Homeಕರ್ನಾಟಕ3,988 ಹೊಸ ಅಂಗನವಾಡಿ ತೆರೆಯಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

3,988 ಹೊಸ ಅಂಗನವಾಡಿ ತೆರೆಯಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯದಲ್ಲಿ ಹೊಸದಾಗಿ 3,988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಅವರು ಇಂದು (ಡಿ.13) ವಿಧಾನ ಪರಿಷತ್ತಿನಲ್ಲಿ ಸದಸ್ಯ ಜವರಾಯಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ, “ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕವಿರುತ್ತದೆ. ಏಕೆಂದರೆ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ ಹಂಚಿಕೆ ಅನುದಾನದಲ್ಲಿ ಕೇಂದ್ರದ ಪಾಲು ಶೇ.20ರಷ್ಟು ಇರುತ್ತದೆ” ಎಂದರು.

“ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನ ಪಾವತಿಯಲ್ಲಿ ಆಡಳಿತ ವೆಚ್ಚದಡಿ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.30ರಷ್ಟಿರುತ್ತದೆ. ಮುಂದುವರಿದು ಸಬ್ಸಿಡಿ ದರದಲ್ಲಿ ಅಕ್ಕಿ ಮತ್ತು ಗೋಧಿಯನ್ನು ಸಹ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ಹಾಲಿ ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅನುಮೋದಿತ 65,931 ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅನುದಾನಿತ 3,988 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಸದರಿ 3,988 ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ ರೂ. 22,923 ಲಕ್ಷ ಅನುದಾನ ಬಿಡುಗಡೆಯಾಗಿರುತ್ತದೆ. ಒಟ್ಟು 337 ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊoಡಿದೆ” ಎಂದರು.

ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ನೆರವು

“ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೆ ಕೂಡಾ ಗೃಹಲಕ್ಷ್ಮಿ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ” ಎಂದು ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರಿಸಿದರು.

“ರಾಜ್ಯದಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತೀ ತಿಂಗಳು ರೂ.2000 ,ಆರ್ಥಿಕ ಸಹಾಯ ಯೋಜನೆಯಡಿ ರೂ.30,000 ಗಳ ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ” ಎಂದರು.

“ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ 6,018 ದೇವದಾಸಿ ಮಹಿಳೆಯರನ್ನು ಸಮೀಕ್ಷೆಯಲ್ಲಿ ಗುರುತಿಸಿದ್ದು 2,653 ಮಂದಿ ಜೀವಂತವಿದ್ದಾರೆ. ಜಿಲ್ಲೆಗೆ ಸಂಬಂಧಿಸಿದಂತೆ ಮತ್ತೋಮ್ಮೆಸಮೀಕ್ಷೆ ನಡೆಸಿ ಅರ್ಹರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದ ಸಚಿವರು ಅನಿಷ್ಟ ಪದ್ಧತಿಯಾದ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments