ಆರ್ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ದುರಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎ1, ಎ2, ಎ3 ಆರೋಪಿಗಳಾಗಿದ್ದಾರೆ. ಆದ್ದರಿಂದ ಎಲ್ಲರೂ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ವಿಧಾನಸಭೆಯಲ್ಲಿ ಸುದೀರ್ಘವಾಗಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂವೇದನೆ ಇದ್ದರೆ, ರಾಜ್ಯದ ಜನರ ಕ್ಷಮೆ ಕೇಳಬೇಕು. ಇದರ ಸಂಪೂರ್ಣ ಹೊಣೆಯನ್ನು ಮೂವರೂ ವಹಿಸಿಕೊಳ್ಳಬೇಕು. ಜೊತೆಗೆ ರಾಜೀನಾಮೆ ನೀಡಬೇಕು ಹಾಗೂ ಸಿಬಿಐ ತನಿಖೆ ನಡೆಯಬೇಕು. ಇನ್ನು ಮುಂದಾದರೂ ಇಂತಹ ಘಟನೆ ನಡೆಯದೇ ಇರಲು ನಿಯಮ ರೂಪಿಸಬೇಕು ಹಾಗೂ ಸದನ ಸಮಿತಿ ನೇಮಕ ಮಾಡಬೇಕು. ನೋವಿನಲ್ಲಿ ಕೈ ತೊಳೆಯುತ್ತಿರುವ ತಂದೆ ತಾಯಿಗೆ ನ್ಯಾಯ ಸಿಗಬೇಕು” ಎಂದು ಒತ್ತಾಯಿಸಿದರು.
“ಜೂನ್ 3ರಂದು ಆರ್ಸಿಬಿ ಕ್ರಿಕೆಟ್ ತಂಡ ಗೆದ್ದ ನಂತರ ಇಡೀ ರಾಜ್ಯದಲ್ಲಿ ಸಂಭ್ರಮಾಚರಣೆ ನಡೆದಿತ್ತು. ಹೊಸ ವರ್ಷದ ಆಚರಣೆಗಿಂತಲೂ ಹೆಚ್ಚಿನ ಆಚರಣೆ ಆಗ ನಡೆದಿತ್ತು. ಅಭಿಮಾನಿಗಳು ಬೀದಿಗಿಳಿದು ಕುಣಿದಾಡಿದ್ದರು. ಪೊಲೀಸರು ರಸ್ತೆಗಳಲ್ಲಿ ನಿಂತು ಜನದಟ್ಟಣೆಯನ್ನು ನಿರ್ವಹಣೆ ಮಾಡಿದ್ದರು. ಮಧ್ಯರಾತ್ರಿ ಕಳೆದು ಮುಂಜಾನವೆರೆಗೆ ಸಂಭ್ರಮಾಚರಣೆ ನಡೆದು, ಪೊಲೀಸರಿಗೆ ಬಹಳ ಸುಸ್ತಾಗಿತ್ತು. ಇವೆಲ್ಲವೂ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಗೊತ್ತಿತ್ತು. ಈ ಸಂಭ್ರಮವನ್ನು ಕ್ರೆಡಿಟ್ ಆಗಿ ಸರ್ಕಾರಕ್ಕೆ ವರ್ಗಾವಣೆ ಮಾಡಿಕೊಳ್ಳಲು ʼಕ್ರೆಡಿಟ್ ವಾರ್ʼ ನಡೆಯಿತು” ಎಂದರು.
“ಕಾವೇರಿ ನಿವಾಸದಲ್ಲಿ ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹಾಗೂ ಗೋವಿಂದರಾಜು ಸಭೆ ನಡೆಸಿದ್ದರು. ಅಲ್ಲಿಗೆ ಬಂದ ಸಿಎಂ ಸಿದ್ದರಾಮಯ್ಯ ವಿಕ್ಟರಿ ಪರೇಡ್ ಬೇಡ, ಉಳಿದ ಕಾರ್ಯಕ್ರಮ ಮಾಡಿ ಎಂದು ಸೂಚನೆ ನೀಡುತ್ತಾರೆ. ಅದೇ ವೇಳೆ ವಿಧಾನಸೌಧ ಮುಂಭಾಗ ನಡೆಯುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ದೂರವಾಣಿ ಮೂಲಕ ರಾಜ್ಯಪಾಲರನ್ನು ಆಹ್ವಾನಿಸುತ್ತಾರೆ. ಆದರೆ ಕಾಲ್ತುಳಿತ ದುರಂತ ನಡೆದ ಬಳಿಕ ನಾನು ರಾಜ್ಯಪಾಲರನ್ನು ಆಹ್ವಾನಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಬಳಿಕ ನಾನೇ ಆಹ್ವಾನಿಸಿದೆ ಎಂದು ಹೇಳುತ್ತಾರೆ” ಎಂದು ಹೇಳಿದರು.
“ಡಿಸಿಎಂ ಡಿ.ಕೆ.ಶಿವಕುಮಾರ್ ವಿಮಾನ ನಿಲ್ದಾಣಕ್ಕೆ ಹೋಗಿ ಆರ್ಸಿಬಿ ಆಟಗಾರರಿಗೆ ಶುಭಾಶಯ ಕೋರಿದ್ದರು. ನಂತರ ಕಾರ್ನಲ್ಲಿ ಕುಳಿತು ರಾಯಲ್ ಚಾಲೆಂಜರ್ಸ್ ವಿಸ್ಕಿ ಬಾವುಟ ಹಿಡಿದುಕೊಂಡು ವೀಡಿಯೋ ಮಾಡಿದ್ದರು. ಇದು ಉಪಮುಖ್ಯಮಂತ್ರಿ ಹಾಗೂ ಸರ್ಕಾರದ ಘನತೆಗೆ ಶೋಭೆ ತರುವುದಿಲ್ಲ. ಉಪಮುಖ್ಯಮಂತ್ರಿಗೆ ಶಿಷ್ಟಾಚಾರ ಇರುವಾಗ ಒಂದು ಮದ್ಯದ ದೊರೆಯ ತಂಡದ ಬಾವುಟ ಹಿಡಿಯುವುದು ಸರಿಯಲ್ಲ” ಎಂದು ಹೇಳಿದರು.
“ನ್ಯಾ.ಡಿಕುನ್ಹಾ ಆಯೋಗದ ಪ್ರಕಾರ, 515 ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ 194 ಮಂದಿ ಮಾತ್ರ ಬಂದೋಬಸ್ತ್ ರಿಜಿಸ್ಟರ್ನಲ್ಲಿ ಸಹಿ ಹಾಕಿದ್ದರು. ಹಿರಿಯ ಅಧಿಕಾರಿಗಳು ಸಾವಿನ ಬಗ್ಗೆ ಸಚಿವರ ಗಮನಕ್ಕೆ ತಂದರೂ ಕಾರ್ಯಕ್ರಮ ಸ್ಥಗಿತಗೊಳ್ಳುವುದಿಲ್ಲ. ಆರ್ಸಿಬಿ ತಂಡದವರು ಕಪ್ನ್ನು ಡಿಸಿಎಂ ಡಿ.ಕೆ.ಶಿವಕುಮಾರ್ಗೆ ತಂದುಕೊಡುತ್ತಾರೆ. ಕಪ್ಗೆ ಮುತ್ತಿಕ್ಕುವುದು, ಕಪ್ ಎತ್ತಿ ಹಿಡಿದು ಪ್ರದರ್ಶನ ಮಾಡುವುದು ಬೇಕಿತ್ತಾ” ಎಂದು ಪ್ರಶ್ನಿಸಿದರು.
ಆರ್ ಅಶೋಕ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು
ಆರ್ಸಿಬಿ ವಿಜಯೋತ್ಸವದ ವೇಳೆ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ನೀಡದ ಗೃಹ ಸಚಿವರ ನಡೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದು ನಿಮ್ಮದೇ ಪಕ್ಷವಲ್ಲವೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಅಶೋಕ್ ಅವರಿಗೆ ತಿರುಗೇಟು ನೀಡಿದ್ದಾರೆ.
ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆ ನಡೆಸುತ್ತಿರುವಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಧ್ಯ ಪ್ರವೇಶಿಸಿ ಛೇಡಿಸಿದರು.
ಆರ್ಸಿಬಿ ಕೇವಲ ದುಡ್ಡು ಮಾಡುವ ಉದ್ದೇಶ ಹೊಂದಿದೆಯೇ ಹೊರತು ಅವರಿಂದ ಯಾವುದೇ ಉತ್ತಮ ಕೆಲಸವಾಗಿಲ್ಲ. ಸರ್ಕಾರ ಜನರ ಸಂಭ್ರಮಾಚರಣೆ ವೇಳೆ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿ ಈ ಕಾರ್ಯಕ್ರಮ ಆಯೋಜಿಸಿತು. ತಾರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಈ ಕಾಲ್ತುಳಿತ ಪ್ರಕರಣ ಸಂಭವಿಸಿದ್ದು, ಇದಕ್ಕೆ ಸರ್ಕಾರವೇ ಹೊಣೆ ಎಂದು ಆರ್. ಅಶೋಕ್ ಅವರು ಆರೋಪ ಮಾಡಿದರು.
ಇದಕ್ಕೆ ಪ್ರತ್ಯುತ್ತರ ನೀಡಿದ ಡಿಸಿಎಂ ಅವರು, “ಅಭಿಮಾನಿಗಳ ವಿಜಯೋತ್ಸವದ ವೇಳೆ ಮೆರವಣಿಗೆಗೆ ಸರ್ಕಾರ ನಿರಾಕರಿಸಿದಾಗ ನಿಮ್ಮ ಪಕ್ಷದ ವತಿಯಿಂದ ಬಂದ ಟ್ವೀಟ್ ಬಗ್ಗೆಯೂ ಮಾತನಾಡಿ. ಅದನ್ನು ಯಾಕೆ ಹಾಗೇ ಬಿಡುತ್ತೀರಿ? ಹಲವಾರು ವರ್ಷಗಳ ಅಭಿಮಾನಿಗಳ ಕನಸನ್ನು ಆರ್ ಸಿಬಿ ಈ ವರ್ಷ ನನಸು ಮಾಡಿದೆ. ಆದರೆ ತೆರೆದ ಬಸ್ ನಲ್ಲಿ ಆಟಗಾರರ ವಿಜಯೋತ್ಸವಕ್ಕೆ ಅನುಮತಿ ನಿರಾಕರಿಸುವ ಮೂಲಕ ಆಕಸ್ಮಿಕ ಗೃಹ ಸಚಿವ ಪರಮೇಶ್ವರ್ ಅವರು ತಾವೊಬ್ಬ ಅಸಮರ್ಥ ಹಾಗೂ ಅದಕ್ಷ ಎಂಬುದನ್ನು ಸಾಬೀತುಪಡಿಸಿದ್ದಾರೆ. ತಮ್ಮ ನೆಚ್ಚಿನ ಆಟಗಾರರನ್ನು ಅತಿ ಹತ್ತಿರದಿಂದ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದು, ಅಭಿಮಾನಿಗಳ ಸಂಭ್ರಮಕ್ಕೆ ಕಲ್ಲು ಹಾಕಿದ ಪರಮೇಶ್ವರ್’ ಎಂದು ಬಿಜೆಪಿ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿತ್ತು. ಆ ಬಗ್ಗೆಯೂ ನೀವು ಹೇಳಬೇಕಲ್ಲವೇ” ಎಂದು ಕಾಲೇಳೆದರು.