ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಶಕ್ತಿ ತುಂಬುವ, ಮಹಿಳೆಯರಿಗೆ ಅತಿಹೆಚ್ಚು ಅನುಕೂಲ ಮಾಡಿಕೊಡುವ ನಾರಿಶಕ್ತಿ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬಣ್ಣಿಸಿದರು.
ಸತತ 7ನೇ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸಿ, ಕೇಂದ್ರ ಬಜೆಟ್ ಬಗ್ಗೆ ಎಕ್ಸ್ ತಾಣದಲ್ಲಿ ಅಭಿಪ್ರಾಯ ಹಂಚಿಕೊಂಡ ಅವರು, “9 ಆದ್ಯತಾ ವಲಯಗಳನ್ನು ಗುರುತಿಸಲಾಗಿದೆ. ಆ ಪೈಕಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ ಅನುದಾನ ನೀಡಿ 4 ಕೋಟಿ ಉದ್ಯೋಗ ಸೃಷ್ಟಿಸುವ ಗುರಿ ಮಾನವ ಸಂಪನ್ಮೂಲ ಸದ್ಬಳಕೆಗೆ ಆದ್ಯತೆ ಕೊಡಲಾಗಿದೆ. ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಣ್ಣ, ಮಧ್ಯಮ ಗಾತ್ರದ ಕೈಗಾರಿಗಳಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಉಪಕ್ರಮ ಈ ಬಜೆಟ್ನಲ್ಲಿದೆ” ಎಂದಿದ್ದಾರೆ.
“ಇದು ದೂರದೃಷ್ಟಿಯುಳ್ಳ ದೂರಗಾಮಿ ಬಜೆಟ್. ಕೃಷಿ, ಕೈಗಾರಿಕೆ, ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ. ಉತ್ಪಾದನೆಗೂ ಗಮನ ಕೊಡಲಾಗಿದೆ. ಬೆಂಗಳೂರು – ಚೆನ್ನೈ, ಹೈದರಾಬಾದ್ -ಬೆಂಗಳೂರು, ಬೆಂಗಳೂರು ಸೇರಿ ಒಟ್ಟು 12 ಕೈಗಾರಿಕಾ ಕಾರಿಡಾರ್ ಗಳನ್ನು ಘೋಷಣೆ ಮಾಡುವುದು ಉದ್ಯೋಗ, ಆರ್ಥಿಕ ವೃದ್ಧಿಗೆ ಬೃಹತ್ ಕೊಡುಗೆ ನೀಡಲಿದೆ” ಎಂದು ಹೇಳಿದ್ದಾರೆ.
“ಹೆಚ್ಚುತ್ತಿರುವ ಆಹಾರ ಬೇಡಿಕೆಯ ಪೂರೈಕೆ ಹಾಗೂ ಕೃಷಿಗೆ ಮತ್ತಷ್ಟು ಚೈತನ್ಯ ತುಂಬಲು ಕೃಷಿ ಸಂಶೋಧನೆ & ಅಭಿವೃದ್ಧಿಗೆ ಬಿಜೆಟ್ ಆದ್ಯತೆ ಕೊಟ್ಟಿದೆ. ಕೃಷಿ ಬೆಳೆಯ ಡಿಜಿಟಲ್ ಸಮೀಕ್ಷೆ ಮಾಡುವ ಯೋಜನೆಯನ್ನು ದೇಶದ 400 ಜಿಲ್ಲೆಗಳಿಗೆ ವಿಸ್ತರಿಸುವುದು ಸ್ವಾಗತಾರ್ಹ. ಮೇಲಾಗಿ ಸಹಜ ಕೃಷಿಗೆ ವಿತ್ತ ಸಚಿವರು ಪ್ರಾಮುಖ್ಯತೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.
“ಸಂಶೋಧನೆ, ಆವಿಷ್ಕಾರಕ್ಕೆ ಬಜೆಟ್ ಅತಿಹೆಚ್ಚು ಒತ್ತು ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಸ್ಪರ ಸಹಯೋಗದಿಂದ ಕೈಗಾರಿಕಾಭಿವೃದ್ಧಿಗೆ ಆದ್ಯತೆ ನೀಡುವುದು ಅಭಿವೃದ್ಧಿಗೆ ದೂರಗಾಮಿ ಕೊಡುಗೆ ನೀಡುವ ಉಪಕ್ರಮವಾಗಿದೆ. ರಾಜ್ಯಗಳಿಗೆ 50 ವರ್ಷಗಳ ಬಡ್ಡಿರಹಿತ ಸಾಲ ನೀಡುವ ಘೋಷಣೆ ಸ್ವಾಗತಾರ್ಹ. ಇದು ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ” ಎಂದು ಹೇಳಿದ್ದಾರೆ.