ವಾಲ್ಮೀಕಿ ನಿಗಮದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದಲ್ಲಿ ನಕಲಿ ಖಾತೆ ತೆರೆದಿದ್ದ ಆರೋಪಿ ಸತ್ಯನಾರಾಯಣ ವರ್ಮನನ್ನು ಎಸ್ಐಟಿ ತಂಡ ಹೈದರಾಬದ್ನಲ್ಲಿ ಬಂಧಿಸಿದೆ.
ಅಕೌಂಟ್ ನಂಬರ್ ಪರಿಶೀಲನೆ ವೇಳೆ ನಕಲಿ ಖಾತೆ ತೆರೆದಿರುವುದು ಖಚಿತವಾಗಿತ್ತು. ಇದನ್ನು ಬೆನ್ನಟ್ಟಿ ನಕಲಿ ಖಾತೆ ತೆರೆದ ವ್ಯಕ್ತಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಎಸ್ಐಟಿ ಆರೋಪಿ ಪತ್ತೆಗೆ ಬಲೆ ಬೀಸಿತ್ತು. ಬಂಧಿತ ಆರೋಪಿ ವಿವಿಧ ಕಂಪೆನಿಗಳ ಹೆಸರಿನಲ್ಲಿ 18 ಬ್ಯಾಂಕ್ ಖಾತೆ ತೆರೆದಿದ್ದ. ಎಲ್ಲ 18 ಬ್ಯಾಂಕ್ ಖಾತೆಗಳಿಗೂ ವಾಲ್ಮೀಕಿ ನಿಗಮದಿಂದ ಹಣ ವರ್ಗಾವಣೆ ಆಗಿದೆ.
ಬಂಧಿತ ಆರೋಪಿ ಸತ್ಯನಾರಾಯಣ ಬಳಿಯಿಂದ 16 ಕೆಜಿ ಚಿನ್ನ, 10 ಕೋಟಿ ನಗದನ್ನು ಎಸ್ಐಟಿ ಜಪ್ತಿ ಮಾಡಿದೆ. ಬುಧವಾರ ಸತ್ಯನಾರಾಯಣನನ್ನು ಎಸ್ಐಟಿ ತಂಡ ಬೆಂಗಳೂರಿಗೆ ಕರೆತರಲಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು. ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಯಿಂದ ಇದೆಲ್ಲ ಬೆಳಕಿಗೆ ಬಂದಿದೆ.
ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಈಗಾಗಲೇ ಎಸ್ಐಟಿ ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದೆ.