ಸಮಾಜ ಕಲ್ಯಾಣ ಸಚಿವ ಡಾ. ಹೆಚ್ ಸಿ ಮಹದೇವಪ್ಪನವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳ ಸಮಾಜ ಕಲ್ಯಾಣ ಇಲಾಖೆಯ ಯೋಜನೆ/ಕಾರ್ಯಕ್ರಮಗಳು ಹಾಗೂ ಇಲಾಖೆಯ ಅಡಿಯಲ್ಲಿ ಬರುವ ನಿಗಮ ಮಂಡಳಿಗಳ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಪರಿಶಿಷ್ಟ ಸಮುದಾಯ ಜನರು ಹೆಚ್ಚಾಗಿರುವಂತಹ ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಕಲ್ಬುರ್ಗಿಯ ಕಂದಾಯ ವಿಭಾಗದಲ್ಲಿನ ಜನರ ಬದುಕನ್ನು ಸುಧಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲು ಮಾನ್ಯ ಸಚಿವರು ಸೂಚಿಸಿದರು.
ಬಹು ಮುಖ್ಯವಾಗಿ ವಸತಿ ಶಾಲೆಯ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತಂತೆ ಅಗತ್ಯ ಕ್ರಮ ವಹಿಸಲು ಶಾಲೆಯ ಸಿಬ್ಬಂದಿ ವರ್ಗದವರಿಗೆ ಅಗತ್ಯವಾದ ಸೂಚನೆಗಳನ್ನು ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಿಗೆ ಸಂಬಂಧಿಸಿದಂತೆ ಆಹಾರ ಮತ್ತು ಸ್ವಚ್ಛತಾ ನಿರ್ವಹಣೆಯ ಕುರಿತು ಗಮನ ಹರಿಸಬೇಕು ಮತ್ತು ಮಕ್ಕಳ ಪರಿಣಾಮಕಾರಿ ಶಿಕ್ಷಣಕ್ಕೆ ಪೂರಕವಾಗಿ ಕೆಲಸ ಮಾಡುವ ಬಗ್ಗೆ ಸಚಿವರು ತಿಳಿಸಿದರು.
ಅಧಿಕಾರಿಗಳು ಪರಿಶೀಲನೆಗಾಗಿ ಪರಿಶೀಲನೆ ಮಾಡದೇ ಫಲಿತಾಂಶ ಕೇಂದ್ರಿತವಾದ ಕೆಲಸವನ್ನು ಮಾಡಬೇಕು. ಕಾನೂನಿನ ವ್ಯಾಪ್ತಿಯಲ್ಲೇ ಕೆಲಸ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆ ಎಂದರೆ, ಸಮಾನತೆ, ಸ್ವಾತಂತ್ರ್ಯ, ನ್ಯಾಯದ ವಿಷಯಗಳನ್ನು ಜನ ಜನಿತವಾಗಿಸುವ ಜವಾಬ್ದಾರಿಯನ್ನು ಹೊಂದಿರುವ ಇಲಾಖೆಯಾಗಿದ್ದು ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿಷ್ಠೆಯಿಂದ ದುಡಿಯಬೇಕು ಎಂದು ಅವರು ತಿಳಿಸಿದರು.
ಇನ್ನು ಕೆಲವು ಜಿಲ್ಲೆಗಳಲ್ಲಿ ಹಾಜರಾತಿ ಪ್ರಮಾಣವು ಕಡಿಮೆ ಆಗಿದ್ದು ಶೋಷಿತ ವರ್ಗಗಳ ಮಕ್ಕಳು ಶಿಕ್ಷಣ ಪಡೆದು ಮುನ್ನಡೆಯಬೇಕೆಂಬ ಆಶಯಕ್ಕೆ ಧಕ್ಕೆ ಆಗಲಿದೆ. ಈ ನಿಟ್ಟಿನಲ್ಲಿ ಮಕ್ಕಳ ಶಾಲಾ ದಾಖಲಾತಿಯ ಪ್ರಮಾಣವು ಹೆಚ್ಚಳ ಆಗುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೃಜನಾತ್ಮಕವಾದ ಪ್ರಯತ್ನಗಳನ್ನು ನಡೆಸಬೇಕು. ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಲು ಎಲ್ಲ ಅಧಿಕಾರಿಗಳ ಜೊತೆಗೆ ಚರ್ಚಿಸಲು ಸೂಕ್ತವಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳುವುದೂ ಸಹ ಉತ್ತಮ ನಡೆ ಆಗಬಲ್ಲದು ಎಂದರು.
ಯಾವ ಅಧಿಕಾರಿಯೂ ಸಹ ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ತಿಳಿದುಕೊಳ್ಳದೇ ಶೋಷಿತರ ಪರವಾಗಿ ಕೆಲಸ ಮಾಡಲಾರ. ಈ ಹಿನ್ನಲೆಯಲ್ಲಿ ಅವರ ಆಶಯಗಳ ಬಗ್ಗೆ ಹೆಚ್ಚು ಜ್ಞಾನ ಹೊಂದುವ ಅನಿವಾರ್ಯತೆಯ ಬಗ್ಗೆ ಮಾನ್ಯ ಸಚಿವರು ಅಧಿಕಾರಿಗಳಿಗೆ ಮನವರಿಕೆ ಮಾಡಿದರು.