Homeಕರ್ನಾಟಕಬಿಜೆಪಿಯ 18 ಸದಸ್ಯರ ಅಮಾನತು ಮಾಡಿ ಸಭಾಧ್ಯಕ್ಷ ಯು.ಟಿ ಖಾದರ್‌ ಆದೇಶ

ಬಿಜೆಪಿಯ 18 ಸದಸ್ಯರ ಅಮಾನತು ಮಾಡಿ ಸಭಾಧ್ಯಕ್ಷ ಯು.ಟಿ ಖಾದರ್‌ ಆದೇಶ

ವಿಧಾನಸಭೆಯ ಅಧಿವೇಶನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಸಭಾಧ್ಯಕ್ಷ ಯು.ಟಿ ಖಾದರ್‌ ಆದೇಶ ಹೊರಡಿಸಿದ್ದಾರೆ.

ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಮುತ್ತಿಗೆ ಹಾಕಿ, ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 18 ಶಾಸಕರನ್ನು ಅಮಾನತು ಮಾಡಲಾಗಿದ್ದು, ಈ ಶಾಸಕರು ಅರು ತಿಂಗಳೊಳಗೆ ನಡೆಯುವ ಯಾವುದೇ ಅಧಿವೇಶನದಲ್ಲಿ ಭಾಗಿಯಾಗುವಂತಿಲ್ಲ.

“ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗದು. ಪೀಠಕ್ಕೆ ಅಗೌರವ ತೋರಿದೀರಿ. ನಿಮ್ಮನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ” ಎಂದು ಸ್ಪೀಕರ್​ ಯುಟಿ ಖಾದರ್ ಅವರು ಒಬ್ಬೊಬ್ಬರ ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್ ಅವರು ಅವರನ್ನು ಎತ್ತಿಕೊಂಡು ಹೊರಹಾಕಿದರು.

ಅಮಾನತುಗೊಂಡ ಶಾಸಕರು

ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಬೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್., ಸಿ.ಕೆ. ರಾಮಮೂರ್ತಿ. ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ., ಎಸ್. ಆರ್. ವಿಶ್ವನಾಥ್, ಎಂ.ಆರ್. ಪಾಟೀಲ್ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.

ಏನಿದು ಪ್ರಕರಣ?

ರಾಜ್ಯ ವಿಧಾನ ಮಂಡಲದ ಇತಿಹಾಸದಲ್ಲೇ ಎಂದೆಂದೂ ಕಂಡರಿಯದ ವಿದ್ಯಮಾನಗಳು ಶುಕ್ರವಾರ ಸಂಭವಿಸಿತು. ಆಡಳಿತ ಪ್ರತಿಪಕ್ಷ ಸದಸ್ಯರ ನಡುವಿನ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದುಕೊಂಡು ಪರಸ್ಪರ ಕೈ ಕೈ ಮಿಲಾಯಿಸುವ ಹಂತ ತಲುಪಿತ್ತು.

ಸಭಾಧ್ಯಕ್ಷರ ಪೀಠದ ಪಕ್ಕದಲ್ಲಿ ನಿಂತು ಬಿಜೆಪಿ ಸದಸ್ಯರು ಕಾಗದ ಪತ್ರಗಳನ್ನು ಹರಿದೆಸೆಯುವ ಮೂಲಕ ಸದನದಲ್ಲಿ ಕೋಲಾಹಲದ ವಾತಾವರಣ ಸೃಷ್ಟಿಸಿದರು. ಇದರಿಂದ ಸುಗಮ ಕಲಾಪ ಸಾಧ್ಯವಾಗದೆ ಸಭಾಧ್ಯಕ್ಷ ಯು.ಟಿ.ಖಾದರ್ ಸದನವನ್ನು ಅಲ್ಪಕಾಲದವರೆಗೆ ಮುಂದೂಡಿದರು.

ಇದಾದ ನಂತರ ಮತ್ತೆ ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಸದನದ ನಿಯಮಾವಳಿಗಳನ್ನು ಉಲ್ಲಂಘಿಸಿ ಸಭಾಧ್ಯಕ್ಷರ ಪೀಠಕ್ಕೆ ಆಗೌರವ ತೋರಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಕಲಾಪದಿಂದ ಆರು ತಿಂಗಳವರೆಗೆ ಅಮಾನತುಗೊಳಿಸಿ ಸಭಾಧ್ಯಕ್ಷ ಯು ಟಿ ಖಾದರ್ ಆದೇಶಿಸಿದರು.

ಇದಕ್ಕೂ ಮುನ್ನ ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಲು ಆರಂಭಿಸಿದರು. ಈ ವೇಳೆ ತಕ್ಷಣವೇ ಎದ್ದು ನಿಂತ ಬಿಜೆಪಿಯ ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಹಾಗೂ ಡಾ. ಅಶ್ವತ್ಥನಾರಾಯಣ ಹನಿಟ್ರ್ಯಾಪ್ ವಿಷಯ ಪ್ರಸ್ತಾಪಿಸಿದರು.

“ಸಹಕಾರ ಮಂತ್ರಿ ರಾಜಣ್ಣ ಅವರು ತಮ್ಮನ್ನು ಹನಿ ಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ನಡೆಸಿದ ಪ್ರಯತ್ನದ ಬಗ್ಗೆ ಸದನದಲ್ಲಿಯೇ ಬಹಿರಂಗಪಡಿಸಿದ್ದಾರೆ. ಇದೊಂದು ಗಂಭೀರ ಸ್ವರೂಪದ ಪ್ರಕರಣವಾಗಿದೆ ಹೀಗಾಗಿ ಇದನ್ನು ನ್ಯಾಯಾಂಗ ತನಿಖೆ ಇಲ್ಲವೇ ಸಿಬಿಐ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ . ಈಗಾಗಲೇ ಪ್ರಕರಣದ ಬಗ್ಗೆ ಉನ್ನತ ತನಿಖೆ ನಡೆಸುವುದಾಗಿ ಗೃಹ ಮಂತ್ರಿಗಳು ಹೇಳಿದ್ದಾರೆ ಹೀಗಾಗಿ ಈ ಕುರಿತಂತೆ ಚರ್ಚೆ ಅನಗತ್ಯ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಆದರೆ, ಇದನ್ನು ವಿರೋಧಿಸಿದ ಬಿಜೆಪಿ ಸದಸ್ಯರು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಇಲ್ಲವೇ ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದರು. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಲು ಆರಂಭಿಸಿದರು.

ಇದನ್ನು ವಿರೋಧಿಸಿದ ಬಿಜೆಪಿ ಶಾಸಕರು ಘೋಷಣೆಗಳನ್ನು ಮೊಳಗಿಸಿ‌ ಸಿಎಂ ಉತ್ತರಕ್ಕೆ ಅಡ್ಡಿಪಡಿಸಲು ಮುಂದಾದರು. ಅಷ್ಟೆ ಅಲ್ಲ ಲ ಸಭಾಧ್ಯಕ್ಷರ ಪೀಠದ ಮುಂದೆ ಧಾವಿಸಿ ಧರಣಿ ಆರಂಭಿಸಿದರು. ಇದಕ್ಕೆ ಸೊಪ್ಪು ಹಾಕದ ಉತ್ತರ ನೀಡುವುದನ್ನು ಮುಂದುವರೆಸಿದರು.

ಇದರಿಂದ ಕೆರಳಿದ ಬಿಜೆಪಿಯ ಸಿ.ಕೆ.ರಾಮಮೂರ್ತಿ, ಮಹೇಶ್ ಟೆಂಗಿನಕಾಯಿ ಸೇರಿದಂತೆ ಹಲವು ಶಾಸಕರು ಸಿಡಿಗಳನ್ನು ಹಿಡಿದು ಸಭಾಧ್ಯಕ್ಷರ ಪೀಠದ ಪಕ್ಕಕ್ಕೆ ನುಗ್ಗಿ ಅವರ ಸಮೀಪದಲ್ಲಿ ನಿಂತು ಘೋಷಣೆ ಹಾಕ ತೊಡಗಿದರು. ಕೂಡಲೆ ಸದನದ ಮಾರ್ಷಲ್‌ಗಳು ಬಂದು ಸಭಾಧ್ಯಕ್ಷರ ಪೀಠವನ್ನು ಸುತ್ತುವರಿದರು. ಆದರೆ, ಸಭಾಧ್ಯಕ್ಷರು ಮಾರ್ಷಲ್ ಗಳನ್ನು ಹೊರಗೆ ಕಳುಹಿಸಿ ಧರಣಿ ನಿರತ ಶಾಸಕರನ್ನು ಕೆಳಗೆ ಹೋಗುವಂತೆ ಸೂಚಿಸಿದರು. ಆದರೆ ಇದನ್ನು ಲೆಕ್ಕಿಸದೆ ಬಿಜೆಪಿ ಶಾಸಕರು ಘೋಷಣೆ ಮೊಳಗಿಸುತ್ತಾ ಕಾಗದ ಪತ್ರಗಳನ್ನು ಹರಿದೆಸೆಯ ತೊಡಗಿದರು.

