ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂದೆ ಮಂಗಳವಾರ ಆಯೋಜಿಸಿದ್ದ ಮ್ಯಾರಥಾನ್ ಅನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಉದ್ಘಾಟಿಸಿದರು.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾತನಾಡಿ, “ಪ್ರಕೃತಿ ನಮಗೆ ನೀಡಿರುವ ಸಕಲ ಸಂಪನ್ಮೂಲದ ಹಿತ -ಮಿತ ಬಳಕೆ ಇಂದಿನ ಅಗತ್ಯವಾಗಿದೆ. ನಮ್ಮ ಪೂರ್ವಜರು ನೈಸರ್ಗಿಕ ಸಂಪನ್ಮೂಲವನ್ನು ಹಿತ-ಮಿತವಾಗಿ ಬಳಸುತ್ತಿದ್ದರು, ಆದರೆ ಇಂದು ನಾವು ಐಷಾರಾಮಿ ಜೀವನಕ್ಕಾಗಿ ಅತಿಯಾಗಿ ಸಂಪನ್ಮೂಲ ಬಳಸುತ್ತಿದ್ದು, ಪರಿಸರ ನಾಶವಾಗುತ್ತಿದೆ” ಎಂದರು.
“ಇಂದು ಜಗತ್ತಿನ ಮುಂದಿರುವ ದೊಡ್ಡ ಸವಾಲು ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆ ಆಗಿದೆ. ಇದಕ್ಕೆ ವೃಕ್ಷ, ಅರಣ್ಯ ನಾಶ ಹಾಗೂ ನಮ್ಮ ಜೀವನ ಶೈಲಿಯೇ ಕಾರಣವಾಗಿದೆ. ಪ್ರತಿಯೊಬ್ಬರೂ ವೃಕ್ಷ ನೆಟ್ಟು ಹಸಿರು ಹೊದಿಕೆ ಹೆಚ್ಚಿಸಿದರೆ ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಬಹುದು” ಎಂದು ಹೇಳಿದರು.
ಏಕ ಬಳಕೆ ಪ್ಲಾಸ್ಟಿಕ್ ಬಳಸದಿರಲು ಸಂಕಲ್ಪ ಮಾಡಿ
“ಏಕ ಬಳಕೆ ಪ್ಲಾಸ್ಟಿಕ್ ನಿಂದ ತಯಾರಿಸಿದ ಉತ್ಪನ್ನಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ರಾಜ್ಯ ಸರ್ಕಾರವೂ ಆದೇಶ ನೀಡಿದೆ. ಆದರೂ ಏಕ ಬಳಕೆ ಪ್ಲಾಸ್ಟಿಕ್ ಹಾವಳಿ ನಿಂತಿಲ್ಲ. ಏಕ ಬಳಕೆ ಪ್ಲಾಸ್ಟಿಕ್ ಬಳಸುವುದಿಲ್ಲ ಎಂದು ನಾವೆಲ್ಲ ಸಂಕಲ್ಪ ಮಾಡಬೇಕು” ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ, ಶಾಸಕ ರಿಜ್ವಾನ್ ಅರ್ಷದ್ ಮತ್ತಿತರರು ಪಾಲ್ಗೊಂಡಿದ್ದರು.