ಸಾರ್ವಜನಿಕ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಡೆಯಲು ಕೈಎತ್ತಿದ್ದರಿಂದ ಅವಮಾನಕ್ಕೆ ಒಳಗಾಗಿರುವುದಾಗಿ ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿದ್ದಾರೆ.
ಈ ವಿಚಾರ ಪ್ರಸ್ತಾಪಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
“ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆಯಾಗಿದೆ. ಸಿದ್ದರಾಮಯ್ಯ ಅವರ ನಡೆಯಿಂದ ಒಬ್ಬ ಕರ್ತವ್ಯನಿಷ್ಠ ಅಧಿಕಾರಿಯ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಇಡೀ ಪೊಲೀಸ್ ಇಲಾಖೆಯ ಮನೋಬಲಕ್ಕೆ ಚ್ಯುತಿ ತಂದಿದೆ. ಅಧಿಕಾರಶಾಹಿಯ ನೈತಿಕತೆಗೆ ಪೆಟ್ಟು ಕೊಟ್ಟಿದೆ, ನೌಕರಶಾಹಿಯ ಆತ್ಮಸ್ಥೈರ್ಯ ಕುಸಿದಿದೆ” ಎಂದು ಟೀಕಿಸಿದ್ದಾರೆ.
“ಸಿಎಂ ಸಿದ್ದರಾಮಯ್ಯ ನವರೇ, ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ನೀವು ಬಹಿರಂಗ ವೇದಿಕೆಯ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ಮದವೋ, ದುರಹಂಕಾರವೋ, ವಿಫಲ ಸರ್ಕಾರ ಮುನ್ನಡೆಸುತ್ತಿರುವ ಹತಾಶೆಯೋ, ಅಥವಾ ಇಷ್ಟರಲ್ಲೇ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ಕಾತಾಳವೋ, ಅದನ್ನು ನಿಮ್ಮ ಆತ್ಮಾವಲೋಕನಕ್ಕೆ ಬಿಡುತ್ತೇನೆ” ಎಂದಿದ್ದಾರೆ.
“ನಿಮ್ಮ ಯಡವಟ್ಟುಗಳಿಂದ ಪ್ರತಿ ದಿನ ಒಂದಲ್ಲ ಒಂದು ಒಂದು ರೀತಿ ತಮ್ಮ ಸರ್ಕಾರಕ್ಕೆ, ವೈಯಕ್ತಿಕವಾಗಿ ತಮಗೆ ಕೆಟ್ಟ ಹೆಸರು ಬರುತ್ತಲೇ ಇದೆ. ಇನ್ನಾದರೂ ಈ ಭಂಡ ಬಾಳು ಬಿಡಿ. ಅಧಿಕಾರದ ವ್ಯಾಮೋಹ ಬಿಟ್ಟು ರಾಜನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ. ನಿವೃತ್ತಿಯ ಅಂಚಿನಲ್ಲಿ ಖಳನಾಯಕನಾಗಿ ಇತಿಹಾಸದ ಪುಟ ಸೇರುವುದಕ್ಕಿಂತ, ಗೌರವದಿಂದ ಕುರ್ಚಿ ತ್ಯಾಗ ಮಾಡುವುದು ನಿಮಗೂ ಒಳಿತು, ರಾಜ್ಯಕ್ಕೂ ಒಳಿತು” ಎಂದು ಹೇಳಿದ್ದಾರೆ.