Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ | ಸಚಿವ ತಂಗಡಗಿ ಅಧ್ಯಕ್ಷತೆಯಲ್ಲಿ 47 ಸದಸ್ಯರ ಸಲಹಾ ಸಮಿತಿ ರಚನೆ

ರಾಜ್ಯೋತ್ಸವ ಪ್ರಶಸ್ತಿ | ಸಚಿವ ತಂಗಡಗಿ ಅಧ್ಯಕ್ಷತೆಯಲ್ಲಿ 47 ಸದಸ್ಯರ ಸಲಹಾ ಸಮಿತಿ ರಚನೆ

2025ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ಗೆ ವಿವಿಧ ಕ್ಷೇತ್ರಗಳ ಸಾಧಕರ ಆಯ್ಕೆಗೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆಯಲ್ಲಿ 47 ಸದಸ್ಯರನ್ನೊಳಗೊಂಡ ಸಲಹಾ ಸಮಿತಿಯನ್ನು ಸರ್ಕಾರ ರಚಿಸಿದೆ.

ಈ ಸಮಿತಿಯು ಸಾಹಿತ್ಯ, ವೈದ್ಯಕೀಯ, ಕೃಷಿ, ಸಮಾಜಸೇವೆ, ಚಲನಚಿತ್ರ, ಕ್ರೀಡೆ ಸೇರಿ ವಿವಿಧ ಕ್ಷೇತ್ರಗಳ ತಜ್ಞರನ್ನು ಒಳಗೊಂಡಿದೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಲಲಿತಕಲಾ ಅಕಾಡೆಮಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಪುಸ್ತಕ ಪ್ರಾಧಿಕಾರ, ಗಡಿ ಅಭಿವೃದ್ಧಿ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರತಿನಿಧಿಗಳು ಸಮಿತಿಯ ಪದನಿಮಿತ್ತ ಸದಸ್ಯರಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ನಟ ರವಿಚಂದ್ರನ್, ನಟಿ ಗಿರಿಜಾ ಲೋಕೇಶ್ ಸೇರಿದಂತೆ ಡಾ. ಸಿ.ಆರ್.ಚಂದ್ರಶೇಖರ್, ಮಾಲತಿ ಪಟ್ಟಣಶೆಟ್ಟಿ, ಸುಬ್ಬು ಹೊಲೆಯಾ‌ರ್, ಅಪ್ಪಗೆರೆ ತಿಮ್ಮರಾಜು, ಯಲ್ಲಪ್ಪ ರೆಡ್ಡಿ ಸೇರಿದಂತೆ ಹಲವರು ಸಲಹಾ ಸಮಿತಿ ಸದಸ್ಯರಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ 70ನೇ ವರ್ಷಾಚರಣೆ ಅಂಗವಾಗಿ ಈ ಬಾರಿ 70 ಸಾಧಕರಿಗೆ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿ ನೀಡಲಿದೆ. ಪ್ರಶಸ್ತಿಯು ತಲಾ ₹ 5 ಲಕ್ಷ ನಗದು ಹಾಗೂ 25 ಗ್ರಾಂ. ಚಿನ್ನದ ಪದಕ ಒಳಗೊಂಡಿರಲಿದೆ.

ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಚಿಸಲಾಗುವ ಸಲಹಾ ಸಮಿತಿ ಹಾಗೂ ಉನ್ನತ ಮಟ್ಟದ ಆಯ್ಕೆ ಸಮಿತಿಗಳು ಅಂತಿಮಗೊಳಿಸಲಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments