ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.
ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ ತಕರಾರಿಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಪ್ರಧಾನಿಗಳ ಹೇಳಿಕೆ ಸರಿಯಿಲ್ಲ
ಪ್ರಧಾನಿ ನರೇಂದ್ರ ಮೋದಿಯವರು ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ್ದು ಈ ಬಗ್ಗೆ ಕರ್ನಾಟಕದಲ್ಲಿಯೂ ಮಾಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ. ಪ್ರಧಾನಿಗಳು ಹೇಳಿರುವುದು ಸರಿಯಾದ ಕ್ರಮವಲ್ಲ. ಅದಕ್ಕೆ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು.
ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ
ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಪ್ರಯಾಣ ಬೆಳಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ ಎಂದರು.
ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸರಿಯಾಗಿ ನಿರ್ವಹಿಸಿಲ್ಲ
ನೀಟ್ ಪ್ರಶ್ನೆ ಪತ್ರಿಕೆ ಉತ್ತರ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾತನಾಡಿ ನೀಟ್ ಕೇಂದ್ರ ಸರ್ಕಾರ ಪರೀಕ್ಷೆಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ.ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.


