Homeಕರ್ನಾಟಕಶತ್ರು ಭೈರವಿ ಯಾಗ ಮಾಡಿ ನಾವು ಗೆದ್ದಿಲ್ಲ: ಎಚ್‌ ಡಿ ಕುಮಾರಸ್ವಾಮಿ ವ್ಯಂಗ್ಯ

ಶತ್ರು ಭೈರವಿ ಯಾಗ ಮಾಡಿ ನಾವು ಗೆದ್ದಿಲ್ಲ: ಎಚ್‌ ಡಿ ಕುಮಾರಸ್ವಾಮಿ ವ್ಯಂಗ್ಯ

ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು.

ಮಂಡ್ಯ ಲೋಕಸಭೆ ಫಲಿತಾಂಶದ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

“ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ಈ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ” ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.

“ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಕಿದರು.

“ಮಂಡ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಜನರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿ ಅಧಿಕಾರ ದುರುಪಯೋಗ ಮಾಡಿಕೊಂಡರು ಜನರು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಪ್ರೀತಿ, ವಿಶ್ವಾಸಕ್ಕೆ ಮನ್ನಣೆ ನೀಡಿದ್ದಾರೆ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಮಂಡ್ಯ ಯಾವತ್ತೂ ನನ್ನ ಕೈ ಬಿಡಲ್ಲ, ಬಿಡುವುದೂ ಇಲ್ಲ” ಎಂದರು.

“ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಶ್ರಮದಿಂದ ಅಲ್ಲಿಯೂ ನಮ್ಮ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಜಯ ಗಳಿಸಿದ್ದಾರೆ. ಜನರು ನಮ್ಮನ್ನು ಆಶೀರ್ವದಿಸಿದ್ದಾರೆ. ಅವರು ಇಟ್ಟಿರುವ ನಂಬಿಕೆಯನ್ನು ಹುಸಿ ಮಾಡುವುದಿಲ್ಲ. ನಾಡಿನ ಅಭಿವೃದ್ಧಿಗಾಗಿ ಮೋದಿ ಅವರ ಜತೆಗೂಡಿ ಕೆಲಸ ಮಾಡುತ್ತೇವೆ” ಎಂದು ತಿಳಿಸಿದರು.

ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಅವರು ಸೋತಿರುವ ಬಗ್ಗೆ ಪ್ರತಿಕ್ರಿಯಿಸಿ, “ರಾಜಕೀಯ ಷಡ್ಯಂತ್ರದಿಂದ ಹಾಸನ ಸೋತಿದ್ದೇವೆ” ಎಂದಷ್ಟೇ ಹೇಳಿದರು.

ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಜೆಡಿಎಸ್ ಮಹಿಳಾ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಮೊದಲಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments