Homeಕರ್ನಾಟಕಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಿಗದ ಸಹಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಿಗದ ಸಹಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಿಗದ ಸಹಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ ಅಧಿಸೂಚನೆ ಹೊರಡಿಸುತ್ತಿಲ್ಲ. ನೆರೆ ರಾಜ್ಯಗಳು ದಾವೆಗಳ ಮೂಲಕ ಯೋಜನೆ ಜಾರಿಗೆ ಅಡಚಣೆ ಉಂಟು ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು.

ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ಚುನಾವಣೆ ಪ್ರಚಾರದ ವೇಳೆ ನಾನು ಹೇಳಿದ್ದೆ. ಈ ಕೈಗೆ ಅಧಿಕಾರ ಸಿಕ್ಕಿದ ಕಾರಣಕ್ಕೆ ಇಂದು ದೊಡ್ಡ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ನಿಮ್ಮ ಜಿಲ್ಲೆಯಲ್ಲಿ ಕೃಷ್ಣ ಜಲಭಾಗ್ಯ ನಿಗಮದಲ್ಲಿ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆದ್ಯತೆ ನೀಡಲಾಗಿದೆ. ನಾನು ಸಚಿವನಾದ ಬಳಿಕ 3,700 ಕೋಟಿ ಕೆಲಸವನ್ನು ಈ ಜಿಲ್ಲೆಗೆ ಮಂಜೂರು ಮಾಡಿದ್ದೇವೆ. 1.19 ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ಸಲ್ಲಿಸಲಾಗಿದೆ. ಯುಕೆಪಿ 3ನೇ ಹಂತದಲ್ಲಿ ನಿಮಗೆ 80 ಟಿಎಂಸಿ ನೀರು ಲಭ್ಯವಾಗುತ್ತದೆ. ಈ ಯೋಜನೆಗೆ ಅಧಿಸೂಚನೆ ಹೊರಡಿಸಿ ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುತ್ತಿಲ್ಲ. ನೆರೆ ರಾಜ್ಯಗಳು ನಮ್ಮ ಮೇಲೆ ದಾವೆ ಹೂಡಿ ಅಡ್ಡಪಡಿಸುತ್ತಿವೆ. ಆದರೂ ಕೆರೆಗಳನ್ನು ತುಂಬಿಸುವ ಮೂಲಕ ಸಾವಿರಾರು ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಈ ಭಾಗದಲ್ಲಿ 21 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

“ಇತ್ತೀಚೆಗೆ ಈ ಭಾಗದ ನಮ್ಮ ಶಾಸಕರ ಒತ್ತಡದ ಮೇರೆಗೆ ನಾನು ಹಾಗೂ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ, ಯುಕೆಪಿ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ್ದೇವೆ. ಕಳೆದ ಬೊಮ್ಮಾಯಿ ಅವರ ಸರ್ಕಾರ ಈ ಭಾಗದ ರೈತರಿಗೆ 20-25 ಲಕ್ಷ ಪ್ರತಿ ಎಕರೆಗೆ ಪರಿಹಾರ ನೀಡಲು ನಿರ್ಧರಿಸಿತ್ತು. 1,33,867 ಎಕರೆ ಮುಳುಗಡೆಯಾಗಲಿದ್ದು, ನಮ್ಮ ಸರ್ಕಾರ ಪ್ರತಿ ಎಕರೆಗೆ 30-40 ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ 70 ಸಾವಿರ ಕೋಟಿ ವಿತರಣೆ ಮಾಡಲಾಗುವುದು. ಇನ್ನು ಕಾಲುವೆ ಭೂ ಸಂತ್ರಸ್ಥರಿಗೆ 25-30 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ. ನಿಮ್ಮ ಬದುಕಿನಲ್ಲಿ ಬದಲಾವಣೆ ತಂದು, ರೈತರಿಗೆ ಶಕ್ತಿ ತುಂಬಲು ಈ ಕೃಷ್ಣ ಯೋಜನೆ ಜಾರಿಗೆ ಪ್ರಯತ್ನಿಸುತ್ತಿದ್ದೇವೆ” ಎಂದು ವಿವರಿಸಿದರು.

“ಈ ಭಾಗದ ಅನೇಕ ರೈತರು ನ್ಯಾಯಾಲಯದ ಮೇಟ್ಟಿಲೇರಿದ್ದು, 29 ಸಾವಿರ ಪ್ರಕರಣಗಳು ಇವೆ. ಅಲ್ಲಿ ನಿಮಗೆ ಹೆಚ್ಚಿನ ಪರಿಹಾರ ಸಿಗಲಿದೆ ಎಂದು ಭಾವಿಸಿದ್ದೀರಿ. ಅದು ಸಾಧ್ಯವಿಲ್ಲ. ಕೋಟಿಗಟ್ಟಲೆ ಪರಿಹಾರ ನೀಡಬೇಕಾದರೆ, ಯಾವುದೇ ಸರ್ಕಾರ ಈ ಯೋಜನೆ ಜಾರಿ ಮಾಡಲು ಸಾಧ್ಯವಿಲ್ಲ. ಒಪ್ಪಿತ ಭೂಸ್ವಾಧೀನ ಪ್ರಕ್ರಿಯೆ ಮಾಡಬೇಕು ಎಂದು ನಿಮ್ಮ ನಾಯಕರ ಒತ್ತಡದ ಮೇರೆಗೆ ಸರ್ಕಾರದ ಮೇಲೆ ಆರ್ಥಿಕ ಹೊರೆ ಬಿದ್ದರೂ ನಾವು ಈ ತೀರ್ಮಾನ ಮಾಡಿದ್ದೇವೆ. ನೀವೆಲ್ಲರೂ ಸರ್ಕಾರದ ಪರಿಹಾರ ಪಡೆದು ಭೂಮಿಯನ್ನು ನೀಡಬೇಕು” ಎಂದು ಮನವಿ ಮಾಡಿದರು.

ನಂಬಿಕೆ ಮನುಷ್ಯನ ದೊಡ್ಡ ಗುಣ, ತಾಳ್ಮೆ ಇದ್ದವರು ಜಗತ್ತನ್ನೇ ಗೆಲ್ಲುತ್ತಾರೆ

“ನಿಂಬೆ ನಾಡಿಗೆ ನನ್ನನ್ನು ಕರೆಸಿರುವುದಕ್ಕೆ ಬಹಳ ಸಂತೋಷವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಹಾಗೂ ಗೋಲಗುಂಬಜ್ ಮಾದರಿ ಸ್ಮರಣಿಕೆ ನೀಡಿ ನನಗೆ ಇಂದು ಸನ್ಮಾನಿಸಲಾಗಿದೆ. ಎಲ್ಲಾ ಜಾತಿ, ಸಮುದಾಯ, ಧರ್ಮಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿರುವುದೇ ಈ ಸರ್ಕಾರದ ಶಕ್ತಿ. ಬುದ್ಧಿ ಇದ್ದವರು ಯುದ್ಧ ಗೆಲ್ಲುತ್ತಾರೆ. ಗುಣ ಇದ್ದವರು ಹೃದಯವನ್ನು ಗೆಲ್ಲುತ್ತಾರೆ. ತಾಳ್ಮೆ ಇದ್ದವರು ಜಗತ್ತನ್ನೇ ಗೆಲ್ಲುತ್ತಾರೆ.” ಎಂದು ಹೇಳಿದರು.

“ಸರ್ವಜ್ಞ ಅವರು ತಮ್ಮ ವಚನದಲ್ಲಿ ನಿಂಬೆಗಿಂತ ಶ್ರೇಷ್ಠ ಹುಳಿ ಬೇರೊಂದಿಲ್ಲ, ದುಂಬಿಗಿಂತ ಶ್ರೇಷ್ಠ ಕಪ್ಪು ಬಣ್ಣ ಬೇರೊಂದಿಲ್ಲ, ಶಿವನಿಗಿಂತ ದೊಡ್ಡ ದೇವರಿಲ್ಲ, ಅದೇ ರೀತಿ ಮನುಷ್ಯನಲ್ಲಿ ನಂಬಿಕೆಗಿಂತ ದೊಡ್ಡ ಗುಣ ಬೇರೊಂದಿಲ್ಲ ಎಂದು ಬಣ್ಣಿಸಿದ್ದಾರೆ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಅದೇ ರೀತಿ ಮನುಷ್ಯನಿಗೆ ನಂಬಿಕೆ ಬಹಳ ಮುಖ್ಯ. ಅದೇ ರೀತಿ ಬಿಜಾಪುರ ಹಾಗೂ ಬಾಗಲಕೋಟೆಯಲ್ಲಿ ಹತ್ತು ಶಾಸಕರನ್ನು ನೀಡಿ ಈ ಬಲಿಷ್ಠವಾದ ಗ್ಯಾರಂಟಿ ಸರ್ಕಾರವನ್ನು ನೀಡಿರುವ ನಿಮಗೆ ಕೋಟಿ ನಮನಗಳನ್ನು ಅರ್ಪಿಸುತ್ತೇನೆ” ಎಂದರು.

