮಗಾರಿಗಳನ್ನಾದರೂ ಮಾಡಬಹುದು, ಇದು ಸಂಪೂರ್ಣ ಗ್ರಾಮ ಪಂಚಾಯತಿಗಳ ವಿವೇಚನಾಧಿಕಾರ. 15ನೇ ಹಣಕಾಸು ಆಯೋಗದ ಅನುದಾನವನ್ನು ಬೇರೆಡೆ ವರ್ಗಾಯಿಸಲು ಸಾಧ್ಯವಿಲ್ಲ, ಈ ಅನುದಾನದ ಬಿಡುಗಡೆ ಮತ್ತು ಹಂಚಿಕೆಯಲ್ಲಿ ನನ್ನ ಪಾತ್ರ ಎಲ್ಲಿದೆ ಮತ್ತು ಹೇಗಿದೆ ಎನ್ನುವುದನ್ನು ದಾಖಲೆ ಸಮೇತ ನಿರೂಪಿಸಲು ಸಾಧ್ಯವಾಗದ ಮಾಜಿ ಶಾಸಕರು ಕೇವಲ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ. ಅವರ ಗಾಳಿಯ ಗುಂಡು ಕೇವಲ ಶಬ್ದಕ್ಕಾಗಿ ಮಾತ್ರ” ಎಂದು ಹರಿಹಾಯ್ದಿದ್ದಾರೆ.

“15ನೇ ಹಣಕಾಸು ಆಯೋಗದ ಅನುದಾನದ ಸಾಮಾಜಿಕ ಲೆಕ್ಕ ಪರಿಶೋಧನೆಯಲ್ಲಿ ಮಾಜಿ ಶಾಸಕರು ಹೇಳುವ ಮಾದರಿಯಲ್ಲಿ ಯಾವುದೇ ಆಕ್ಷೇಪಣೆಗಳು ಬಂದಿಲ್ಲ, ಹೀಗಿರುವಾಗ ಇವರ ಆರೋಪಕ್ಕೆ ಸಾಕ್ಷಿಗಳೇನು? 2020-21ರಿಂದ 2022-23ರವರೆಗೆ, @BJP4Karnataka ಆಡಳಿತದ ಅವಧಿಯಲ್ಲಿ 65,325.36 ಲಕ್ಷ ರೂಪಾಯಿಗಳನ್ನು ಆಕ್ಷೇಪಣೆಯಲ್ಲಿರಿಸಲಾಗಿತ್ತು, ಇದರಲ್ಲಿ 4,586.63 ಲಕ್ಷ ರೂಪಾಯಿಗಳ ವಸೂಲಾತಿಗೆ ಸೂಚಿಸಲಾಗಿತ್ತು, ಇದಕ್ಕೆ ಉತ್ತರ ಹೇಳುವವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿ ಸರ್ಕಾರದಲ್ಲಿ ಕಾಡುತ್ತಿದ್ದ ಕಮಿಷನ್ ಪಿಡುಗಿಗಾಗಿ ಮಂತ್ರಿಯೊಬ್ಬರು ರಾಜೀನಾಮೆ ನೀಡಿದ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ನಂತಹ ವಿಸ್ತಾರವಾದ ಮತ್ತು ಪ್ರಮುಖವಾದ ಇಲಾಖೆ ವರ್ಷಗಳ ಕಾಲ ಮಂತ್ರಿಯೇ ಇಲ್ಲದೆ ಸೊರಗಿತ್ತು, ಇಡೀ ಇಲಾಖೆಯ ವ್ಯವಸ್ಥೆಯನ್ನು ಹಳ್ಳ ಹಿಡಿಸಲಾಗಿತ್ತು, ಬಿಜೆಪಿ ಮಾಡಿ ಹೋಗಿದ್ದ ಅವಾಂತರಗಳನ್ನು ಸರಿಪಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ, ಈ ನಡುವೆ ಇವರ ಸುಳ್ಳು ಆರೋಪಗಳನ್ನೂ ಸಹ ಸಮರ್ಥವಾಗಿ ಎದುರಿಸುತ್ತೇವೆ”ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments