Homeಕರ್ನಾಟಕಪ್ರಜ್ವಲ್‌ ಪ್ರಕರಣ | ಡಿಕೆಶಿ ನೇರವಾಗಿ ಭಾಗಿ; ಸಂಪುಟದಿಂದ ಸಿಎಂ ವಜಾ ಮಾಡಲಿ: ಕುಮಾರಸ್ವಾಮಿ ಆಗ್ರಹ

ಪ್ರಜ್ವಲ್‌ ಪ್ರಕರಣ | ಡಿಕೆಶಿ ನೇರವಾಗಿ ಭಾಗಿ; ಸಂಪುಟದಿಂದ ಸಿಎಂ ವಜಾ ಮಾಡಲಿ: ಕುಮಾರಸ್ವಾಮಿ ಆಗ್ರಹ

ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇರವಾಗಿ ಭಾಗಿಯಾಗಿದ್ದು, ಕೂಡಲೇ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಆಡಿಯೋ ಸಂಭಾಷಣೆಯಲ್ಲಿ ಡಿ ಕೆ ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದರು.

“ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೋಗಳನ್ನು ತಂದು ಕೊಟ್ಟಿದ್ದೆ ಡಿಕೆಶಿಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ” ಎಂದು ಆರೋಪಿಸಿದರು.

“ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಇಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ದೇವರಾಜೇಗೌಡ, ಶಿವರಾಮೇಗೌಡ ನಡುವಿನ ಮೊಬೈಲ್ ಸಂಭಾಷಣೆ ಹೊರಬಂದಾಗಿನಿಂದ ಡಿಕೆಶಿ ಮಾತನಾಡುತ್ತಿಲ್ಲ. ಅದಕ್ಕೆ ನಾನು ಕೇಳಿದ್ದು, ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು. ಆದರೆ, ಈ ವಿಷಯದಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ನೋಡರೆ ದೇವೆಗೌಡರ ಕುಟುಂಬವನ್ನು ರಾಜಕೀಯವಾಗಿ ನಿರ್ನಾಮ ಮಾಡಬೇಕು ಎಂದು ಸಂಚು ನಡೆಯುತ್ತಿದೆ” ಎಂದು ದೂರಿದರು.

“ಈ ನೆಲದ ಕಾನೂನಿನ ಪ್ರಕಾರ ಯಾರೇ ಆದರೂ ನ್ಯಾಯಕ್ಕೆ ತಲೆ ಬಾಗಲೇಬೇಕು. ನಿತ್ಯವೂ ಹಣ, ಅಧಿಕಾರದ ದುರುಪಯೋಗ ಮಾಡಿಕೊಂಡು ಮೆರೆಯುವ ವ್ಯಕ್ತಿಗಳು ಬಹಳ ದಿನ ಮೆರೆಯುವುದಕ್ಕೆ ಸಾಧ್ಯ ಇಲ್ಲ. ಪ್ರತಿಯೊಂದಕ್ಕೂ ಅಂತಿಮ ದಿನಗಳು ಬಂದೇ ಬರುತ್ತವೆ” ಎಂದು ಕಿಡಿಕಾರಿದರು.

“ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಿಬಿಐ ತನಿಖೆ ನಡೆಯಬೇಕು. ನಾವು ಕೂಡ ಏನು ಮಾಡಬೇಕು ಎಂಬ ಬಗ್ಗೆ ಕಾನೂ‌ನು ತಜ್ಞರ ಜತೆ ಚರ್ಚೆ ಮಾಡುತ್ತೇವೆ. ಈ ವಿಷಯದಲ್ಲಿ ಕಾನೂನು ಚೌಕಟ್ಟಿನಲ್ಲಿ, ದೇಶದ ಕಾನೂನು ವ್ಯವಸ್ಥೆಯಲ್ಲಿ ಸತ್ಯಾಂಶ ಹೊರಗೆ ತರಲು ಏನೇನು ಕ್ರಮ ತೆಗೆದುಕೊಳ್ಳಬೇಕೋ ಕೈಗೊಳ್ಳುತ್ತೇವೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದೇವರಾಜೇಗೌಡರಿಗೆ ಜೈಲಿನಲ್ಲಿ ಜೀವ ಭಯ

“ಜೈಲಿನಲ್ಲಿ ವಕೀಲ ದೇವೇರಾಜೇಗೌಡರಿಗೆ ಜೀವ ಭಯ ಇದೆ. ಈ ಸರ್ಕಾರದಲ್ಲಿ ಇರುವ ಬಹಳ ಜನರು ಯಾವ ಹಿನ್ನೆಲೆಯಿಂದ ಬಂದಿದ್ದಾರೆ ಎನ್ನುವ ಹಿನ್ನಲೆಯಲ್ಲಿ ನೋಡಿದರೆ ನಿಜ ಇರಬಹುದು. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಮಾಜಿ ಶಾಸಕ ಸುರೇಶ್ ಗೌಡ ಅವರು ಹೇಳಿರಬಹುದು” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments