– ರಾಜ್ಯಕ್ಕೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಖಾಸಗಿಗಿಂತ ಬಲಿಷ್ಠವಾಗಿದೆ
– ಸಂಪುಟ ಸಭೆಯಲ್ಲಿ ವಿಚಾರ ಪ್ರಸ್ತಾಪಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು
ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಬಲಿಷ್ಠವಾಗಿದ್ದು, ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್ ಗಳ ಒಕ್ಕೂಟ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇಂಧನ ಸಚಿವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಟಾಟಾ ಪವರ್ ಕಂಪನಿಯು ಕರ್ನಾಟಕದಲ್ಲಿ ವಿದ್ಯುತ್ ಸರಬರಾಜು (ವಿತರಣೆ) ಮಾಡಲು ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಕ್ಕೆ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, “ಇಂಧನ ಇಲಾಖೆ ಬಲಿಷ್ಠವಾಗಿದೆ. ನಮ್ಮ ಸರ್ಕಾರ ನಿಮ್ಮ (ನೌಕರರ) ಪರವಾಗಿದೆ. ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ದೇಶನ ನೀಡಲಾಗಿದ್ದು, ಅದರಂತೆ ಎಸ್ಕಾಂಗಳು ಕೆಇಆರ್ ಸಿ ಮುಂದೆ ಆಕ್ಷೇಪಣೆ ಸಲ್ಲಿಸಿವೆ. ನಾವು ಯಾವುದೇ ಖಾಸಗಿ ಕಂಪನಿಗೆ ಕಡಿಮೆ ಇಲ್ಲ. ನೌಕರರು ಮತ್ತು ಅಧಿಕಾರಿಗಳ ಬೇಡಿಕೆಗಳಿಗೆ ಸ್ಪಂದಿಸಲಿದ್ದೇವೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಜರುಗಿಸಲಾಗುವುದು. ನಾವು ರಾಜ್ಯದ ಸೇವೆ ಮಾಡಲು ಬಂದವರು. ಇಲ್ಲಿ ಖಾಸಗೀಕರಣ ವಿಚಾರ ಬರುವುದಿಲ್ಲ,” ಎಂದು ಸ್ಪಷ್ಟಪಡಿಸಿದರು.
“ಇಂಧನ ಇಲಾಖೆ ಈಗಾಗಲೇ ದೂರದೃಷ್ಟಿಯ ಯೋಜನೆಗಳನ್ನು ಸಿದ್ದಪಡಿಸಿದೆ, ಮುಂದಿನ 25 ವರ್ಷಗಳ ಅವಧಿಗೆ ವಿದ್ಯುತ್ ಭ್ರದತೆ ಒದಗಿಸಲು ಯೋಜನೆ ಸಿದ್ದವಾಗಿದೆ. ರೈತರ ಜತೆಗೆ 10,000 ಎಕರೆಯಲ್ಲಿ ಸೌರ ಪಾರ್ಕ್ ಮಾಡಿದ್ದೇವೆ. ರೈತರು ಇನ್ನೂ 10,000 ಎಕರೆ ಕೊಡಲು ಮುಂದೆ ಬಂದಿದ್ದಾರೆ. ವಿದ್ಯುತ್ ಉತ್ಪಾದನೆ ಅತ್ಯುತ್ತಮವಾಗಿದೆ. ಪೀಕ್ ಅವರ್ ವಿದ್ಯುತ್ ಮಾರಾಟವನ್ನು ಹೆಚ್ಚಿಸಿರುವುದರಿಂದ ಇಲಾಖೆಗೆ ಲಾಭವಾಗಿದೆ. ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆಯುವುದು ಮತ್ತು ದೀರ್ಘಾವಧಿ ಒಪ್ಪಂದಗಳ ಮೂಲಕ ವಿದ್ಯುತ್ ಖರೀದಿ ಮೂಲಕ ಇಂಧನ ಭದ್ರತೆಗೆ ಕ್ರಮ ವಹಿಸಲಾಗಿದೆ,” ಎಂದರು.
“ಗೃಹಜ್ಯೋತಿ ಮೂಲಕ 1.67 ಕೋಟಿ ಗ್ರಾಹಕರಿಗೆ ಉಚಿತ ವಿದ್ಯುತ್ ಕೊಟ್ಟಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲೇ ಅನುದಾನ ನೀಡಲಾಗಿದೆ. ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಸಲು 21,000 ಕೋಟಿ ರೂ. ಅನುದಾನ ಕೊಡುತ್ತಿದ್ದೇವೆ. ನಮ್ಮ ಅಧಿಕಾರಿಗಳು, ಇಂಜಿನಿಯರ್ ಮತ್ತು ನೌಕರರು ತಂಡವಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಸಮಸ್ಯೆ ಎದುರಾದರೆ ಶೀಘ್ರವೇ ಪರಿಹಾರ ನೀಡಲಿದ್ದಾರೆ,” ಎಂದು ಹೇಳಿದರು.
“ಇಂಧನ ಇಲಾಖೆಯಲ್ಲಿ ಮೂಲ ಸೌಕರ್ಯ ಹೆಚ್ಚಿಸುವ ಕಾರ್ಯ ವೇಗವಾಗಿ ನಡೆಯುತ್ತಿದೆ. 120 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯೋಜನೆಗಳು ಜಾರಿಯಾಗಲಿವೆ. ಆ ಮೂಲಕ ವಿದ್ಯುತ್ ಪೂರೈಕೆಯನ್ನು ಸಮರ್ಪಕಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ,” ಎಂದು ತಿಳಿಸಿದರು.
ಅಭಿನಂದನಾ ಕಾರ್ಯಕ್ರಮದಲ್ಲಿ ಸೆಸ್ಕ್ ಅಧ್ಯಕ್ಷ ರಮೇಶ್ ಬಂಡೀಸಿದ್ದೇಗೌಡ, ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜಂಪೀರ್ ಖಾದ್ರಿ, ಮೆಸ್ಕಾಂ ಆಧ್ಯಕ್ಷ ಹರೀಶ್ ಕುಮಾರ್, ಜೆಸ್ಕಾಂ ಆಧ್ಯಕ್ಷ ಪ್ರವೀಣ್ ಪಾಟೀಲ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ರಾಮ್ ಪ್ರಸಾತ್ ಮನೋಹರ್, ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಡಾ.ಅರ್ಚನಾ ಎಂ.ಎಸ್., ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್. ಜಯಕುಮಾರ್, ಒಕ್ಕೂಟದ ಅಧ್ಯಕ್ಷ ಕೆ.ಬಲರಾಮ್, ಕಾರ್ಯದರ್ಶಿ ಶಿವರಾಮ್, ಕೆಪಿಟಿಸಿಎಲ್ ಇಂಜಿನಿಯರ್ಗಳ ಸಂಘದ ಅಧ್ಯಕ್ಷರಾಗಿ ಬಸವಣ್ಣ ಸಿ. ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.


