ವಾಲ್ಮೀಕಿ ನಿಗಮ ಹಗರಣದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಹಗರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪ್ರತಿಪಾದಿಸುತ್ತಲೇ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಬಿ. ನಾಗೇಂದ್ರ, ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ನೀಡಿದರೆ ಅದನ್ನು ಸ್ವಾಗತಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಸದನದಲ್ಲಿ ನನ್ನ ರಾಜೀನಾಮೆಗೆ ಆಗ್ರಹಿಸಿ ಇಡೀ ಅಧಿವೇಶನವನ್ನೇ ಹಾಳು ಮಾಡಿದರು. ರಾಜ್ಯದಲ್ಲಿನ ಬರ ಪರಿಸ್ಥಿತಿ, ಕಸ್ತೂರಿ ರಂಗನ್ ಕರಡು ಅಧಿಸೂಚನೆಯ ಸಂಕಷ್ಟ ಸೇರಿದಂತೆ ಜನರನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳು ಅವರ ಕಣ್ಣಿಗೆ ಕಾಣಲೇ ಇಲ್ಲ. ಮನುಸ್ಮೃತಿ ಪಾಲಿಸುವ ಅವರಿಗೆ ಸಂವಿಧಾನದ ಆಶಯಗಳೇ ಬೇಕಿಲ್ಲ ಎಂದು ದೂರಿದರು.
ವಾಲ್ಮೀಕಿ ನಿಗಮದ ಹಗರಣದಲ್ಲಿ ಆರೋಪ ಬಂದಾಗ ಅಂದು ನಾನೇ ಸ್ವಯಂ ರಾಜೀನಾಮೆ ನೀಡಿದ್ದೆ. ಅಂದು ರಾಜ್ಯದ ತನಿಖಾ ಸಂಸ್ಥೆಗಳು ಆರೋಪ ಮುಕ್ತ ಮಾಡಿವೆ. ಅದರೆ, ಬಿಜೆಪಿ ನಾಯಕರು ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಹಗರದಲ್ಲಿ ಮತ್ತೆ ಸಿಲುಕಿಸುವ ಪ್ರಯತ್ನ ಮಾಡಿವೆ ಎಂದು ಆರೋಪಿಸಿದರು.
ಈ ಮಧ್ಯೆ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಸ್ವಾಗತಿಸಿರುವ ಪ್ರತಿಪಕ್ಷ ಬಿಜೆಪಿ, ಇದು ಬಿಜೆಪಿ ನಡೆಸಿದ ಸಂಘಟಿತ ಹೋರಾಟಕ್ಕೆ ಸಂದ ಜಯ ಎಂದು ಬಣ್ಣಿಸಿದೆ. ಈ ಕುರಿತು ತನ್ನ ಅಧಿಕೃತ ಎಕ್ಸ್ ಅಕೌಂಟ್ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧದ ತನ್ನ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದೆ.


