– ಕಸ್ತೂರಿ ರಂಗನ್ ವರದಿ ಕುರಿತು ಸಾರ್ವಜನಿಕರೊಂದಿಗೆ ನಡೆಸಿದ ನೇರ ಸಂವಾದ ಸಿಎಂ ಡಿ ಕೆ ಶಿವಕುಮಾರ್
ರಾಜ್ಯ ಸರ್ಕಾರ ಸ್ಪರ್ಷವಾಗಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿದ್ದರೂ, ಇದರ ಜಾರಿಗೆ ಏಳನೇ ಬಾರಿ ಕರಡು ಅಧಿಸೂಚನೆ ಹೊರಡಿಸುವ ಮೂಲಕ ಕೇಂದ್ರ ಸರ್ಕಾರ ಮಲೆನಾಡಿನ ಜನರನ್ನು ಮತ್ತೆ ಬೀದಿಗೆ ತರುವ ಕೆಲಸ ಮಾಡಲು ಹೊರಟಿದೆ. ಈ ವರದಿಯನ್ನು ನಮ್ಮ ಸರ್ಕರ ಮತ್ತೆ ತಿರಸ್ಕರಿಸಲಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗುಡುಗಿದ್ದಾರೆ.
ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಕಸ್ತೂರಿ ರಂಗನ್ ವರದಿ ಕುರಿತು ಸಾರ್ವಜನಿಕರೊಂದಿಗೆ ನಡೆಸಿದ ನೇರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಗಳು ಮಲೆನಾಡಿನ ಜನರ ಮನೆ ಬಾಗಿಲಿಗೆ ಬಂದು ಅವರ ಸಮಸ್ಯೆಗಳನ್ನು ಆಲಿಸುತ್ತಿರುವುದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಮಲೆನಾಡಿನ ಜನರ ರಕ್ಷಣೆ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ. ಕಸ್ತೂರಿ ರಂಗನ್ ವರದಿ ಸೇರಿದಂತೆ ಇಲ್ಲಿನ ಹಲವು ಸಮಸ್ಯೆಗಳಿಗೆ ಮುಖ್ಯಮಂತ್ರಿಗಳಿಂದ ಪರಿಹಾರ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಶರಾವತಿ ಸಂತ್ರಸ್ತರ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಬಗರ್ ಹುಕುಂ ಹಕ್ಕುಪತ್ರ ವಿತರಣೆ ಕಾರ್ಯವೂ ಸಂಪೂರ್ಣಗೊಂಡಿಲ್ಲ. ಇಂತಹ ಹಲವು ಸಮಸ್ಯೆಗಳ ನಡುವೆ ಇದೀಗ ಕಸ್ತೂರಿ ರಂಗನ್ ವರದಿ ಮತ್ತೊಂದು ದೊಡ್ಡ ಸವಾಲಾಗಿ ಎದುರಾಗಿದೆ ಎಂದು ಹೇಳಿದರು.
ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಅವರನ್ನು ಸ್ಮರಿಸಿದ ಸಚಿವರು
ಕೇಂದ್ರ ಸರ್ಕಾರ ಪದೇ ಪದೇ ಅರಣ್ಯವಾಸಿಗಳು ಹಾಗೂ ಮಲೆನಾಡಿನ ಜನರಿಗೆ ತೊಂದರೆ ನೀಡುವ ಕೆಲಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಮಲೆನಾಡಿನ ಹಕ್ಕುಗಳಿಗಾಗಿ ಹೋರಾಡಿದ ಕಾಗೋಡು ತಿಮ್ಮಪ್ಪ ಹಾಗೂ ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರನ್ನು ಸ್ಮರಿಸಲೇಬೇಕು ಎಂದರು.
ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಉಚಿತ ಪಂಪ್ಸೆಟ್ ಯೋಜನೆಯ ಪರಿಣಾಮವಾಗಿ ಮಲೆನಾಡಿನ ಭಾಗದಲ್ಲಿ, ಅದರಲ್ಲೂ ಶಿವಮೊಗ್ಗ ಜಿಲ್ಲೆಯಲ್ಲಿ ಅಡಕೆ ಬೆಳೆ ವಿಸ್ತರಣೆಗೊಂಡಿದೆ. ಇಂದು ಜಿಲ್ಲೆಯಲ್ಲಿ ಸುಮಾರು 1.48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿದೆ ಎಂದು ಹೇಳಿದರು.
ಅಡಕೆ ಬೆಳೆಗಾರರಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಪ್ರಮಾಣದ ತೆರಿಗೆ ಆದಾಯ ಹೋಗುತ್ತಿದೆ. ಇದನ್ನು ಕೇಂದ್ರ ಸರ್ಕಾರ ಅರ್ಥಮಾಡಿಕೊಳ್ಳಬೇಕು. ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಸೇಲ್ಸ್ಟ್ಯಾಕ್ಸ್ನಿಂದ ಅಡಕೆ ಬೆಳೆಗಾರರು ಸಮಸ್ಯೆ ಎದುರಿಸಿದ್ದಾರೆ ಎಂದು ಸಚಿವರು ಆರೋಪಿಸಿದರು.
ಏಕವಚನ ಬಳಕೆಯಿಂದ ಸಮಸ್ಯೆ ಬಗೆಹರಿಯುವುದಿಲ್ಲ
ತಮ್ಮ ವಿರುದ್ಧ ಜಿಲ್ಲೆಯ ಸಂಸದ ಬಿ ವೈ ರಾಘವೇಂದ್ರ ಅವರು ಏಕವಚನದಲ್ಲಿ ಮಾತನಾಡಿರುವುದನ್ನು ಉಲ್ಲೇಖಿಸಿದ ಸಚಿವರು, “ನಾನು ಆ ರೀತಿ ಮಾತನಾಡಬಹುದು. ಆದರೆ ನನಗೂ ಘನತೆ ಇದೆ. ಆ ರೀತಿ ನಾನು ಮಾತನಾಡುವುದಿಲ್ಲ. ಏಕವಚನದಲ್ಲಿ ಮಾತನಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ಇವತ್ತು ಏನಾದರೂ ಸಮಸ್ಯೆಗೆ ಪರಿಹಾರ ಸಿಗುವುದಾದರೆ ಅದು ನಮ್ಮ ಮುಖ್ಯಮಂತ್ರಿಗಳಿಂದ ಮಾತ್ರ” ಎಂದರು.
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಕಾವೇರಿ ನೀರು ಬಿಡುವುದಿಲ್ಲ ಎಂಬ ವಿಚಾರದಲ್ಲಿ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ವಿಶೇಷ ಅಧಿವೇಶನ ಕರೆದಿದ್ದರು. ಇದೀಗ ಅವರ ಶಿಷ್ಯರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂಬ ನಿಲುವಿನೊಂದಿಗೆ ವಿಶೇಷ ಅಧಿವೇಶನ ಕರೆದಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು.
ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳು ಆಗಮಿಸಿ ಇಲ್ಲಿನ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸುತ್ತಿರುವುದು ಮಹತ್ವದ ಬೆಳವಣಿಗೆ. ಪರಿಸರ ಉಳಿದಿದ್ದರೆ ಅದು ನಮ್ಮ ಪೂರ್ವಜರು ಹಾಗೂ ಇಲ್ಲಿನ ರೈತರು ಸಂರಕ್ಷಿಸಿಕೊಂಡು ಬಂದಿರುವುದರಿಂದ ಎಂದು ಹೇಳಿದರು.
ಭೂಕುಸಿತ ಸಂತ್ರಸ್ತ ಕುಟುಂಬಗಳಿಗೆ ಮನೆ ನೀಡಲು ಮನವಿ
ತೀರ್ಥಹಳ್ಳಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಮೂವರು ಕುಟುಂಬಗಳಿಗೆ ಸರ್ಕಾರದಿಂದ ಮನೆಗಳನ್ನು ಪರಿಹಾರವಾಗಿ ನೀಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಪರಿಶೀಲಿಸಿ ಅಗತ್ಯ ಪರಿಹಾರ ಕಲ್ಪಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಅವರು ಮನವಿ ಮಾಡಿದರು.
ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರೈತರ ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳು ಮಲೆನಾಡ ರೈತರು, ಕಸ್ತೂರಿ ರಂಗನ್ ವರದಿ ಜಾರಿ ಹಾಗೂ ತಾವು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆದರು.
ಕಸ್ತೂರಿ ರಂಗನ್ ವರದಿಯ ಕುರಿತು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ನಮ್ಮ ಸರ್ಕಾರ ಸದಾ ರೈತರ ಪರವಾಗಿರಲಿದೆ ಎಂದು ಮಾನ್ಯ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಸಚಿವರಾದ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಸಂಸದ ಬಿ ವೈ ರಾಘವೇಂದ್ರ, ಶಾಸಕ ಬೇಳೂರು ಗೋಪಾಲಕೃಷ್ಣ, ಆರಗ ಜ್ಞಾನೇಂದ್ರ, ಶಾರದ ಪೂರ್ಯನಾಯ್ಕ್, ಎಸ್ ಎನ್ ಚನ್ನಬಸಪ್ಪ, ಪರಿಷತ್ ಸದಸ್ಯರಾದ ಬಲ್ಕಿಸ್ ಬಾನು, ಧನಂಜಯ್ ಸರ್ಜಿ, ಡಿ ಎಸ್ ಅರುಣ್ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಂಜುನಾಥ ಗೌಡ, ಭದ್ರಾ ಅಚ್ಚುಕಟ್ಟು ಪ್ರದೇಶ ಪ್ರಾಧಿಕಾರ ಅಧ್ಯಕ್ಷ ಅಂಶುಂಮನ್, ಸೂಡಾ ಅಧ್ಯಕ್ಷ ಎಚ್ ಎಸ್ ಸುಂದರೇಶ್, ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ ಎಸ್ ಚಂದ್ರಭೂಪಾಲ, ಶ್ರೀನಿವಾಸನ್ ಕರಿಯಣ್ಣ, ಆರ್ ಪ್ರಸನ್ನ ಕುಮಾರ್, ಹೆಚ್ ಪಿ ಯೋಗೀಶ್, ಎಂ ಶ್ರೀಕಾಂತ್ ಮತ್ತಿತರರು ಉಪಸ್ಥಿತರಿದ್ದರು.


