ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಎಸ್ಐಟಿ ಸಿದ್ಧತೆ ನಡೆಸಿದೆ.
ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಭಾನುವಾರ ಸಂಜೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.
ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣ ಅವರನ್ನು ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲೇ ಶನಿವಾರ ಸಂಜೆ ಎಸ್ಐಟಿ ಬಂಧಿಸಿತ್ತು. ಇನ್ನೂ ಹೆಚ್ಚಿಗೆ ತಲೆಮರೆಸಿಕೊಂಡು ಓಡಾಡಿದ್ರೆ ಕುಟುಂಬದ ವರ್ಚಸ್ಸಿಗೆ ಮತ್ತಷ್ಟು ಹಾನಿಯಾಗಬಹುದೆಂದು ಕುಟುಂಬ ಸದಸ್ಯರ ಸಲಹೆ ಮೇರೆಗೆ ಪ್ರಜ್ವಲ್ ಎಸ್ಐಟಿಗೆ ಶರಣಾಗಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಪ್ರಜ್ವಲ್ ರೇವಣ್ಣ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆ ಹೆಚ್ಚಿದ್ದು, ಎಸ್ಐಟಿ ತಂಡ ವಿಮಾನ ನಿಲ್ದಾಣದಲ್ಲಿ ಬಂಧಿಸಲು ಬಿಡು ಬಿಟ್ಟಿದೆ. ಹಾಗೆಯೇ ಮಂಗಳೂರು ವಿಮಾನ ನಿಲ್ದಾಣದಲ್ಲೂ ಪ್ರಜ್ವಲ್ ಆಗಮಿಸುವ ಮಅತುಗಳು ಕೇಳಿಬಂದಿದ್ದು, ಅಲ್ಲೂ ಕೂಡ ಎಸ್ಐಟಿ ಅಧಿಕಾರಿಗಳು ಬಂಧಿಸಲು ಸಜ್ಜಾಗಿದ್ದಾರೆ.
ಪ್ರಜ್ವಲ್ ದುಬೈಯಿಂದ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲುಕೌಟ್ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ವಿಮಾನದಿಂದ ಇಳಿದ ಕೂಡಲೇ ಬಂಧನವಾಗುವ ಸಾಧ್ಯತೆಯಿದೆ.