ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಗಂಭೀರತೆಯನ್ನು ಸರ್ಕಾರವು ಪರಿಗಣಿಸಿ, ಈ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಆದೇಶಿಸಿದೆ.
ವಾಲ್ಮೀಕಿ ನಿಗಮದ ತನಿಖೆಗೆ ರಚಿಸಿರುವ ಎಸ್ಐಟಿಗೆ ಸಿಐಡಿಯ ಅಪರ ಪೊಲೀಸ್ ನಿರ್ದೇಶಕ ಮನೀಷ್ ಖರ್ಬೀಕರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಬೆಂಗಳೂರು ನಗರದ ಸಂಚಾರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜು, ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹಾಗೂ ಸಿಐಡಿಯ ಪೊಲೀಸ್ ಅಧೀಕ್ಷಕ ರಾಘವೇಂದ್ರ ಕೆ ಹೆಗಡೆ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕರಾಗಿದ್ದ ಚಂದ್ರಶೇಖರ್ ಪಿ ಅವರು ವಾಲ್ಮೀಕಿ ನಿಗಮದಲ್ಲಿ ಅನುದಾನ ಹಣವು ದುರುಪಯೋಗವಾಗಿರುವುದಾಗಿ ಆರೋಪಿಸಿ ಡೆತ್ ನೋಟ್ ಬರೆದು ಮೇ 26ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಮೃತರ ಪತ್ನಿಯು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ವಾಲ್ಮೀಕಿ ನಿಗಮದ ಮುಖ್ಯ ನಿಬಂಧಕರಾದ ಎ. ರಾಜಶೇಖರ್ ರವರು ಅನುದಾನ ಹಣವು ಬ್ಯಾಂಕ್ ಮೂಲಕ ದುರ್ಬಳಕೆಯಾಗಿರುವುದಾಗಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ನಗರದ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ಚಂದ್ರಶೇಖರ್ ಡೆತ್ ನೋಟ್ನಲ್ಲಿ ತಮ್ಮ ಸಾವಿಗೆ ಕಾರಣ ತಿಳಿಸಿ ಮೂವರು ಉನ್ನತ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ಈ ಆಧಾರದ ಮೇಲೆ ಶಿವಮೊಗ್ಗ ಪೊಲೀಸರು ಮೂವರು ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ವಾಲ್ಮೀಕಿ ನಿಗಮದ ಎಂಡಿ ಜೆ ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಲಾಗಿದೆ.