ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.
ಅವರು ಇಂದು (ನ.4) ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ. ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ ಎಂದು ಜನರಿಗೆ ಅರ್ಥವಾಗಿದೆ” ಎಂದರು.
“ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟಿಸ್ ಹಿಂಪಡೆಯಲಾಗಿದೆ. ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್ ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಹಣಕಾಸು ಆಯೋಗ ಶಿಫಾರಸು ಮಾಡಿದ್ದ ವಿಶೇಷ ಅನುದಾನ ನೀಡಿದ್ದರೆ ರಾಜಕೀಯ ಬಿಟ್ಟುಬಿಡುವೆ
“11,495 ಕೋಟಿ ರೂಪಾಯಿಗಳನ್ನು ಕೇಂದ್ರ ಕೊಟ್ಟಿದಿಯಾ? ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ. ಪ್ರಲ್ಹಾದ್ ಜೋಶಿ ಬಿಡುತ್ತಾರೆಯೇ ಕೇಳಿ” ಎಂದು ಪ್ರಶ್ನಿಸಿದರು.
“ವಕ್ಫ್ ವಿಚಾರದಲ್ಲಿ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಹೇಳಿದ ಮೇಲೂ ಬಿಜೆಪಿ ಹೋರಾಟ ಮಾಡುತ್ತಿದೆ ಎಂದರೆ ರಾಜಕೀಯ ಅಲ್ಲವೇ? ಬಿಜೆಪಿಯವರು ಯಾವಾಗಲೂ ನೈಜ ವಿಷಯಗಳನ್ನು ಬಿಟ್ಟು ಸುಳ್ಳು ಆರೋಪಗಳನ್ನು ಮಾಡುವುದು, ರಾಜಕಾರಣಕ್ಕಾಗಿ ಪ್ರತಿಭಟನೆ ಮಾಡುತ್ತಾರೆ” ಎಂದರು.
ಪ್ರತಾಪ್ ಸಿಂಹ ಮಹಾನ್ ಕೋಮುವಾದಿ
ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿಗಳು ಸಂಪೂರ್ಣ ಮುಸ್ಲಿಂ ಆಗಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, “ಅವರೊಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ ಎಂದರು. ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ
ಕೋಮುವಾದ ಮಾಡುವುದೇ ಅವರ ಕಸುಬು. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ. ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗೂ ಮತ ಪಡೆಯಲು ಪ್ರಯತ್ನ ಮಾಡುತ್ತಾರೆ” ಎಂದರು.