ಎಸ್ಐಟಿ ವಶದಲ್ಲಿರುವ ವ್ಯಕ್ತಿಗಳ ಮುಖವನ್ನೇ ನಾನು ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧ ಇಲ್ಲ. ಎಸ್ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದು ನನಗೂ ಗೊತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಹೇಳಿದರು.
ಮೇ 24ರಂದು ವಿಕಾಸಸೌಧದ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ಸೇರಿದಂತೆ ಕೆಲವರ ಜೊತೆ ಸಭೆ ನಡೆಸಿ ಸಾಕ್ಷ್ಯ ನಾಶ ಮಾಡಿರುವ ಆರೋಪ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಊಹಾಪೋಹಗಳಿಗೆ ನಾನೇಕೆ ಉತ್ತರ ಕೊಡಲಿ?” ಎಂದರು.
“ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ನಾನು ಆ ದಿನ ಕಚೇರಿಗೆ ಭೇಟಿ ನೀಡಿರಲಿಲ್ಲ. ಆದರೂ ನಾನು ಕಚೇರಿಯಲ್ಲಿ ಇದ್ದೆ ಎಂದರೆ, ಅದಕ್ಕಿಂತ ಅಪಹಾಸ್ಯ ಇನ್ನೇನಿದೆ” ಎಂದು ಆರೋಪಗಳನ್ನು ತಳ್ಳಿ ಹಾಕಿದರು.
“ವಾಲ್ಮೀಕಿ ಅಭಿವೃದ್ಧಿ ನಿಗಮದ ಸಾಕ್ಷ್ಯ ನಾಶಗಳ ಕುರಿತಾಗಿ ನನ್ನ ಕಚೇರಿಯಲ್ಲಿ ಯಾವುದಾದರೂ ವ್ಯಕ್ತಿಗಳ ಜೊತೆ ನಾನು ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧ. ಸುಳ್ಳು ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ” ಎಂದರು.
“ಅಷ್ಟಕ್ಕೂ ವಿಕಾಸಸೌಧದ ಕೊಠಡಿ ಸರ್ಕಾರ ನೀಡಿರುವ ಕಚೇರಿ. ಅದು ನನ್ನ ಸ್ವಂತ ಮನೆಯೇನೂ ಅಲ್ಲ. ನಾನು ಸಚಿವನಾಗಿರುವುದರಿಂದ ನನ್ನನ್ನು ನೋಡಲು ರಾಜ್ಯದ ವಿವಿಧ ಭಾಗಗಳಿಂದ ನೂರಾರು ಜನ ಬಂದು ಹೋಗುತ್ತಾರೆ. ಬಂದು ಹೋಗುವವರ ಪೂರ್ಣ ವಿವರಗಳನ್ನು ಕಲೆ ಹಾಕಲು ಸಾಧ್ಯವೇ” ಎಂದು ಪ್ರಶ್ನಿಸಿದರು.