ಇದನ್ನು ಕಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭಾಧ್ಯಕ್ಷರ ಪೀಠ ಬಿಟ್ಟು ಕೆಳಗಿಳಿಯುವಂತೆ ಹಲವು ಬಾರಿ ಸೂಚನೆ ನೀಡಿದರು. ವಿಧಾನಸಭೆಯ ಜಂಟಿ ಕಾರ್ಯದರ್ಶಿಯವರು ಸಭಾಧ್ಯಕ್ಷರ ಬಳಿ ಬಂದು ಶಾಸಕರನ್ನು ಕೆಳಗಿಳಿಸುವಂತೆ ಸ್ಪೀಕರ್ ಅವರಿಗೆ ಸಲಹೆ ನೀಡಿದರು. ಸಭಾಧ್ಯಕ್ಷ ಸೂಚನೆ ಹೊರತಾಗಿಯೂ ಶಾಸಕರು ಕೆಳಗಿಳಿಯದೆ ಅಲ್ಲೇ ನಿಂತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕರು ಕೆಳಗೆ ಬರಬೇಕು. ಇಲ್ಲವಾದರೆ ಮಾರ್ಷಲ್ ಗಳು ತಳ್ಳುತ್ತಾರೆ. ನಿಮಗೆ ತಳ್ಳಿಸಿಕೊಳ್ಳಲು ಆಸೆಯೇ? ಎಂದು ಗದರಿದರು.

ಈ ಹಂತದಲ್ಲಿ ಸಭಾಧ್ಯಕ್ಷರು ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡುವುದಾಗಿ ಪ್ರಕಟಿಸಿದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನ ಮುಂದೂಡುವುದು ಬೇಡ ಹಣಕಾಸು ಮಸೂದೆ ಸೇರಿದಂತೆ ಕೆಲವು ವಿಧೇಯಕಗಳ ಅಂಗೀಕಾರವನ್ನು ಪೂರ್ಣಗೊಳಿಸಿದ ನಂತರ ಕಲಾಪ ಮುಂದೂಡುವಂತೆ ಸಲಹೆ ನೀಡಿದರು.

ಇದಕ್ಕೆ ಸಭಾಧ್ಯಕ್ಷರು ಸಮ್ಮತಿಸಿದ ಬಳಿಕ ಮುಖ್ಯಮಂತ್ರಿಗಳು ವಿಧೇಯಕ ಮಂಡನೆ ಆರಂಭಿಸಿದರು. ಇದರಿಂದ ಕೆರಳಿದ ಕೆಲವು ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಮುಂದಿದ್ದ ಕಾಗದ ಪತ್ರಗಳನ್ನು ಕಸಿದುಕೊಂಡು ಹರಿದು ಅಧಿಕಾರಿಗಳು ಮತ್ತು ಆಡಳಿತ ಪಕ್ಷದ ಶಾಸಕರತ್ತ ಎಸೆಯ ತೊಡಗಿದರು. ಇವರು ಹರಿದೆಸೆದ ಕಾಗದ ಪತ್ರಗಳು ಮುಖ್ಯಮಂತ್ರಿಗಳ ತಲೆಯ ಮೇಲೆ ಬೀಳುತೊಡಗಿದವು.

ಆಗ ಸಚಿವ ಭೈರತಿ ಸುರೇಶ್, ಶಾಸಕ ರಂಗನಾಥ್, ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಹಲವರು ಮುಖ್ಯಮಂತ್ರಿಯವರ ಸುತ್ತಲೂ ಕಾವಲಿಗೆ ನಿಂತರು. ಕಾಂಗ್ರೆಸ್‌ನ ಇತರ ಶಾಸಕರು ಮುಖ್ಯಮಂತ್ರಿಯವರ ಹಿಂಭಾಗದ ಸಾಲುಗಳಲ್ಲಿ ಬಂದು ಜಮಾಯಿಸಿದರು.

ಈ ವೇಳೆ ಮುಖ್ಯಮಂತ್ರಿಯವರ ಬಳಿ ನಿಂತಿದ್ದ ಕಾಂಗ್ರೆಸ್‌ ಸಚಿವರು, ಶಾಸಕರು ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ನೀವೇನೂ ರೌಡಿಗಳೇ? ಹೊಡೆಯುತ್ತೀರಾ ಬನ್ನಿ ನೋಡೋಣ ಎಂದೆಲ್ಲಾ ವಾಗ್ವಾದಗಳು ವಿನಿಮಯವಾದವು. ಅತ್ತ ಸ್ಪೀಕರ್ ಅವರ ಮುಖಕಕ್ಕೆ ಕಾಗದಪತ್ರಗಳು ತಾಗದಂತೆ ಮಾರ್ಷಲ್‌ಗಳು ಕೈ ಅಡ್ಡ ಇಟ್ಟು ತಡೆಯುತ್ತಿದ್ದರು.

ಗದ್ದಲದ ನಡುವೆಯೂ ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕ-2025, ಹಾಗೂ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು (ತಿದ್ದುಪಡಿ) ವಿಧೇಯಕ-2025, ಕರ್ನಾಟಕ ಧನ ವಿನಿಯೋಗ ವಿಧೇಯಕ-2025, ಕರ್ನಾಟಕ ಧನ ವಿನಿಯೋಗ (ಸಂಖ್ಯೆ-2) ವಿಧೇಯಕ-2025, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕಗಳು ಧ್ವನಿ ಮತದ ಮೂಲಕ ಅಂಗೀಕಾರಗೊಂಡವು. ಗದ್ದಲ ಮಿತಿಮೀರಿದಾಗ ಅನಿವಾರ್ಯವಾಗಿ ಕಲಾಪವನ್ನು ಸಭಾಧ್ಯಕ್ಷರು 15 ನಿಮಿಷಗಳ ಕಾಲ ಮುಂದೂಡಿದರು.

ಮಧ್ಯಾಹ್ನ ಮತ್ತೆ ಸದನ ಸಮಾವೇಶಗೊಂಡಾಗ ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದೆ ಘೋಷಣಾ ಫಲಕ ಹಿಡಿದು ಪ್ರತಿಭಟನೆ ಮುಂದುವರಿಸಿದರು. ಇದರ ನಡುವೆಯೇ ಕಾನೂನು ಮಂತ್ರಿ ಎಚ್.ಕೆ. ಪಾಟೀಲ್ ಅವರು ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಕೋರಿದರು.

ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಗದ್ದಲ ತೀವ್ರಗೊಳಿಸಿದರು. ಆಗ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬೆಳಗಿನ ಕಲಾಪದ ವೇಳೆ ನಡೆದ ಅಹಿತಕರ ಘಟನೆಯನ್ನು ಪ್ರಸ್ತಾಪಿಸಿ ಅದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಅಶ್ವತ್ಥ ನಾರಾಯಣ ಮುನಿರತ್ನ ಸೇರಿದಂತೆ 18 ಶಾಸಕರನ್ನು ಶಾಸನಸಭೆಯ ಕಲಾಪದಿಂದ ಅನರ್ಹಗೊಳಿಸುವ ಪ್ರಸ್ತಾಪ ಮಂಡಿಸಿದರು.

ಇದನ್ನು ಬೆಂಬಲಿಸಿ ಮಾತನಾಡಿದ ಕಾನೂನು ಸಚಿವ ಎಚ್ ಕೆ ಪಾಟೀಲ್ ಸಭಾಧ್ಯಕ್ಷರ ಪೀಠಕ್ಕೆ ಅಗೌರವವನ್ನು ಸಹಿಸಲು ಸಾಧ್ಯವಿಲ್ಲ ಕರ್ನಾಟಕ ವಿಧಾನಸಭೆಗೆ ದೇಶದಲ್ಲೇ ಅತ್ಯಂತ ಹೆಚ್ಚು ಗೌರವವಿದೆ ಇಂತಹ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡ ಶಾಸಕರನ್ನು ಆರು ತಿಂಗಳ ಕಾಲ ಕಲಾಪದಿಂದ ಅಮಾನತುಗೊಳಿಸುವ ಸಭಾಧ್ಯಕ್ಷರ ನಿರ್ಣಯವನ್ನು ಬೆಂಬಲಿಸುವುದಾಗಿ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments