ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರಿಗೆ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಮೈಸೂರು ದಸರಾ ವೇದಿಕೆಯಲ್ಲೇ ತಿರುಗೇಟು ನೀಡಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಮುಡಾ ಪ್ರಕರಣದಲ್ಲಿ ಯಾರೆಲ್ಲರ ವಿರುದ್ಧ ಎಫ್ಐಆರ್ ದಾಖಲಾಗಿದೆಯೋ ಎಲ್ಲರೂ ರಾಜೀನಾಮೆ ಕೊಡಲಿ” ಎಂದು ಆಗ್ರಹಿಸಿದರು.
“ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ಧಿ ಕೊಡಲಿ. ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂದು ವಾದಿಸುತ್ತಾ ಹೋದರೆ ರಾಜ್ಯದಲ್ಲಿ ಎಲ್ಲ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾದೀತು. ಹಾಗೆ ಮಾಡಲು ಸಾಧ್ಯವೇ” ಎಂದು ಪ್ರಶ್ನಿಸಿದರು.
“ಈಗಾಗಲೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿದ್ದಾರಲ್ಲಾ? ಮುಡಾ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಎಲ್ಲದಕ್ಕೂ ಸಹ ಸಿಎಂ ಸಿದ್ದರಾಮಯ್ಯ ಕಾರಣ ಅಲ್ಲ. ಕಾನೂನುಬದ್ಧವಾಗಿ 50:50 ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡಲಾಗಿದೆ. ಎಫ್ಐಆರ್ ದಾಖಲಾದ ತಕ್ಷಣ ರಾಜೀನಾಮೆ ಅಗತ್ಯವಿಲ್ಲ” ಎಂದು ಜಿ ಟಿ ದೇವೇಗೌಡ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಏಳುಬೀಳುಗಳನ್ನು ಸ್ವಾರಸ್ಯಕರವಾಗಿ ಸ್ಮರಿಸಿ, “ಮೈಸೂರಿನ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಬೇಕು” ಎಂದು ಕೋರಿದರು.
ಕಾರ್ಯಕ್ರಮದ ಕೊನೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಬೇರೆ ಪಕ್ಷದಲ್ಲಿದ್ದುಕೊಂಡೇ ಶಾಸಕ ಜಿ ಟಿ ದೇವೇಗೌಡರು ಸತ್ಯವನ್ನು ಹೇಳಿದ್ದಾರೆ. ಅವರು ಮುಡಾ ಸದಸ್ಯರು. ಸತ್ಯಕ್ಕೇ ಸದಾ ಜಯ. ಈ ವರ್ಷವೂ ಐದು ವರ್ಷ ಮುಖ್ಯಮಂತ್ರಿಯಾಗಿ ಅವಧಿ ಪೂರೈಸುವೆ. ಚಾಮುಂಡೇಶ್ವರಿ ಹಾಗೂ ಜನರ ಆಶೀರ್ವಾದ ಇರುವವರೆಗೂ ಯಾರೂ ಏನೂ ಮಾಡಲಾಗದು” ಎಂದರು.