ಸರ್ವರಿಗೂ ಸಮಬಾಳು, ಸಮಪಾಲು ತತ್ವದ ಮೇಲೆ ಕೆಲಸ

“ನಿಮಗೆ ನಮ್ಮ ಪಕ್ಷ ಹಾಗೂ ಸರ್ಕಾರದ ಮೇಲೆ ಅಪಾರವಾದ ವಿಶ್ವಾಸವಿದೆ. ಇಂದು ವಿಜಯಪುರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಅವರ ಹೆಸರು ಇಟ್ಟಿದ್ದೇವೆ. ದೇವರಹಿಪ್ಪರಗಿಯಲ್ಲಿ ಮಡಿವಾಳ ಮಾಚಯ್ಯ ಅವರ ಹೆಸರು ಇಡಲಾಗಿದೆ. ಸುರಪುರದಲ್ಲಿ ರಾಜ ವೆಂಕಟಪ್ಪ ನಾಯಕ ಅವರ ಹೆಸರಿಡಲಾಗಿದೆ. ಸಿಂದಗಿಯಲ್ಲಿ ಚನ್ನವೀರ ಸ್ವಾಮೀಜಿ ಅವರ ಹೆಸರು ಇಡಲಾಗಿದೆ. ಸರ್ವರಿಗೂ ಸಮಬಾಳು, ಸಮಪಾಲು ಎಂಬ ತತ್ವದ ಮೇಲೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಲು ಸರ್ಕಾರ ಹೆಜ್ಜೆ ಇಟ್ಟಿದೆ” ಎಂದು ಹೇಳಿದರು.

“ಈ ಬಸವಣ್ಣನವರ ನಾಡಿನಲ್ಲಿ ಎಲ್ಲಾ ಧರ್ಮ, ಜಾತಿಗಳನ್ನು ಅನೇಕ ಶ್ರೀಗಳು ಒಗ್ಗಟ್ಟಾಗಿ ತೆಗೆದುಕೊಂಡು ಹೋಗಿದ್ದು, ಈ ಜಿಲ್ಲೆಗಳು ಸರ್ವಜನಾಂಗದ ಶಾಂತಿಯ ತೋಟವಾಗಿದೆ. ನಿಮ್ಮ ಆಲೋಚನೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡಿಕೊಂಡು ಬಂದಿದೆ” ಎಂದು ತಿಳಿಸಿದರು.

“ಒಣ ಭೂಮಿ ಎಂಬ ಹಣೆಪಟ್ಟಿಯಿಂದ ಈ ಜಿಲ್ಲೆಗೆ ಮುಕ್ತಿ ನೀಡಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. ಇದಕ್ಕಾಗಿ ನಮ್ಮ ಶಾಸಕರು ಮಾಡುತ್ತಿರುವ ಪ್ರಯತ್ನ ದೊಡ್ಡದಾಗಿದೆ. ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ದೇವರು ನಮಗೆ ಎರಡು ಆಯ್ಕೆ ನೀಡಿದ್ದಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು” ಎಂದರು.

ಗುಣಮಟ್ಟದ ಶಿಕ್ಷಣ, ಉದ್ಯೋಗ ಸೃಷ್ಟಿಗೆ ಆದ್ಯತೆ

“ನಮ್ಮ ಸರ್ಕಾರ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ರಾಜ್ಯಕ್ಕೆ 10 ಲಕ್ಷ ಕೋಟಿ ಬಂಡವಾಳ ಹೂಡಿಕೆ ಬರಬೇಕು ಎಂದು ಅನೇಕ ಕಾರ್ಯಕ್ರಮ ರೂಪಿಸಲಾಗಿದೆ. ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮಗುಣ ಮಟ್ಟದ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ. ನಮ್ಮ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ 1 ಲಕ್ಷದಷ್ಟು ವೈದ್ಯರು, ನರ್ಸ್ ಗಳು ತಯಾರಾಗುತ್ತಿದ್ದು, ಒಂದೂವರೆ ಲಕ್ಷ ಇಂಜಿನಿಯರ್ ಗಳು ಪ್ರತಿ ವರ್ಷ ತಯಾರಾಗುತ್ತಿದ್ದಾರೆ. ನಮ್ಮ ರಾಜ್ಯದ ಸಿಎಸ್ಆರ್ ನಿಧಿಯನ್ನು ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಾಲೆಗಳ ನಿರ್ಮಾಣಕ್ಕೆ ಮೀಸಲಿಡಲಾಗುತ್ತಿದೆ. ಪ್ರತಿ 2-3 ಪಂಚಾಯ್ತಿಗೆ ಒಂದು ಕೆಪಿಎಸ್ ಶಾಲೆ ಆರಂಭಿಸಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದರು.

“ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ನುಡಿದಂತೆ ನಡೆದಿದೆ. ಇಂತಹ ತೀರ್ಮಾನವನ್ನು ದೇಶದಲ್ಲಿ ಬೇರೆ ಯಾವುದೇ ಸರ್ಕಾರ ಮಾಡಿಲ್ಲ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments