ಖ್ಯಾತ ಪತ್ರಕರ್ತ, ಸಂಪಾದಕ, ಲೇಖಕ ಹಾಗೂ ಅಂಕಣಕಾರ ಟಿ.ಜೆ.ಎಸ್. ಜಾರ್ಜ್(97) ಬೆಂಗಳೂರಿನಲ್ಲಿ ನಿಧನರಾದರು.
ಥಾಯಿಲ್ ಜೇಕಬ್ ಸೋನಿ ಜಾರ್ಜ್ ಅವರ ಪೂರ್ಣ ಹೆಸರು. ಅವರು ಮೇ 7, 1928 ರಂದು ಕೇರಳದಲ್ಲಿ ಜನಿಸಿದ್ದರು. ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಪಡೆದ ಇವರು ನಂತರ ಮುಂಬೈನ ಫ್ರೀ ಪ್ರೆಸ್ ಜರ್ನಲ್ನಲ್ಲಿ ವೃತ್ತಿಜೀವನವನ್ನು ಆರಂಭಿಸಿದರು.
ದಶಕಗಳ ಕಾಲ ಅವರು ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್, ದಿ ಸರ್ಚ್ಲೈಟ್, ಫಾರ್ ಈಸ್ಟರ್ನ್ ಎಕನಾಮಿಕ್ ರಿವ್ಯೂಗಳಿಗೆ ಬರೆದಿದ್ದರು. ಹಾಂಗ್ ಕಾಂಗ್ನಲ್ಲಿ ಏಷ್ಯಾವೀಕ್ನ ಸ್ಥಾಪಕ ಸಂಪಾದಕರಾದರು. ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ಸಂಪಾದಕೀಯ ಸಲಹೆಗಾರರಾಗಿ ಜಾರ್ಜ್ ಸಾಮಾಜಿಕ ಅನ್ಯಾಯ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದರು.
ಸಾಪ್ತಾಹಿಕ ಅಂಕಣ ‘ಪಾಯಿಂಟ್ ಆಫ್ ವ್ಯೂ‘ 25 ವರ್ಷಗಳ ಕಾಲ ಬರೆದಿದ್ದರು. ಜೂನ್ 2022 ರಲ್ಲಿ ಕೊನೆಯ ಬಾರಿ ಬರೆದು ತಮ್ಮ ಅಂಕಣ ಬರಹಕ್ಕೆ ಪೂರ್ಣ ವಿರಾಮ ಹಾಕಿದರು. ಜಾರ್ಜ್ ಅವರ ಪಾಯಿಂಟ್ ಆಫ್ ವ್ಯೂ ಕನ್ನಡಪ್ರಭದಲ್ಲಿ ʼನೇರಮಾತುʼ ಹೆಸರಿನಲ್ಲಿ ಪ್ರಕಟವಾಗುತ್ತಿತ್ತು.
1,300 ವಾರಗಳ ಕಾಲ ನಿರಂತರ ಅಂಕಣ ಬರೆದಿದ್ದ ಇವರು ನೂರಾರು ಪತ್ರಕರ್ತರಿಗೆ ಮಾರ್ಗದರ್ಶನ ನೀಡಿದ್ದರು. ಸಾಹಿತ್ಯ ಮತ್ತು ಶಿಕ್ಷಣಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ 2011 ರಲ್ಲಿ ಕೇಂದ್ರ ಸರ್ಕಾರ ಇವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಪುರಸ್ಕರಿಸಿತ್ತು.
ಸಿಎಂ ಸೇರಿ ಗಣ್ಯರ ಸಂತಾಪ
“ಹಿರಿಯ ಪತ್ರಕರ್ತ, ಸಂಪಾದಕ ಮತ್ತು ಲೇಖಕ ಟಿಜೆಎಸ್ ಜಾರ್ಜ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ತಮ್ಮ ತೀಕ್ಷ್ಣವಾದ ಲೇಖನಿ ಮತ್ತು ರಾಜಿಯಾಗದ ಧ್ವನಿಯಿಂದ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಪತ್ರಿಕೋದ್ಯಮವನ್ನು ಶ್ರೀಮಂತಗೊಳಿಸಿದರು. ಓದುಗರನ್ನು ಯೋಚಿಸುವಂತೆ, ಪ್ರಶ್ನಿಸುವಂತೆ ಮತ್ತು ತೊಡಗಿಸಿಕೊಳ್ಳುವಂತೆ ಮಾಡಿದ ನಿಜವಾದ ಸಾರ್ವಜನಿಕ ಬುದ್ಧಿಜೀವಿ ಅವರು. ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು” ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.
ಕುಮಾರಸ್ವಾಮಿ ಸಂತಾಪ
“ಹಿರಿಯ ಪತ್ರಕರ್ತರು, ಲೇಖಕರು ಆಗಿದ್ದ ಪದ್ಮಭೂಷಣ ಟಿ.ಜೆ.ಎಸ್. ಜಾರ್ಜ್ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವುಂಟಾಯಿತು. ರಾಷ್ಟ್ರೀಯ, ಅಂತಾರಾಷ್ಟ್ರೀಯ ಪತ್ರಿಕೆಗಳ ಸಂಪಾದಕ, ಸಂಪಾದಕೀಯ ನಿರ್ದೇಶಕ, ಸಂಪಾದಕೀಯ ಸಲಹೆಗಾರ ಸೇರಿ ಅನೇಕ ಮಹತ್ವದ ಹೊಣೆಗಳನ್ನು ನಿರ್ವಹಿಸಿ ‘ಅನುಭವದ ಸಮೃದ್ಧ ಗಣಿ’ಯೇ ಆಗಿದ್ದ ಶ್ರೀಯುತರು, The New Indian Express ಪತ್ರಿಕೆಯಲ್ಲಿ ಬರೆಯುತ್ತಿದ್ದ Point of View ಅಂಕಣವನ್ನು ನಿಕಟವಾಗಿ ಓದಿದ್ದೇನೆ. ಸಂಗೀತ ಸಾಮ್ರಾಜ್ಞಿ ಶ್ರೀಮತಿ ಎಂ.ಎಸ್. ಸುಬ್ಬುಲಕ್ಷ್ಮಿ ಜೀವನ ಆಧರಿತ ಅವರ MS – A Life in Music ಕೃತಿಯನ್ನು ಓದಿ ಅವರ ಬರವಣಿಗೆಯ ಪ್ರತಿಭೆಗೆ ಮಾರು ಹೋಗಿದ್ದೆ. ಅಗಲಿದ ಹಿರಿಯ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳು, ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ ಸಂತಾಪ
“ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ನೋವಾಯಿತು. ಅವರ ಅಗಲಿಕೆಯಿಂದ ಭಾರತೀಯ ಪತ್ರಿಕಾರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, “ಭಾರತೀಯ ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಟಿ.ಜೆ.ಎಸ್ ಜಾರ್ಜ್ ಅವರು ಅಂಕಣಕಾರರಾಗಿ ರಾಜಕೀಯ ವಿದ್ಯಮಾನಗಳ ವಿಶ್ಲೇಷಣೆ ಮೂಲಕ ರಾಜಕೀಯ ವ್ಯವಸ್ಥೆಯನ್ನು ಸದಾ ಜಾಗೃತಗೊಳಿಸುವ ಕೆಲಸ ಮಾಡಿದ್ದರು. ಸುಮಾರು 25. ವರ್ಷಗಳ ಕಾಲ ನಿರಂತರ ಅಂಕಣಕಾರರಾಗಿ ಸಾಮಾಜಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ದ ನಿರಂತರ ತಮ್ಮ ಲೇಖನಿ ಮೂಲಕ ಧ್ವನಿ ಎತ್ತುವ ಕೆಲಸ ಮಾಡಿದ್ದರು. ಅವರ ಅಗಲಿಕೆಯಿಂದ ಭಾರತೀಯ ಪತ್ರಿಕಾರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಅವರು ಸಾಹಿತ್ಯ ಮತ್ತು ಪತ್ರಿಕಾ ರಂಗದಲ್ಲಿ ಸಲ್ಲಿಸಿದ ಸೇವೆಗೆ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.