ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ)ದ ಮೇಲೆ ಒತ್ತಡ ತಂದು ಅನೇಕ ಲೋಪದೋಷಗಳನ್ನು ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಲು ನಾವೆಲ್ಲರೂ ಸೇರಿ ಒತ್ತಡ ಹೇರಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಕರೆ ನೀಡಿದರು.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬುಧವಾರ ನಡೆದ ರಾಜ್ಯ ಉನ್ನತ ಶಿಕ್ಷಣ ಸಚಿವರ ಸಮ್ಮೇಳನದಲ್ಲಿ ಅವರು ಮಾತನಾಡಿ, “ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಲೋಪಗಳಿದ್ದವು. ನಮ್ಮ ಕರ್ನಾಟಕ ಸರ್ಕಾರ ಧೈರ್ಯದಿಂದ ಮುನ್ನುಗ್ಗಿ ಒಂದಷ್ಟು ತಿದ್ದುಪಡಿ ಮಾಡುವ ತೀರ್ಮಾನಗಳನ್ನು ತೆಗೆದುಕೊಂಡಿದೆ” ಎಂದರು.
“ಈ ಸಮ್ಮೇಳನದಿಂದ ಹೊರ ಬರುವ ವಿಚಾರಗಳು ಕೇಂದ್ರ ಸರ್ಕಾರಕ್ಕೆ ಮುಟ್ಟಬೇಕು. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಶೈಕ್ಷಣಿಕ ಗುಣಮಟ್ಟ ಅತ್ಯುತ್ತಮವಾಗಿದೆ. ನಾವು ಸೌಲಭ್ಯ ಕೊಡುವುದರಲ್ಲೂ ಮುಂದಿದ್ದೇವೆ. ನನಗೆ ನೆನಪಿರುವಂತೆ ಕಳೆದ 30 ವರ್ಷಗಳ ಹಿಂದೆಯೇ ಉತ್ತರ ಭಾರತದ ವಿದ್ಯಾರ್ಥಿಗಳು ದಕ್ಷಿಣ ಭಾರತ ರಾಜ್ಯಗಳಿಗೆ ಉತ್ತಮ ಶಿಕ್ಷಣ ಪಡೆಯುವ ಸಲುವಾಗಿ ವಲಸೆ ಬರುತ್ತಿರುವುದನ್ನು ಗಮನಿಸಿದ್ದೇನೆ” ಎಂದು ಹೇಳಿದರು.
“ಕರ್ನಾಟಕದಲ್ಲಿ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು, 250 ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳಿವೆ. ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶಗಳು ಹೆಚ್ಚು ಕಾಲೇಜುಗಳನ್ನು ಹೊಂದಿವೆ. ಆದರೆ ನಮ್ಮ ಶಿಕ್ಷಣ ನೀತಿಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಗಳಿಗೆ ತೆಗೆದುಕೊಂಡು ಹೋಗುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂಬುದೇ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ” ಎಂದರು.
ಗಣತಂತ್ರ ವ್ಯವಸ್ಥೆ ಕಾಪಾಡಬೇಕಿದೆ
“ನಮ್ಮ ಗಣತಂತ್ರ ವ್ಯವಸ್ಥೆ ವಿನೂತನವಾದುದು. ನಮ್ಮ ಸಂವಿಧಾನ ಹಲವಾರು ಹಕ್ಕುಗಳನ್ನು ನಮಗೆ ನೀಡಿದೆ. ಭಾಷೆಗಳ ವಿಚಾರದಲ್ಲಿಯೂ ನಾವು ವೈವಿದ್ಯತೆ ಹೊಂದಿದ್ದೇವೆ. ನಾವುಗಳು ರಾಜ್ಯಗಳ ಮಟ್ಟದಲ್ಲಿ ಸ್ಪರ್ಧಿಸುವುದು ಉತ್ತಮವಾದುದಲ್ಲ. ನಾವು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬೇಕಿದೆ. ಈ ಕಾರಣಕ್ಕೆ ವ್ಯವಸ್ಥೆಯನ್ನು ನಾವುಗಳೆಲ್ಲ ಸೇರಿ ಬದಲಾಯಿಸಬೇಕಿದೆ. ಕಳೆದ 30 ವರ್ಷಗಳಲ್ಲಿ ಇಡೀ ಶಿಕ್ಷಣ ವ್ಯವಸ್ಥೆಯೇ ಬದಲಾಗಿದೆ. ಜೊತೆಗೆ ಸಾಕಷ್ಟು ಬದಲಾವಣೆಗಳನ್ನೂ ನಾವು ನೋಡಿದ್ದೇವೆ. ಎಐ ತಂತ್ರಜ್ಞಾನ ಹೊಸದಾಗಿ ಬೆರಗು ಹುಟ್ಟಿಸಿದೆ. ಸವಾಲುಗಳನ್ನು ಇಟ್ಟುಕೊಂಡು ಯುವಜನತೆಗೆ ಅವಕಾಶ ಸೃಷ್ಟಿಸುವುದು ನಮ್ಮೆಲ್ಲರ ಗುರಿಯಾಗಬೇಕು” ಎಂದು ಹೇಳಿದರು.
“ವಿಶ್ವವಿದ್ಯಾನಿಲಯಗಳ ಆಡಳಿತ ವಿಚಾರದಲ್ಲಿಯೂ ನಾವು ಸಾಕಷ್ಟು ಸುಧಾರಣೆ ಮಾಡಬೇಕಾಗಿದೆ. ಈ ವಿಚಾರಗಳ ಬಗ್ಗೆಯೂ ನಾವು ಬೆಳಕು ಚೆಲ್ಲಬೇಕಾಗಿದೆ. ಏಕೆಂದರೆ ಕುಲಪತಿಗಳ ನೇಮಕ ಸೇರಿದಂತೆ ಸಾಕಷ್ಟು ವಿಚಾರಗಳು ನಮ್ಮ ಮುಂದಿವೆ. ಕುಲಪತಿಗಳು ಹಾಗೂ ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿಗೆ ಕನಿಷ್ಠ ಮಾನದಂಡಗಳು, ಅರ್ಹತೆಗಳನ್ನು ನಿಗಧಿ ಮಾಡಬೇಕಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಉನ್ನತ ಶಿಕ್ಷಣ ವ್ಯವಸ್ಥೆ ಗಟ್ಟಿಯಾಗಬೇಕಿದೆ. ಅನೇಕ ದೇಶಗಳ ವಿಶ್ವವಿದ್ಯಾಲಯಗಳಲ್ಲಿ ಭಾರತೀಯರು ಅತ್ಯುತ್ತಮ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಈ ಸಮ್ಮೇಳನದ ಮೂಲಕ ಜಾಗತಿಕ ಮಟ್ಟಕ್ಕೆ ನಮ್ಮ ಶಿಕ್ಷಣ ವ್ಯವಸ್ಥೆ ಬೆಳೆಯಲು ಅನೇಕ ತಜ್ಞರ ಸಲಹೆ ಉಪಯುಕ್ತವಾಗುತ್ತವೆ” ಎಂದರು.
“ಮಹಾರಾಷ್ಟ್ರವು ಉನ್ನತ ಶಿಕ್ಷಣ ವಿಚಾರದಲ್ಲಿ ಕರ್ನಾಟಕ ಹಾಗೂ ತೆಲಂಗಾಣಕ್ಕೆ ಹೋಲಿಕೆ ಮಾಡಿದರೆ ಪ್ರತ್ಯೇಕ ಮಾದರಿಯನ್ನು ಹೊಂದಿದೆ. ಉಳಿದ ಅನೇಕ ರಾಜ್ಯಗಳಲ್ಲಿ, ಕೇಂದ್ರದಲ್ಲಿ ಹಾಗೂ ರಾಜ್ಯಗಳಲ್ಲಿ ಬೇರೆ ಪಕ್ಷಗಳು ಅಧಿಕಾರದಲ್ಲಿರುವಾಗ ಕುಲಪತಿ ಹಾಗೂ ಉಪಕುಲಪತಿಗಳ ವಿಚಾರದಲ್ಲಿ ತೀರ್ಮಾನ ಮಾಡುವುದು ಕಷ್ಟವಾಗುತ್ತದೆ. ಆದರೂ ನಾವು ನಿಭಾಯಿಸುತ್ತಿದ್ದೇವೆ” ಎಂದು ತಿಳಿಸಿದರು.