Homeಕರ್ನಾಟಕಕಂದಾಯ ಇಲಾಖೆಯಲ್ಲಿ ಎಲ್ಲ ಪೋಸ್‌ಗಳಿಗೂ ರೇಟ್ ನಿಗದಿ: ಕುಮಾರಸ್ವಾಮಿ ಆರೋಪ

ಕಂದಾಯ ಇಲಾಖೆಯಲ್ಲಿ ಎಲ್ಲ ಪೋಸ್‌ಗಳಿಗೂ ರೇಟ್ ನಿಗದಿ: ಕುಮಾರಸ್ವಾಮಿ ಆರೋಪ

ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ. ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿ 60% ಕಮೀಷನ್ ಆರೋಪವನ್ನು ಪುನರುಚ್ಚರಿಸಿದರು. “60% ಕಮೀಷನ್ ಆರೋಪಕ್ಕೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಗುತ್ತಿಗೆದಾರರೇ ಪರ್ಸಂಟೇಜ್ ಆರೋಪ ಮಾಡುತ್ತಿದ್ದಾರೆ. ಅವರನ್ನು ಪರ್ಸಂಟೇಜ್ ಕೇಳದಿದ್ದರೆ ಅವರು ಯಾಕೆ ಆರೋಪ ಮಾಡುತ್ತಿದ್ದರು. ಸರ್ಕಾರ ಅವರನ್ನೇ ಕೇಳಿ ದಾಖಲೆ ಪಡೆದುಕೊಳ್ಳಬೇಕು” ಎಂದರು.

“ಸಿದ್ದರಾಮಯ್ಯ ಅವರು ಮಹಾನ್ ನಾಯಕರು. ಪೇ ಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ದರು. ಅವರು ಇಲ್ಲಿಯವರೆಗೆ ಯಾವ ದಾಖಲೆ ಇಟ್ಟಿದ್ದಾರೆ ಜನರ ಮುಂದೆ. ಕೆಂಪಣ್ಣ ಹೇಳಿದರು ಕೆಂಪಣ್ಣ ಹೇಳಿದರು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೆಂಪಣ್ಣ ಅವರಿಂದ ಸಿದ್ದರಾಮಯ್ಯ ಅವರು ದಾಖಲೆ ಪಡೆದುಕೊಳ್ಳಬೇಕಿತ್ತಲ್ಲವೇ? ಈಗ ಗುತ್ತಿಗೆದಾರರೇ 60% ವಸೂಲಿ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಅದಕ್ಕಿಂತ ಸಾಕ್ಷಿ ಬೇಕಾ ಇವರಿಗೆ? ಈ ಆಟ ಸರಕಾರ ಬಿಡಬೇಕು” ಎಂದು ವಾಗ್ದಾಳಿ ನಡೆಸಿದರು.

ಕೃಷ್ಣಬೈರೇಗೌಡ ವಿರುದ್ದ ಕಿಡಿ

“ಮಗ ಸೋತಿರುವುದಕ್ಕೆ ಹತಾಶರಾಗಿ ಕುಮಾರಸ್ವಾಮಿ 60% ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ನಾನು ಮಗ ಸೋತಿರುವುದಕ್ಕೆ ಹತಾಶನಾಗಿದ್ದೇನೋ ಇಲ್ಲವೋ ಎಂಬುದು ಇರಲಿ. ಅದನ್ನು ಬಿಟ್ಟು ಮೊದಲು 60% ಕಮೀಷನ್ ಬಗ್ಗೆ ಉತ್ತರ ಹೇಳಲಿ” ಎಂದರು.

“ಕಂದಾಯ ಇಲಾಖೆ ಸತ್ಯ ಮಾರ್ಗದಲ್ಲಿ ನಡೆಯುತ್ತಿದೆಯಾ? ಬೆಂಗಳೂರು AC ಪೋಸ್ಟ್ ಗೆ ಎಷ್ಟು ದುಡ್ಡು ತೆಗೆದುಕೊಳ್ಳುತ್ತಿದ್ದೀರಿ? ಎಷ್ಟು ರೇಟ್ ಫಿಕ್ಸ್ ಮಾಡಿಕೊಂಡಿದ್ದೀರಾ? ಆ ಹಣ ಯಾರು ಯಾರಿಗೆ ಹೋಗುತ್ತದೆ? ಏನೇನು ದಂಧೆ ನಡೆಸುತ್ತಿದ್ದೀರಿ ಎನ್ನುವುದು ನಮಗೆ ಗೊತ್ತಿಲ್ಲವಾ? ಎಂದು ಕಂದಾಯ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ” ಎಂದು ಆರೋಪ ಮಾಡಿದರು.

ಸರಕಾರ ಸಹಿ ಮಾರಾಟಕ್ಕೆ ಇಟ್ಟಿದೆ

“ನಾನು ಕೂಡ ಎರಡು ಸಿಎಂ ಆಗಿ ಅಧಿಕಾರ ನಡೆಸಿದ್ದೇನೆ. ನಾನು ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ವಿಧಾನಸಭೆಯಲ್ಲಿಯೇ ಈ ಮಾತು ಹೇಳಿದ್ದೇನೆ. ಚುನಾವಣೆ ನಡೆಸಬೇಕಾದರೆ ಇನ್ನೊಬ್ಬರ ಹತ್ತಿರ ಕೈ ಚಾಚಲೇಬೇಕು. ಆದರೆ ನಾನು ಅಧಿಕಾರ ನಡೆಸುವಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ಈ ಸರಕಾರ ಪ್ರತಿಯೊಂದಕ್ಕೂ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ. ಪ್ರತಿಯೊಂದಕ್ಕೂ ಲೂಟಿ ಹೊಡೆದುಕೊಂಡು ಕೂತಿದ್ದಾರೆ. ಈ ಸರಕಾರದಲ್ಲಿ ರೇಟ್ ಕಾರ್ಡ್ ಮೊದಲೇ ಫಿಕ್ಸ್ ಆಗಿ ಹೋಗಿದೆ. ನಾನು ಪ್ರಾರಂಭದಲ್ಲೇ ಈ ಸರ್ಕಾರದ ರೇಟ್ ಕಾರ್ಡ್ ಬಗ್ಗೆ ಹೇಳಿದ್ದೆ” ಎಂದು ಕಿಡಿಕಾರಿದರು.

“ನಾನು ಸತ್ಯ ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ಇವತ್ತಿನ ರಾಜಕಾರಣಕ್ಕೆ ದುಡ್ಡು ಬೇಕು. ಪ್ರೀತಿ ವಿಶ್ವಾಸದಿಂದ ನಾವು ಕೆಲಸ ಮಾಡಿದಾಗ ಚುನಾವಣೆ ಸಮಯದಲ್ಲಿ ಯಾರೋ ನಾಲ್ವರು ಸಹಾಯ ಮಾಡುತ್ತಾರೆ. ಆದರೆ ಅಧಿಕಾರ ಇಟ್ಟುಕೊಂಡು ಪ್ರತಿದಿನ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ಈ ಸರಕಾರ ಪ್ರತಿಯೊಂದಕ್ಕೂ ತನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ. ಪ್ರತೀ ಕ್ಷಣವೂ ಈ ಸರಕಾರದಲ್ಲಿ ಮಾರಾಟವೇ ನಡೆಯುತ್ತಿದೆ” ಎಂದು ದೂರಿದರು.

ದಲಿತ ಶಾಸಕರ ಡಿನ್ನರ್ ಪಾರ್ಟಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, “SC-ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಟ್ಟಿಲ್ಲ, ಅದಕ್ಕೆ ಸಭೆ ಮಾಡುತ್ತಿದ್ದೇವೆ ಎಂದು ಅವರಲ್ಲಿ ಕೆಲವರು ಹೇಳಿದ್ದಾರೆ. ಡಿನ್ನರ್ ಪಾರ್ಟಿಯಲ್ಲಿ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಬಗ್ಗೆ ಚರ್ಚೆ ಮಾಡುವುದಾದರೆ ಕ್ಯಾಬಿನೆಟ್ ಇರುವುದು ಯಾಕೆ? SC-ST ಇರಲಿ ಯಾವುದೇ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗದೇ ಇದ್ದರೆ ಕ್ಯಾಬಿನೆಟ್ ನಲ್ಲಿ ಕೂತು ಚರ್ಚೆ ಮಾಡಬೇಕಾ? ಅಥವಾ ಡಿನ್ನರ್ ಪಾರ್ಟಿಯಲ್ಲಿ ಚರ್ಚೆ ಮಾಡಬೇಕಾ” ಎಂದು ಪ್ರಶ್ನಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments